ಆದಾಯ ತೆರಿಗೆ ಇಲಾಖೆ ದಾಳಿ : ಡಿಕೆಶಿಯಿಂದ ಸಾಕ್ಷಿ ನಾಶಕ್ಕೆ ಪ್ರಯತ್ನ
ಬೆಂಗಳೂರು, ಜೂನ್ 04 : 'ಆದಾಯ ತೆರಿಗೆ ದಾಳಿ ಸಂಬಂಧಿಸಿದ ಪ್ರಕರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಇತರ ನಾಲ್ವರು ಆರೋಪಿಗಳು ಸಾಕ್ಷಿ ನಾಶಕ್ಕೆ ಪ್ರಯತ್ನ ಮಾಡಿದ್ದಾರೆ' ಎಂದು ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮಂಗಳವಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಅರ್ಜಿಯ ವಿಚಾರಣೆಯನ್ನು ನಡೆಸಿದರು.
ದೆಹಲಿಯಲ್ಲಿ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು : ಹೆಚ್ಚುವರಿ ಸಾಲಿಟರ್ ಜನರಲ್
'ಆರೋಪಿಗಳು ಆದಾಯ ತೆರಿಗೆ ಕಾಯ್ದೆ 1961ರ ವಿವಿಧ ಕಲಂಗಳಡಿ ದಂಡನೀಯ ಅಪರಾಧ ಎಸಗಿದ್ದಾರೆ. ಆದ್ದರಿಂದ, ಅವರ ಅರ್ಜಿಯನ್ನು ಪರಿಗಣನೆ ಮಾಡಬಾರದು' ಎಂದು ಪ್ರಭುಲಿಂಗ ಕೆ.ನಾವಡಗಿ ಅವರು ವಾದ ಮಂಡನೆ ಮಾಡಿದರು.
ಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ಇದ್ದ ತಡೆ ತೆರವು
ವಾದವನ್ನು ಆಲಿಸಿದ ನ್ಯಾಯಾಲಯ ಜೂನ್ 7ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಅರ್ಜಿಯ ವಿಚಾರಣೆ ಸಮಯದಲ್ಲಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಡಿಕೆ ಶಿವಕುಮಾರ್ ವಿರುದ್ಧ ಹೈಕೋರ್ಟ್ ಮೊರೆ ಹೋದ ಆದಾಯ ತೆರಿಗೆ ಇಲಾಖೆ
ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯಲ್ಲಿನ ನಿವಾಸಗಳ ಮೇಲೆ 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ದಾಳಿಯ ವೇಳೆ 8.59 ಕೋಟಿಗೂ ಹೆಚ್ಚಿನ ಹಣ ದೆಹಲಿಯ ನಿವಾಸದಲ್ಲಿ ಸಿಕ್ಕಿತ್ತು.
ಈ ಕುರಿತ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಜಾರಿ ನಿರ್ದೇಶನಾಲಯಕ್ಕೆ ಹಸ್ತಾಂತರ ಮಾಡಿದೆ. ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ, ಆಂಜನೇಯ, ಹನುಮಂತಯ್ಯ ಅವರು ಆರೋಪಿಗಳಾಗಿದ್ದಾರೆ.
ಎಲ್ಲರೂ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಕೈ ಬಿಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 7ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.