ಕಾಂಗ್ರೆಸ್ ಗೆಲುವಿನ ಭ್ರಮೆ ಹುಸಿಯಾಗಲಿದೆ, ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ: ಬಿಎಸ್ವೈ
ಉಡುಪಿ, ನವೆಂಬರ್7: ಕಾಂಗ್ರೆಸ್ ಗೆಲುವಿನ ಭ್ರಮೆ ಹುಸಿಯಾಗಲಿದೆ, ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಸೋಮವಾರ ನಡೆದ ಜನ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮೋದಿಜಿ ಅವರಿಗೆ ಗೌರವ ತಂದು ಕೊಡಲಿದೆ. ಇದೇ 11ರಂದು ಮೋದಿಜಿ ಅವರ ಭೇಟಿ ವೇಳೆ ಮೂರ್ನಾಲ್ಕು ಲಕ್ಷ ಜನರು ಸೇರಲಿದ್ದಾರೆ ಎಂದರು.
ನರೇಂದ್ರ ಮೋದಿಜಿ ಪ್ರಧಾನಿಯಾದ ಮೇಲೆ 8 ವರ್ಷಗಳಲ್ಲಿ ಒಂದು ದಿನವೂ ವಿಶ್ರಾಂತಿ ಪಡೆದಿಲ್ಲ. ಇಡೀ ಜಗತ್ತೇ ಮೆಚ್ಚುವ ಮೋದಿಜಿ ಅವರು ಈ ದೇಶದ ರಥವನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು. ನರೇಂದ್ರ ಮೋದಿ ಮುಂದೆ ರಾಹುಲ್ ಗಾಂಧಿ ಬಚ್ಚಾ ಇದ್ದ ಹಾಗೆ ಎಂಬುದು ನನ್ನ ಪ್ರಾಮಾಣಿಕ ಅನಿಸಿಕೆ. ರಾಹುಲ್ ಹೋದಲ್ಲೆಲ್ಲ ಕಾಂಗ್ರೆಸ್ ಸೋಲಿಗೆ ಕೊಳ್ಳೇಗಾಲದ ಚುನಾವಣಾ ಫಲಿತಾಂಶವೇ ಉದಾಹರಣೆ ಎಂದು ತಿಳಿಸಿದರು.
ಮಂಗಳೂರು- ಉಡುಪಿಯ ಜನರು ಶಿಸ್ತಿನ ಜನರಾಗಿದ್ದು, ಬಹಳ ಕಾಲದಿಂದ ಬಿಜೆಪಿಯನ್ನು ಬೆಂಬಲಿಸುತ್ತ ಬಂದವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ 10 ಲಕ್ಷ ಕೋಟಿಯಷ್ಟು ಹೂಡಿಕೆ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿ, ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ''ಪ್ರಧಾನಿ ಮೋದಿ ನೇತೃತ್ವದ ಸರಕಾರದ ಮೇಲೆ ಭ್ರಷ್ಟಾಚಾರದ ಒಂದು ಕಪ್ಪು ಚುಕ್ಕೆಯೂ ಇಲ್ಲ. ವಿದೇಶದಲ್ಲಿ ಭಾರತದ ಗೌರವ ಹೆಚ್ಚಿದ್ದು ಪ್ರಧಾನಿ ಮಾತಿಗಾಗಿ ಜಗತ್ತಿನ ರಾಷ್ಟ್ರಗಳು ಕಿವಿಗೊಡುತ್ತಿವೆ'' ಎಂದು ಹೇಳಿದರು.
''ಕೇಂದ್ರವು ಸೈನ್ಯಕ್ಕೆ ಶಸ್ತ್ರಾಸ್ತ್ರ ಸಹಿತ ಸೈನಿಕರಿಗೆ ಬಲ ತುಂಬಿದ್ದು ಆತ್ಮನಿರ್ಭರ, ಸ್ವಾವಲಂಬಿ ಭಾರತ ನಿರ್ಮಾಣವಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಜಮ್ಮು ಕಾಶ್ಮೀರಕ್ಕಿದ್ದ 370ನೇ ವಿಧಿ ರದ್ದು ಮೂಲಕ ಬಿಜೆಪಿ ಹೇಳಿದಂತೆ ನಡೆದಿದೆ. ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆದಿದ್ದೇ ಕಾಂಗ್ರೆಸ್ ಸಾಧನೆ. ದೇಶ, ರಾಜ್ಯ ಒಡೆಯುವ ಬದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ'' ಎಂದು ಸಚಿವೆ ಶೋಭಾ ಕಾಂಗ್ರೆಸ್ ನಾಯಕರಿಗೆ ತಿಳಿ ಹೇಳಿದರು.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಎಸ್. ಅಂಗಾರ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಉಪಸ್ಥಿತರಿದ್ದರು. ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications