ಕೊರೊನಾವೈರಸ್ ಹೆಚ್ಚಳ: ಬೆಂಗಳೂರಿನಲ್ಲಿ ಜಾರಿಯಾಗುತ್ತಾ ರಾತ್ರಿ ನಿಷೇಧಾಜ್ಞೆ?
ಬೆಂಗಳೂರು, ಆಗಸ್ಟ್ 3: ಸಿಲಿಕಾನ್ ಸಿಟಿಯಲ್ಲಿ ಕಳೆದೊಂದು ವಾರದಿಂದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕ್ರಮೇಣ ಏರಿಕೆ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಕೊವಿಡ್-19 ಮೂರನೇ ಅಲೆಗೂ ಕಡಿವಾಣ ಹಾಕುವ ಉದ್ದೇಶದಿಂದ ಬೆಂಗಳೂರಿನಲ್ಲಿ ಮತ್ತೊಮ್ಮೆ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸುವುದಕ್ಕೆ ಚಿಂತಿಸಲಾಗುತ್ತಿದೆ.
Recommended Video
ಸೋಮವಾರ ಸಂಜೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹಾಗೂ ಬೆಂಗಳೂರು ಪೊಲೀಸರ ನಡುವೆ ಮಹತ್ವದ ಸಭೆ ನಡೆಯಿತು. ಈ ವೇಳೆ ನಗರದಲ್ಲಿ ಕೊವಿಡ್-19 ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವ ಪ್ರದೇಶಗಳನ್ನು ಗುರುತಿಸಿಕೊಳ್ಳುತ್ತಿದ್ದಾರೆ. ಅಗತ್ಯ ಬಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಹೇರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
"ಸದ್ಯ ಬೆಂಗಳೂರಿನಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ ಅದು ಅಷ್ಟೊಂದು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿಲ್ಲ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ರಾತ್ರಿ ನಿಷೇಧಾಜ್ಞೆ ಜಾರಿಗೊಳಿಸಲು ಪೊಲೀಸ್ ಇಲಾಖೆಯ ಸಹಕಾರ ಅಗತ್ಯವಾಗಿದೆ," ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ತಿಳಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಜನಜಾಗೃತಿ ಕಾರ್ಯ:
"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಒಂದು ವೇಳೆ ಸಾರ್ವಜನಿಕರು ಕೊವಿಡ್-19 ನಿಯಮಗಳನ್ನು ಪಾಲಿಸದಿದ್ದರೆ ಅಂಥವರ ವಿರುದ್ಧ ಕಾನೂನು ಪ್ರಕಾರ ಶಿಸ್ತುಬದ್ಧ ಕ್ರಮ ತೆಗೆದುಕೊಳ್ಳುವುದು. ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರಿಕೆಯಾದ ಸಂದರ್ಭದಲ್ಲಿ ಅಗತ್ಯ ಬಿದ್ದರೆ NDMA ಕಾಯ್ದೆಯನ್ನು ಜಾರಿಗೊಳಿಸಲಾಗುವುದು," ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಪ್ರತಿನಿತ್ಯ ಅಧಿಕಾರಿಗಳ ರೌಂಡ್ಸ್:
ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳು, ಮಾಲ್, ಹೋಟೆಲ್, ದೇವಸ್ಥಾನ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕೊವಿಡ್-19 ಶಿಷ್ಟಾಚಾರಗಳ ಪಾಲನೆ ಆಗುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯು ಪ್ರತಿನಿತ್ಯ ನಗರದ ಜನನಿಬಿಡ ಪ್ರದೇಶಗಳಲ್ಲಿ ಪ್ರದರ್ಶಣೆ ಹಾಕಬೇಕು. ಆ ಮೂಲಕ ಕೊರೊನಾವೈರಸ್ ನಿಯಮಗಳ ಪಾಲನೆ ಬಗ್ಗೆ ಲಕ್ಷ್ಯ ವಹಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಲಸಿಕೆ ವಿತರಣೆ ಬಗ್ಗೆ ಮಾಹಿತಿ:
"ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಿಗದಿತ ಗುರಿಗಿಂತ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ ತೀರಾ ಕಡಿಮೆಯಾಗಿದೆ. ಈ ಪ್ರದೇಶದಲ್ಲಿ ಜನರಿಗೆ ಕೊವಿಡ್-19 ಸೋಂಕು ಇನ್ನೂ ಇರುವುದರಿಂದ ಸೋಂಕಿತರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಾಗಿಲ್ಲ," ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಿ ರಂದೀಪ್ ತಿಳಿಸಿದ್ದಾರೆ. ಅಲ್ಲದೇ ಕೆಲವು ಜನರು ತಾವು ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡ ಬಗ್ಗೆ ಮಾಹಿತಿ ನೀಡುವುದಕ್ಕೆ ನಿರಾಕರಿಸಿರುವುದರಿಂದ ಅಂಥವರನ್ನು ಲಸಿಕೆ ಪಡೆದುಕೊಂಡಿಲ್ಲ ಎಂದು ಪರಿಗಣಿಸಲಾಗಿದೆ. ನಗರದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ತಲುಪುವ ನಿಟ್ಟಿನಲ್ಲಿ ಮೈಕ್ರೋ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೊವಿಡ್-19 ಲಸಿಕೆ ಪಡೆದುಕೊಳ್ಳುವಂತೆ ಜನರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅತಿಕಡಿಮೆ ಲಸಿಕೆ ವಿತರಣೆಯಾದ ಪ್ರದೇಶಗಳನ್ನು ಗುರುತಿಸಿ ಅಂಥ ವಾರ್ಡಿನ ರಸ್ತೆಗಳಲ್ಲೇ ಮೈತ್ರಿ ಲಸಿಕೆ ಕೇಂದ್ರಗಳನ್ನು ತೆರೆಯುವುದಕ್ಕೆ ಚಿಂತಿಸಲಾಗುತ್ತಿದೆ," ಎಂದು ಬಿಬಿಎಂಪಿ ಆಯುಕ್ತ ರಂದೀಪ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 409 ಮಂದಿಗೆ ಕೊರೊನಾವೈರಸ್
ಸಿಲಿಕಾನ್ ಸಿಟಿಯಲ್ಲಿ 409 ಜನರಿಗೆ ಕೊವಿಡ್-19
ಬೆಂಗಳೂರಿನಲ್ಲಿ ಆಗಸ್ಟ್ 1ರಂದು ಒಂದೇ ದಿನದಲ್ಲಿ 409 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1227748ಕ್ಕೆ ಏರಿಕೆಯಾಗಿದೆ. 8 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15880ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8553 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications