ಸಿಟಿ ರವಿ ವಿರುದ್ಧ ಸ್ಪರ್ಧಿಸಲು ಹೊರಟಿದ್ದ 'ಕೈ' ಟಿಕೆಟ್ ಆಕಾಂಕ್ಷಿಗೆ ಐಟಿ ಶಾಕ್- ಚಿಕ್ಕಮಗಳೂರು ಮೆಗಾ ರೇಡ್ ಹಿಂದೆ ರಾಜಕೀಯ?
ಬೆಂಗಳೂರು, ಜನೆವರಿ 16: ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ (ಐಟಿ) ದಾಳಿ ಮುಂದುವರಿದಿದೆ. ಕಳೆದ ನವೆಂಬರ್ 17ರಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಅವರ ಮನೆ ಹಾಗೂ ಕಚೇರಿಗಳ ಮೇಲೆಯೂ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹತ್ತಕ್ಕೂ ಹೆಚ್ಚು ಕಾರಿನಲ್ಲಿ ಸುಮಾರು 50 ಐಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಮಯದಲ್ಲಿ ಗಾಯತ್ರಿ ಶಾಂತೇಗೌಡ ಅವರು ತಿರುಪತಿ ಪ್ರವಾಸದಲ್ಲಿದ್ದರು. ಗಾಯತ್ರಿ ಶಾಂತೇಗೌಡ ಅವರು ಚಿಕ್ಕಮಗಳೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಈಗ ಇನ್ನೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಎಂಟಕ್ಕೂ ಅಧಿಕ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ಅಕ್ಮಲ್ ಅವರ ಮನೆ, ಕಚೇರಿ, ಸೋದರನ ಮನೆ ಹಾಗೂ ಕಾಫಿ ಕ್ಯೂರಿಂಗ್ ಜಾಗಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಕ್ಮಲ್ ಅವರು ಪ್ರಸ್ತುತ ಬೆಂಗಳೂರಿನಲ್ಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ 'ನಾ ನಾಯಕಿ' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ, ದಾಳಿ ನಡೆಸಿರುವ ಅಧಿಕಾರಿಗಳು ಅವರ ಮನೆ ಹಾಗೂ ಕಚೇರಿಗಳಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ದಾಳಿ ವಿರುದ್ಧ ಕಾಂಗ್ರೆಸ್ ಆಕ್ರೋಶ
ಚಿಕ್ಕಮಗಳೂರಿನಲ್ಲಿ ಎರಡೇ ತಿಂಗಳು ಅವಧಿಯಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಈ ಇಬ್ಬರೂ ನಾಯಕರು ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇಬ್ಬರು ನಾಯಕರ ಗುರಿಯಾಗಿಸಿ ದಾಳಿ ನಡೆಸಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಾರ್ಚ್ನಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಕೈ ನಾಯಕರು ಆರೋಪಿಸಿದ್ದಾರೆ.
ಬಿಜೆಪಿ ನಾಯಕರ ಮನೆ ಹಾಗೂ ಕಚೇರಿಗಳ ಮೇಲೆ ಏಕೆ ಐಟಿ ದಾಳಿ ನಡೆಯುತ್ತಿಲ್ಲ. ಕೇವಲ ಕಾಂಗ್ರೆಸ್ ನಾಯಕರ ಮೇಲೆಕೆ ದಾಳಿಗಳು ನಡೆಯುತ್ತಿವೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೇಂದ್ರ ತನಿಖಾ ಸಂಸ್ಥೆಗಳು ಬಿಜೆಪಿ ಅಪ್ಪಣೆಯಂತೆ ಕೆಲಸ ಮಾಡುತ್ತಿವೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ಮಾತುಗಳನ್ನು ತನಿಖಾ ಸಂಸ್ಥೆಗಳು ಕೇಳುತ್ತಿವೆ. ಆ ಹಿನ್ನೆಲೆಯಲ್ಲಿ ದಾಳಿಗಳು ನಡೆಯುತ್ತಿವೆ. ಇದು ಮಾನಸಿಕ ಕಿರುಕುಳ ನೀಡುವುದರ ಭಾಗವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಬಿಜೆಪಿ ರಾಷ್ಟ್ರೀಯ ಸಂಚಾಲಕರಾಗಿರುವ ಸಿ ಟಿ ರವಿ ಅವರು ಪ್ರಸ್ತುತ ಚಿಕ್ಕಮಗಳೂರಿನ ಶಾಸಕರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಕಾಂಗ್ರೆಸ್ ಆರೋಪಿಸಿತ್ತು. ಸಾವಿರಾರು ಕೋಟಿ ಅಕ್ರಮ ಆಸ್ತಿಯನ್ನು ರವಿ ಸಂಪಾದಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಹೇಳಿದ್ದರು. ಇವರ ವಿರುದ್ಧ ಸಿ ಟಿ ರವಿ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.
ನಿನ್ನೆ ಜನಾರ್ಧನ ರೆಡ್ಡಿ ಅವರ ಆಪ್ತರನ್ನು ಗುರಿಯಾಗಿಸಿ ಐಟಿ ದಾಳಿ ನಡೆಸಿತ್ತು. ಇದೇ ವೇಳೆ, ಸಾರಿಗೆ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕನ ಮನೆ ಹಾಗೂ ಕಚೇರಿಯ ಮೇಲೂ ದಾಳಿಯಾಗಿತ್ತು. ವಿರೋಧಿಗಳ ಮೇಲೆ ಆಡಳಿತಾರೂಢ ಬಿಜೆಪಿ ತನಿಖೆ ಸಂಸ್ಥೆಗಳ ಮೂಲಕ ಪ್ರಹಾರ ನಡೆಸುತ್ತಿದೆ ಎಂಬ ಮಾತುಗಳು ಕೆಲ ವರ್ಷಗಳಿಂದ ಕೇಳಿ ಬರುತ್ತಿವೆ. ಚಿಕ್ಕಮಗಳೂರಿನ ದಾಳಿಯೂ ರಾಜಕೀಯ ಪ್ರೇರಿತವೆಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದ್ದಾರೆ.