ನೆರೆ ರಾಜ್ಯಗಳಲ್ಲಿ ಕೊರೊನಾ ಹೆಚ್ಚಳ; ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 20: ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿರುವುದಾಗಿ ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ಕೇರಳದಲ್ಲಿ ದಿನನಿತ್ಯ ಸುಮಾರು ಐದು ಸಾವಿರ ಹಾಗೂ ಮಹಾರಾಷ್ಟ್ರದಲ್ಲಿ ಆರು ಸಾವಿರ ಕೊರೊನಾ ಪ್ರಕರಣಗಳು ಕಂಡುಬರುತ್ತಿವೆ. ನಮ್ಮ ರಾಜ್ಯ ಈ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಗಡಿ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ಆರ್ ಟಿ ಪಿಸಿಆರ್ ಪರೀಕ್ಷಾ ನೆಗೆಟಿವ್ ವರದಿ ನೀಡದ ಹೊರತಾಗಿ ಅಲ್ಲಿಂದ ಬರುವವರಿಗೆ ರಾಜ್ಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಮತ್ತೆ ಕೊರೊನಾ ಹೆಚ್ಚಳ; ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ
ರಾಜ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲಿಯನ್ ರೂಪಾಂತರ ಕೊರೊನಾ ಪ್ರಕರಣಗಳು ಕಂಡುಬಂದಿಲ್ಲ ಎಂದು ಇದೇ ಸಂದರ್ಭ ಸ್ಪಷ್ಟಪಡಿಸಿದರು. "ರಾಜ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲಿಯನ್ ರೂಪಾಂತರ ಕೊರೊನಾ ಪ್ರಕರಣಗಳು ಕಂಡುಬಂದಿಲ್ಲ. ಬ್ರಿಟನ್ ರೂಪಾಂತರ ಸೋಂಕು ವರದಿಯಾಗಿದೆ. ಆದರೆ ಹರಡುವಿಕೆಗೆ ನಾವು ಅವಕಾಶ ನೀಡಿಲ್ಲ" ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇದುವರೆಗೂ ಆರು ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಆದರೆ ಲಸಿಕೆ ಪಡೆದವರ ಒಟ್ಟಾರೆ ಸಂಖ್ಯೆ ಸರ್ಕಾರಕ್ಕೆ ತೃಪ್ತಿ ತಂದಿಲ್ಲ. ಎಲ್ಲಾ ಆರೋಗ್ಯ ಕಾರ್ಯಕರ್ತರು ಕೊರೊನಾ ಲಸಿಕೆಯ ಮಹತ್ವ ಅರಿತುಕೊಳ್ಳುತ್ತಾರೆ ಎನ್ನುವ ಭರವಸೆ ಇದೆ ಎಂದರು.