ಟಿಕೆಟ್ ನಿರಾಕರಣೆ ಬೆನ್ನಲ್ಲೇ ನಡ್ಡಾ ಭೇಟಿಯಾದ ಜಗದೀಶ್ ಶೆಟ್ಟರ್
ನವದೆಹಲಿ, ಏಪ್ರಿಲ್ 12: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಒಂದು ದಿನದ ನಂತರ, ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಬುಧವಾರ ಇಲ್ಲಿ ಭೇಟಿ ಮಾಡಿದ್ದಾರೆ.
ನಡ್ಡಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಶೆಟ್ಟರ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೊತೆಗಿದ್ದರು ಎನ್ನಲಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ನ ಹಾಲಿ ಶಾಸಕ ಶೆಟ್ಟರ್ ಅವರು, ಚುನಾವಣೆಗೆ ಸ್ಪರ್ಧಿಸದಂತೆ ಬಿಜೆಪಿ ಕೇಂದ್ರ ನಾಯಕತ್ವದಿಂದ ಸೂಚನೆ ನೀಡಲಾಗಿದೆ ಎಂದು ಮಂಗಳವಾರ ಹೇಳಿದ್ದರು. ಆದರೂ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಾಗಿ ನಾಯಕತ್ವಕ್ಕೆ ತಿಳಿಸಿ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹೈಕಮಾಂಡ್ ನಿರ್ಧಾರವು ತನಗೆ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದ ಅವರು ಪಕ್ಷದ ವರಿಷ್ಠರು ಅದನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದರು. ಮಂಗಳವಾರ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳು ಸೇರಿದ್ದವು. ಮೇ 10 ರಂದು ನಡೆಯಲಿರುವ ಚುನಾವಣೆಗೆ ಸಚಿವರಾದ ಅಂಗಾರ (ಸುಳ್ಯ ಕ್ಷೇತ್ರ) ಮತ್ತು ಆನಂದ್ ಸಿಂಗ್ (ವಿಜಯನಗರ) ಸೇರಿದಂತೆ ಕನಿಷ್ಠ ಒಂಬತ್ತು ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ.
ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಏಪ್ರಿಲ್ 13ರಿಂದ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಡೆಯಲಿದೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತ ಗಳಿಸುವ ಮೂಲಕ ದಕ್ಷಿಣ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ಗುರಿಯನ್ನು ಬಿಜೆಪಿ ಹೊಂದಿದೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ನಂತರ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಹಲವು ಲೆಕ್ಕಾಚಾರವನ್ನ ಹಾಕಿ 224 ಕ್ಷೇತ್ರಗಳ ಫೈಕಿ 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿಗೂ ಬಂಡಾಯದ ಬೆಂಕಿ ತಟ್ಟಿದೆ.
ಇನ್ನೂ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. 2023 ರ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದ ಜಗದೀಶ್ ಶೆಟ್ಟರ್ ಅವರ ಹೆಸರು ಮೊದಲಪಟ್ಟಿಯಲ್ಲಿ ಘೋಷಣೆ ಮಾಡದಿರುವುದರಿಂದ ಹೆಚ್ಚು ತಲೆಕೆಡಿಸಿಕೊಂಡಿದ್ದರು.

ಇನ್ನೂ ಟಿಕೆಟ್ ಘೋಷಣೆಯಾದ ಹಿನ್ನೆಲೆ ಅಸಮಾಧಾನದಿಂದ ಮಾಧ್ಯಮಗಳ ಜೊತೆಗೆ ಜಗದೀಶ್ ಶೆಟ್ಟರ್ ಮಾತನಾಡಿದ ಅವರು, ಹೈಕಮಾಂಡ್ ಟಿಕೆಟ್ ನೀಡದಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳನ್ನ ಪಡೆದು ಗೆದ್ದು ಬರುತ್ತೇನೆ ಎಂದು ಹೇಳಿದ್ದರು. ಈ ಕುರಿತು ಹೈಕಮಾಂಡ್ ವರಿಷ್ಠರು ಫೋನ್ ಮಾಡಿದ್ರು, ನೀವು ಹಿರಿಯರಿದ್ದೀರಾ ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ್ ನಾಯಕರು ಹೇಳಿದ್ದರು. ಆದರೆ, ನನಗೆ ಪಕ್ಷದ ವರಿಷ್ಠರ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ಈಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಜಗದೀಶ್ ಶೆಟ್ಟರ್ ಅವರು ಭೇಟಿ ಮಾಡಿದ್ದಾರೆ.












Click it and Unblock the Notifications