ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ದಿನಾಂಕ ಬದಲಾವಣೆ
ಕರ್ನಾಟಕ ಸರ್ಕಾರ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯ ದಿನಾಂಕವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.ಮೊದಲು 16/03/20220ರಂದು ಜಯಂತಿ ಆಚರಣೆ ಮಾಡಲು ಆದೇಶಿಸಿತ್ತು.
ಬೆಂಗಳೂರು, ಮಾರ್ಚ್ 05; ಕರ್ನಾಟಕ ಸರ್ಕಾರ 'ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ' ದಿನಾಂಕ ಬದಲಾವಣೆ ಮಾಡಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಸ್. ಗೀತಾಬಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಕಸಂವಾ 82 ಕಸದ 2022, ದಿನಾಂಕ: 16/03/2022ರ ಆದೇಶ ಭಾಗದಲ್ಲಿ 'ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ದಿನಾಂಕ 16-03-2022 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಚರಿಸಬೇಕು ಎಂದು ತಿಳಿಸಲಾಗಿತ್ತು.

ಆದರೆ ಪರಿಷ್ಕೃತ ಆದೇಶದಲ್ಲಿ 'ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ' ಎಂಬುದರ ಬದಲಾಗಿ 'ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ರಾಜ್ಯಾದ್ಯಂತ ಪ್ರತಿ ವರ್ಷ ಫಾಲ್ಕುಣ ಶುದ್ಧ ತ್ರಯೋದಶಿಯಂದು ಆಚರಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ 2023ನೇ ಸಾಲಿನ ಜಯಂತಿ 5/3/2023ರ ಭಾನುವಾರ ಆಚರಣೆ ಮಾಡಲಾಗಿದೆ.
ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರಿನ ರಂಭಾಪುರಿ ವೀರಸಿಂಹಾಸನ ಪೀಠ, ಬಾಳೆಹೊನ್ನೂರು ಇಲ್ಲಿ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರ ನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 51 ಅಡಿ ಎತ್ತರದ ರೇಣುಕಾಚಾರ್ಯ ಅವರ ಮೂರ್ತಿ ಕಾರ್ಯಾರಂಭಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಈ ಸಮಾರಂಭದಲ್ಲಿ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವ ಸಿ. ಸಿ. ಪಾಟೀಲ್, ಶಾಸಕ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ. ಎನ್. ಜೀವರಾಜ್ ಮುಂತಾದವರು ಉಪಸ್ಥಿತರಿದ್ದರು.

ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ; ರಂಭಾಪುರಿ ಪೀಠದಿಂದ ನೀಡಲಾಗುವ ರೇಣುಕಾಚಾರ್ಯ ಪ್ರಶಸ್ತಿಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪ್ರಧಾನ ಮಾಡಲಾಯಿತು. ಪ್ರಶಸ್ತಿ 1 ಲಕ್ಷ ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.
ರೇಣುಕಾಚಾರ್ಯ ಜಯಂತಿಯನ್ನು ಸರ್ಕಾರದ ವತಿಯಿಂದ ರಜೆ ರಹಿತವಾಗಿ ಆಚರಣೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ರಾಜ್ಯ ಸರ್ಕಾರಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಈ ಕುರಿತು ಮನವಿ ಸಲ್ಲಿಕೆ ಮಾಡಿತ್ತು. ಇದನ್ನು ಪರಿಗಣಿಸಿ ಮಾರ್ಚ್ 16ರಂದು ರಾಜ್ಯಾದ್ಯಂತ ರೇಣುಕಾಚಾರ್ಯ ಜಯಂತಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ನೀಡಿತ್ತು.












Click it and Unblock the Notifications