ಶಿಕ್ಷಣ ಕ್ಷೇತ್ರದ ಸಮಸ್ಯೆಗಳು: ಬೃಹತ್ ಹೋರಾಟಕ್ಕೆ ಸಂಘಟನೆಗಳ ನಿರ್ಧಾರ
ಬೆಂಗಳೂರು, ಅ. 22: "ಶಿಕ್ಷಣ ಮಂತ್ರಿಗಳು ಕೇವಲ ತಮ್ಮ ರಾಜಕೀಯ ಲಾಭಕ್ಕೆ ಹೇಳಿಕೆ ಕೊಡುತ್ತಿದ್ದಾರೆ. ವಿನಃ ಶಿಕ್ಷಣದ ಯಾವುದೇ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಗುಣಮಟ್ಟದ ಶಿಕ್ಷಣ ನೀಡುವ ಚಿಂತನೆ ನಡೆಸುತ್ತಿಲ್ಲ. ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳ ಪರಿಹಾರಕ್ಕೆ ಬೃಹತ್ ಹೋರಾಟ ನಡೆಸಬೇಕು"
ಇಂತಹ ಮಹತ್ವದ ನಿರ್ಧಾರವನ್ನು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಕೈಗೊಂಡಿವೆ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ಹುಟ್ಟುಹಬ್ಬ ಅಂಗವಾಗಿ ಸೇರಿದ್ದ ಕ್ಯಾಮ್ಸ್, ಮಾಸ್, ಕುಸುಮಾ, ಎಬಿಇ, ಸೆಇಸಿ, ಕುಮಸ್ವಾ ಮತ್ತಿತರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿವೆ.
ಬೆಂಗಳೂರು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಶೀಘ್ರದಲ್ಲೇ ಆಧಾರ್ ಸೇವಾ ಕೇಂದ್ರ ಸ್ಥಾಪನೆ
ಈ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಶಿಕ್ಷಕರು ಶಿಕ್ಷಕೇತರ ಸಂಘಟನೆಯ ಒಕ್ಕೂಟ, ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡಿದೆ.
ಶಿಕ್ಷಣ ಮಂತ್ರಿಗಳು ಅಸಹಾಯಕರಾಗಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಶಿಕ್ಷಣ ಸಂಸ್ಥೆಗಳು ಮಾನಸಿಕ ನೆಮ್ಮದಿ ಕಳೆದುಕೊಂಡು ವನವಾಸ ಅನುಭವಿಸುತ್ತಿವೆ. ಶಿಕ್ಷಣ ಕ್ಷೇತ್ರ ಪ್ರತಿನಿಧಿಸುತ್ತಿರುವ ಪುಟ್ಟಣ್ಣ ಅವರ ಸಲಹೆಗಳನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಒಕ್ಕೂಟ ಹೇಳಿದೆ.
ಪುಟ್ಟಣ್ಣ ಅವರು ಶಿಕ್ಷಣ ಸಮುದಾಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರು ಮುಂದಿನ ಯಾವುದೇ ನಿರ್ಧಾರ ತೆಗೆದುಕೊಂಡರೂ ಅವರ ಜತೆ ಶಿಕ್ಷಣ ಸಂಘಟನೆಗಳು ನಿಲ್ಲಲಿವೆ. ಶಿಕ್ಷಣದ ವ್ಯವಸ್ಥೆ ಸರಿ ಪಡಿಸುವ ಧಿಕ್ಕಿನಲ್ಲಿ ತಾವು ನಿರ್ಧಾರ ಕೈಗೊಳ್ಳಬೇಕು. ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ಧ್ವನಿಯೆತ್ತಬೇಕು ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮನವಿ ಮಾಡಿದೆ.
''ಶಿಕ್ಷಣ ಮಂತ್ರಿಗಳು ಇತ್ತೀಚೆಗೆ ತಮ್ಮ ರಾಜಕೀಯ ಲಾಭಕ್ಕಾಗಿ ಹೇಳಿಕೆ ಕೊಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ತಲುಪಿಲ್ಲ. ಪಠ್ಯ ಪುಸ್ತಕ ತಲುಪಿಲ್ಲ. ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಿಲ್ಲ. ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬೃಹತ್ ಹೋರಾಟಕ್ಕೆ ಸಜ್ಜಾಗಬೇಕಿದೆ'' ಎಂದು ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.