ಮಂಡ್ಯದಲ್ಲಿ ಪ್ರಭಾವಿ ನಾಯಕರ ಸ್ಪರ್ಧೆ? ಕೇಳಿ ಬರುತ್ತಿದೆ ಡಿಕೆಶಿ, ಎಚ್ಡಿಕೆ, ಸುಮಲತಾ, ಅಶೋಕ್ ಹೆಸರು- ಏನಿದು ಕೌತುಕದ ವರದಿ
2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರೀ ಮಂಡ್ಯ ವಿಧಾನಸಭಾ ಕ್ಷೇತ್ರ ಘಟಾನುಘಟಿ ನಾಯಕರ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಸುಮಲತಾ ಅವರ ರಾಜಕೀಯ ಎದುರಾಳಿಯಾಗಿರುವ ನಾಯಕರು ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದ ವದಂತಿಗಳು ಕೇಳಿ ಬಂದಿವೆ.
ಮಂಡ್ಯ,ಫೆಬ್ರವರಿ7: 2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರೀ ಮಂಡ್ಯ ವಿಧಾನಸಭಾ ಕ್ಷೇತ್ರ ಘಟಾನುಘಟಿ ನಾಯಕರ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಈ ಹಿಂದೆ 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇಡೀ ಇಂಡಿಯಾವೇ ಮಂಡ್ಯ ಚುನಾವಣಾ ಕಣದ ಮೇಲೆ ಕಣ್ಣು ಇಟ್ಟಿತ್ತು. ಆದರೆ ಈ ಬಾರೀ ಹಲವು ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ಸಕ್ಕರೆ ನಾಡು ಮಂಡ್ಯ ಪ್ರತಿಷ್ಠೆಯ ಕಣವಾಗಲಿದೆ.
ಹೌದು, ಮಂಡ್ಯ ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಾರೆ ಎನ್ನುವ ಸುದ್ದಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಸ್ಥಳೀಯ ನಾಯಕರೊಂದಿಗೆ ಸಾಕಷ್ಟು ಸಭೆಗಳನ್ನ ನಡೆಸುತ್ತಿರುವ ಸುಮಲತಾ ಈಗಾಗಲೇ ಕಾರ್ಯಕರ್ತರು ಬಯಸಿದರೆ ರಾಜ್ಯ ರಾಜಕಾರಣಕ್ಕೆ ಬರುವುದಾಗಿ ಹೇಳಿಕೊಂಡಿದ್ದು, ಚುನಾವಣೆಯ ಸಮಯದಲ್ಲಿ ಬಿಜೆಪಿಯನ್ನ ಸೇರಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುಮಲತಾ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕೀಯಕ್ಕೆ ಎಂಟ್ರಿಯಾಗುತ್ತಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯ ಮಂತ್ರಿ ಎಚ್ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆಯ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಮಂಡ್ಯ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಕುಮಾರಸ್ವಾಮಿ ಸ್ಪರ್ಧೆ?
ರಾಜ್ಯ ರಾಜಕೀಯಕ್ಕೆ ಬಂದರೆ ಮಂಡ್ಯ ಅಭಿವೃದ್ಧಿಯಾಗಲಿದೆ ಎನ್ನುವುದು ಅಭಿಮಾನಿಗಳ ಅಭಿಪ್ರಾಯ ಎಂದು ಸುಮಲತಾ ಅವರು ಹೇಳಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸುಮಲತಾ ಅಂಬರೀಶ್ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇನ್ನೂ ಸಾಕಷ್ಟು ಕುತೂಹಲ ಹುಟ್ಟಿಸಿರುವ ವಿಚಾರ ಎಂದರೇ ರಾಜಕೀಯ ಎದುರಾಳಿಯಾಗಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಈ ಬಾರೀ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸುತ್ತಾರೆ ಎಂಬ ವದಂತಿಗಳು ಕೇಳಿ ಬಂದಿದೆ.
ಸುಮಲತಾ ಅವರು ಬಿಜೆಪಿ ಪಕ್ಷವನ್ನ ಸೇರುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಒಂದೊಮ್ಮೆ ಸುಮಲತಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾದರೇ ಅದೇ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆಂಬ ಮಾತುಗಳು ಕೇಳಿ ಬಂದಿವೆ.

ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಪರ್ಧೆ.?
ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಲೋಕಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿರುವ ವಿಚಾರವನ್ನ ಸುಮಲತಾ ಪ್ರಸ್ತಾಪಿಸಿದ್ದು, ಡಿ ಕೆ ಶಿವಕುಮಾರ್ ಹಾಗೂ ಸಂಸದೆ ಸುಮಲತಾ ನಡುವೆ ಟೀಕೆ ಟಿಪ್ಪಣಿಗಳಿಗೆ ಹೆಚ್ಚಾಗಿದ್ದವು. ಇತ್ತ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಮೂರು ಪಕ್ಷಗಳು ಮಂಡ್ಯ ಕ್ಷೇತ್ರವನ್ನ ತನ್ನ ಹಿಡಿತವನ್ನ ಸಾಧಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ತಯಾರಿಯನ್ನ ನಡೆಸಿವೆ. ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮದ್ದೂರಿನ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಆದರೇ ಇದಕ್ಕೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ನಕ್ಕು ಸುಮ್ಮನಾಗಿದ್ದಾರೆ. ಈಗಾಗಲೇ ಕನಕಪುರ ಶಾಸಕರಾಗಿರುವ ಶಿವಕುಮಾರ್ ಅವರು ತಾವು ಪ್ರತಿನಿಧಿಸುತ್ತಿರುವ ಕನಕಪುರ ಕ್ಷೇತ್ರವನ್ನು ಪುತ್ರಿ ಐಶ್ವರ್ಯ ಅವರಿಗೆ ಬಿಟ್ಟುಕೊಟ್ಟು ಮದ್ದೂರಿಗೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ರಾಜಕೀಯ ಪ್ರವೇಶ?
ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ವಂದತಿಗಳು ಕೇಳಿ ಬರುತ್ತಿದ್ದು, ಯಾವ ಕಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದೇ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇನ್ನೂ ಸಂಸದೆ ಸುಮಲತಾ ಅವರ ಆಪ್ತರು ಹಾಗೂ ಅಭಿಮಾನಿಗಳು ಸಹ ರಾಜಕೀಯಕ್ಕೆ ಬರಬೇಕು ಹಾಗೂ ಮದ್ದೂರಿನಿಂದಲ್ಲೇ ಸ್ಪರ್ಧೆ ಮಾಡಬೇಕು ಎಂದು ಅಭಿಷೇಕ್ ಅವರಿಗೆ ಒತ್ತಾಯಿಸಿದ್ದಾರೆ. ಇದಕ್ಕೆ ನಟ ಅಭಿಷೇಕ್ ಅಂಬರೀಶ್ ಮುಂದೆ ನೋಡೋಣಾ ಎಂದು ಸ್ಪಷ್ಟಪಡಿಸಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧೆ.?
ಈ ಬಾರಿ ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ನಿರ್ಧಿರಿಸಿದ್ದು, ಪ್ರಭಾವಿ ನಾಯಕರು ಹಾಗೂ ಹಿರಿಯ ನಾಯಕರ ಕ್ಷೇತ್ರ ಬದಲಾವಣೆ ಮಾಡಲಾಗುತ್ತದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದ್ದು, ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟಿರುವ ಬಿಜೆಪಿ ಒಕ್ಕಲಿಗ ನಾಯಕರಿಗೆ ಹೆಚ್ಚಿನ ಜವಾಬ್ದಾರಿಯನ್ನ ನೀಡುವ ಮೂಲಕ ಚುನಾವಣೆಗೆ ಸಜ್ಜುಗೊಳಿಸುತ್ತಿದೆ. ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡುವ ಮೂಲಕ ಒಕ್ಕಲಿಗರ ಕೋಟೆಯನ್ನ ಭದ್ರಪಡಿಸಿಕೊಳ್ಳುವ ಲೆಕ್ಕಾಚಾರವನ್ನ ಹಾಕಿ, ಪಕ್ಷ ಸಂಘಟನೆಗೆ ತಯಾರಿ ನಡೆಸಿದೆ.
ಈಗಾಗಲೇ ಹಿರಿಯ ನಾಯಕರಿಗೆ ಕ್ಷೇತ್ರ ಬದಲಾವಣೆಗೆ ಸಿದ್ದತೆ ಮಾಡಿಕೊಂಡಿರುವ ಬಿಜೆಪಿ ಮಂಡ್ಯದಲ್ಲಿ ಒಕ್ಕಲಿಗ ನಾಯಕರಾದ ಆರ್ ಅಶೋಕ್ ಅವರನ್ನ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸಿದ್ದತೆಯನ್ನ ಮಾಡಿಕೊಂಡಿದೆ. ಒಂದು ವೇಳೆ ಸುಮಲತಾ ಅವರು ಬಿಜೆಪಿ ಪಕ್ಷವನ್ನ ಸೇರದೇ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೇ ಜಿಲ್ಲಾಉಸ್ತುವಾರಿ ಸಚಿವರಾಗಿರುವ ಆರ್ ಅಶೋಕ್ ಅವರು ಬಿಜೆಪಿಯಿಂದ ಮಂಡ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.












Click it and Unblock the Notifications