ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್ ಸ್ಥಾಪಿಸಿ: ನಿರಾಣಿ
ನವದೆಹಲಿ, ಅಕ್ಟೋಬರ್ 11: ಕರ್ನಾಟಕದ ಐತಿಹಾಸಿಕ ಪ್ರವಾಸಿತಾಣಗಳಾದ ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲುಗಳಿಗೆ ಸಾಕಷ್ಟು ಪ್ರವಾಸಿಗರು ಆಗಮಿಸುತ್ತಾರೆ. ಈ ಭಾಗದಲ್ಲಿ 'ಐಟಿಸಿ ಪಂಚತಾರಾ' ಹೋಟೆಲ್ ನಿರ್ಮಾಣ ಮಾಡಿದರೆ ಪ್ರವಾಸಿಗರಿಗೆ ಅನುಕೂಲವಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಸಲಹೆ ನೀಡಿದರು.
ಜಾಗತಿಕ ಹೂಡಿಕೆದಾರ ಸಮಾವೇಶದ ರೋಡ್ಶೋ ಭಾಗವಾಗಿ ನವದೆಹಲಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂಬಂಧ ಐಟಿಸಿ ಕಂಪನಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಪಂಚತಾರ ಹೋಟೆಲ್ ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ಪ್ರತಿಕ್ರಿಯಿಸಿದರು.

ಕರ್ನಾಟಕದಲ್ಲಿ ಹೂಡಿಕೆ ಹಾಗೂ ಕೈಗಾರಿಕೋದ್ಯಮ ವಿಸ್ತರಣೆಗೆ ವಿಫುಲ ಅವಕಾಶಗಳು ಇವೆ. ಈ ಕುರಿತ ಮಾಹಿತಿಯನ್ನು ಸಚಿವರು ಸಮಾವೇಶದಲ್ಲಿ ಪ್ರಸ್ತಾಪಿಸಿದರು. ಅಲ್ಲದೇ ನವೆಂಬರ್ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕವಾಗಿ ಸಚಿವರು ಉದ್ಯಮಿದಾರರನ್ನು ಆಹ್ವಾನಿಸಿದರು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್ಕೆಸಿಸಿ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಮಾವೇಶ ಬಹಿಷ್ಕಾರ ಸಾಧ್ಯತೆ
ಬೆಂಗಳೂರಿನಲ್ಲಿ ನವೆಂಬರ್ 2ರಿಂದ 4ರವರೆಗೆ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ' ಹಮ್ಮಿಕೊಂಡಿರುವ ರಾಜ್ಯ ಸರ್ಕಾರ ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ವೇಳೆ ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯಗಳ ಸಮಸ್ಯೆ ಮತ್ತು ಅಭಿವೃದ್ಧಿ ಹಾಗೂ ನಿರ್ವಹಣೆಯ ವಿಚಾರ ಮುನ್ನೆಲೆಗೆ ಬಂದಿದೆ. ಒಂದು ಕಡೆ ಜಾಗತಿಕವಾಗಿ ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಇತ್ತ ದೇಶದ ಅತಿ ದೊಡ್ಡ ಕೈಗಾರಿಕಾ ಪ್ರದೇಶವಾದ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ಸೇರಿದಂತೆ, ಇತರೆ ಸಣ್ಣಪುಟ್ಟ ಕೈಗಾರಿಕಾ ಪ್ರದೇಶಗಳು ರಸ್ತೆ, ನೀರು, ವಿದ್ಯುತ್ ಸೇರಿ ಇನ್ನಿತರ ಮೂಲಸೌಕರ್ಯ ಇಲ್ಲದಾಗಿದೆ. ಹೀಗಾಗಿ ಸ್ಥಳೀಯ ಉದ್ಯಮಿಗಳು ಸಮಾವೇಶ ಬಹಿಷ್ಕರಿಸುವ ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications