ಷರೀಫ್ ಪಕ್ಷ ಬಿಡೋಲ್ಲ, ಗೌಡರ ಲೆಕ್ಕ ಉಲ್ಟಾ!
ಬೆಂಗಳೂರು, ಮಾ. 24 : ಅಲ್ಪ ಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಾಫರ್ ಷರೀಫ್ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಗಳಿಗೆ ತೆರೆಬಿದ್ದಿದ್ದು, ಅವರು ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಮೈಸೂರಿನಲ್ಲಿ ಷರೀಫ್ ಕಣಕ್ಕಿಳಿಸುವ ಜೆಡಿಎಸ್ ಲೆಕ್ಕಾಚಾರ ತಲೆಕೆಳಗಾಗಿದ್ದು, ಹೊಸ ಅಭ್ಯರ್ಥಿಯಾಗಿ ಪಕ್ಷ ಹುಡುಕಾಟ ಆರಂಭಿಸಿದೆ.
ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿತ್ತು. ಆದ್ದರಿಂದ ಅವರು ಪಕ್ಷ ತೊರೆಯುವ ಹಾದಿಯಲ್ಲಿದ್ದರು, ಜೆಡಿಎಸ್ ಸೇರಿ ಮೈಸೂರಿನಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತು ಹಬ್ಬಿತ್ತು. ಸ್ವತಃ ಷರೀಫ್ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದರು. [ಮೈಸೂರಿನಿಂದ ಜೆಡಿಎಸ್ ಅಭ್ಯರ್ಥಿ ಷರೀಫ್]
ಆದರೆ, ಷರೀಫ್ ಅವರೊಂದಿಗೆ ಮಾತುಕತೆ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಅವರ ಕೋಪ ಶಮನಗೊಳಿಸಿದ್ದಾರೆ. ಆದ್ದರಿಂದ ಮೆಕ್ಕಾ ಯಾತ್ರೆಯಲ್ಲಿರುವ ಷರೀಫ್, ಪಕ್ಷದಲ್ಲಿ ಮುಂದುವರಿಯುವ ಸಂದೇಶ ರವಾನಿಸಿದ್ದಾರೆ. ಈ ನಿರ್ಧಾರದಿಂದಾಗಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದ್ದು, ನಾಯಕರು ಮೈಸೂರು ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಷರೀಫ್ ಅಂತಿಮ ನಿರ್ಧಾರವೇನು? [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]
ಪಕ್ಷ ತೊರೆಯುವುದಿಲ್ಲ
ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಜಾಫರ್ ಷರೀಫ್, ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ, ಪಕ್ಷವನ್ನೂ ತೊರೆಯುವುದಿಲ್ಲ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಮೆಕ್ಕಾದಲ್ಲೇ ಉಳಿಯುವುದಾಗಿ ಹೇಳಿದ್ದಾರೆ. ಭಾನುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಷರೀಫ್ ಕುಟುಂಬ ಸದಸ್ಯರು ಹಾಗೂ ಆಪ್ತರು, ಷರೀಫ್ ಕಾಂಗ್ರೆಸ್ ತೊರೆಯುವುದಿಲ್ಲ ಎಂಬುದನ್ನು ಖಚಿತ ಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಜಾಫರ್ ಷರೀಫ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಅವರು ತೆರೆ ಎಳೆದಿದ್ದು, ಜಾಫರ್ ಷರೀಫ್ ಅವರಂತಹ ಹಿರಿಯರು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಟಿಕೆಟ್ ಕೈ ತಪ್ಪಿದ್ದರಿಂದ ಕೊಂಚ ಅಸಮಾಧಾನಗೊಂಡಿದ್ದಾರೆ. ಸದ್ಯಕ್ಕೆ ಅವರು ಮೆಕ್ಕಾ ಯಾತ್ರೆಯಲ್ಲಿದ್ದು, ಪಕ್ಷದೊಂದಿಗಿನ ನಂಟು ಕಡಿದುಕೊಳ್ಳುವುದಿಲ್ಲವೆಂದು ಹೇಳಿದ್ದಾರೆ.
ಇಕ್ಕಟ್ಟಿನಲ್ಲಿ ಜೆಡಿಎಸ್
ಜಾಫರ್ ಷರೀಫ್ ನಿರ್ಧಾರದಿಂದಾಗಿ ಜೆಡಿಎಸ್ ಪಕ್ಷ ಇಕ್ಕಟ್ಟಿಗೆ ಸಿಲುಕಿದೆ. ಷರೀಫ್ ಜೆಡಿಎಸ್ ಅಭ್ಯರ್ಥಿಯಾಗಿ ಮೈಸೂರಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಷರೀಫ್ ತಮ್ಮ ಪಕ್ಷಕ್ಕೆ ಬರಲಿದ್ದಾರೆ ಎಂದು ಸ್ವತಃ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದರು. ಈಗ ಲೆಕ್ಕಾಚಾರ ತಲೆಕೆಳಗಾಗಿದ್ದ್ಉ, ಜೆಡಿಎಸ್ ತೀವ್ರ ಮುಜುಗರಕ್ಕೀಡಾಗಿದೆ. ಹೊಸ ಅಭ್ಯರ್ಥಿಗಾಗಿ ಹುಡುಕಾಟ ಆರಂಭಿಸಿದೆ.
ಮೈಸೂರಿನಿಂದ ಜೆಡಿಎಸ್ ಅಭ್ಯರ್ಥಿ ಯಾರು?
ಸೋಮವಾರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮೈಸೂರಿನಲ್ಲಿ ಪಕ್ಷದ ನಾಯಕರ ಸಭೆ ನಡೆಸಲಿದ್ದು, ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಿದ್ದಾರೆ. ಶಾಸಕ ಜಿಟಿ ದೇವೇಗೌಡ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಪಕ್ಷದ ಮುಖಂಡ ಅಬ್ದುಲ್ ಅಜೀಂ ಹೆಸರುಗಳು ಸದ್ಯ ಕೇಳಿಬರುತ್ತಿದ್ದು, ಶಾಸಕ ಚಿಕ್ಕಮಾದು ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಕೈ ಕೊಟ್ಟ ಸಾಂಗ್ಲಿಯಾನ
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿವೃತ್ತ ಪೊಲೀಸ್ ಆಯುಕ್ತ ಎಚ್.ಟಿ.ಸಾಂಗ್ಲಿಯಾನ ಅವರನ್ನು ಕಣಕ್ಕೆ ಇಳಿಸುವ ಜೆಡಿಎಸ್ ಲೆಕ್ಕಾಚಾರವೂ ಉಲ್ಪಾ ಆಗಿದ್ದು, ದೆಹಲಿಗೆ ತೆರಳಿ ಹೈ ಕಮಾಂಡ್ ನಾಯಕರನ್ನು ಭೇಟಿ ಮಾಡಿದ ಬಂದ ಸಾಂಗ್ಲಿಯಾನ ಅವರು ಜೆಡಿಎಸ್ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. [ಜೆಡಿಎಸ್ ನತ್ತ ಸಾಂಗ್ಲಿಯಾನ]