ಲೋಕಸಭಾ ಚುನಾವಣೆ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ಕೊಡುತ್ತಾರೆ: ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಮಾರ್ಚ್ 24: ದೇಶದಲ್ಲಿ ಎದುರಾಗಿರುವ ಲೋಕಸಭಾ ಚುನಾವಣೆ ನಂತರ ಕರ್ನಾಟಕ ರಾಜ್ಯ ಸರ್ಕಾರದಲ್ಲಿನ ಬದಲಾವಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತು ಹಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಅವರು ಹೇಳಿದ್ದೇನು? ಎಂಬ ಮಾಹಿತಿ ಇಲ್ಲಿದೆ
ಭಾನುವಾರ ನಗರದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಳಿಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ಕೊಟ್ಟೆ ಕೊಡುತ್ತಾರೆ ಎಂದು ಅವರು ಭವಿಷ್ಯ ನುಡಿದರು.

ರಾಜ್ಯ ಸರ್ಕಾರದ ಪತನದ ಸುಳಿವು ನೀಡಿದ ಶೆಟ್ಟರ್, ಬಿಜೆಪಿ ಏನೂ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ನ ಒಳಗಿರು ಗುಂಪುಗಾರಿಕೆ, ಬಣ ರಾಜಕೀಯದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಅದನ್ನು ಈಗಾಗಲೇ ಬಹಿರಂಗಗೊಳಿಸಿದ ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಅವರ ಹೇಳಿಕೆಯೇ ಸಾಕ್ಷಿ ಎಂದರು.
ಚುನಾವಣೆ ಹೊಸ್ತಿಲಲ್ಲಿ ದಲಿತ ಸಿಎಂ, ಡಿಸಿಎಂ ಕೂಗು
ಕಾಂಗ್ರೆಸ್ನಲ್ಲಿ ಗುಂಪುಗಳಿವೆ, ಈ ಗುಂಪುಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ. ಅಧಿಕಾರಕ್ಕಾಗಿ ಅವರಲ್ಲಿಯೇ ಕಿತ್ತಾಟ ನಡೆದಿದ್ದು ಕೆಲವು ದಿನಗಳ ಹಿಂದಷ್ಟೇ ದಲಿತ ಸಿಎಂ ಕೂಗು ಕೇಳಿ ಬಂದಿತ್ತು, ಅನಂತರ ನಾಲ್ಕು ಡಿಸಿಎಂ ಮಾಡಬೇಕೆಂಬುದು ಮುನ್ನಲೆಗೆ ಬಂದಿತ್ತು. ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಭಾರೀ ಸದ್ದು ಮಾಡುತ್ತಿದೆ.
ಸರ್ಕಾರ ಪತನಕ್ಕೆ ಬಿಜೆಪಿ ಕಾರಣವಲ್ಲ: ಶೆಟ್ಟರ್ ಎಚ್ಚರಿಕೆ
2014 ರಲ್ಲಿಯೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಹಿಂದಿನ ಇತಿಹಾಸ, ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಐ ನೋಡಿದರೆ ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನವಾಗುವುದು ಖಚಿತವಾಗುತ್ತಿದೆ. ಸರ್ಕಾರ ಪತನವಾದರೆ ಅದನ್ನು ವಿನಾಕಾರಣ ಬಿಜೆಪಿ ಪಕ್ಷದ ಮೇಲೆ ಹೊರಿಸುವುದು, ನಮ್ಮ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯರನ್ನು ಕೆಡವಲು ಪಕ್ಷದೊಳಗೇ ಪ್ಲಾನ್
ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿದೆ ಎಂಬ ಡಿಸಿಎಂ ಹೇಳಿಕೆಯನ್ನು ಸ್ವತಃ ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪನವರೇ ಸ್ಪಷ್ಟ ಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಕಾಂಗ್ರೆಸ್ನಲ್ಲಿಯೇ ಒಳತಂತ್ರವನ್ನ ರೂಪಿಸಲಾಗುತ್ತದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದೆಲ್ಲವು ರಾಜಕೀಯ ಸ್ಟಂಟ್. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಚುನಾವಣೆ ಸಮಯದಲ್ಲಿ ಜನರ ಗಮನವನ್ನು ಬೇರೆ ಕಡೆ ಸೆಳೆಯುವ ತಂತ್ರ ಇದಾಗಿದೆ.
ಚುನಾವಣೆ ಪ್ರಚಾರದ ಗಿಮಿಕ್: ಶೆಟ್ಟರ್ ಕಿಡಿ
ಕೇಂದ್ರದಿಂದ ಬರ ಪರಿಹಾರ ಅನುದಾನ ಬಂದಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಹೋಗಿದ್ದು ಇತಿಹಾಸದಲ್ಲಿಯೇ ಮೊದಲು. ಅನುದಾನದ ಕುರಿತು ಚರ್ಚಿಸಲು ಬೇರೆ ಬೇರೆ ವೇದಿಕೆಗಳಿವೆ. ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಚರ್ಚಿಸಬಹುದು.
ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ವಿರೋಧ ಪಕ್ಷದ ನಾಯಕರು. ಆದರೆ ಅಲ್ಲಿ ಚರ್ಚಿಸುತ್ತಿಲ್ಲ, ಚುನಾವಣೆ ಪೂರ್ವದಲ್ಲಿ ದೆಹಲಿಗೆ ಹೋಗಿ ಹೋರಾಟ ಮಾಡುವ ಸ್ಟಂಟ್ ಮಾಡಿದ್ದರು. ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಇದೆಲ್ಲವೂ ಚುನಾವಣೆ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಉತ್ತಮವಾದ ಕೆಲಸ ಮಾಡಿದೆ. ಕೇಂದ್ರ ಸರ್ಕಾರದ ಅನುದಾನ ವಿಳಂಬ ಆದಾಗ ರಾಜ್ಯ ಸರ್ಕಾರ ತನ್ನ ಬಳಿ ಇದ್ದ ಹಣ ಖರ್ಚು ಮಾಡಿದ ಉದಾಹರಣೆ ಇದೆ. ಇದನ್ನು ಮಾಡದೇ ಪ್ರಧಾನಿ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದು ಅಪರಾಧ ಎಂದು ಕಿಡಿ ಕಾರಿದರು.
ಇನ್ನೂ ಧಾರವಾಡದಿಂದ ಶ್ರೀ ದಿಂಗಾಲೇಶ್ವರಿ ಸ್ವಾಮೀಜಿ ಸ್ಪರ್ಧೆ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಜಗದೀಶ್ ಶೆಟ್ಟರ್ ಅವರು ಉತ್ತರಿಸಿದರು.












Click it and Unblock the Notifications