Janardhana Reddy : ಸಹೋದರನ ವಿರುದ್ಧ ಅಭ್ಯರ್ಥಿ ಘೋಷಿಸಿದ ರೆಡ್ಡಿ!
ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಈ ಘೋಷಣೆ ಬಳ್ಳಾರಿ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು, ಜನವರಿ 31; ಈಗಾಗಲೇ ಹೊಸದಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಪ್ರಚಾರ ಕಾರ್ಯದಲ್ಲಿ ಜನಾರ್ದನ ರೆಡ್ಡಿ ಬ್ಯುಸಿಯಾಗಿದ್ದಾರೆ. ಈಗ ಹೊಸ ಘೋಷಣೆ ಮಾಡಿರುವ ಅವರು ಬಳ್ಳಾರಿ ರಾಜಕೀಯದಲ್ಲಿ ಚರ್ಚೆ ಹುಟ್ಟು ಹಾಕಿದ್ದಾರೆ.
ಮಂಗಳವಾರ ಕೊಪ್ಪಳದ ಆನೆಗುಂದಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, 'ಸಹೋದರ ಇರಲಿ ಯಾರೇ ಇರಲಿ, ನಮ್ಮ ಪಕ್ಷದ ಅಭ್ಯರ್ಥಿ ಹಾಕುತ್ತೇನೆ" ಎಂದು ಹೇಳಿದರು.
"ಬಳ್ಳಾರಿ ನಗರ ಕ್ಷೇತ್ರದಿಂದ ತಮ್ಮ ಪತ್ನಿ ಲಕ್ಷ್ಮೀ ಅರುಣಾ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ" ಎಂದು ಘೋಷಣೆ ಮಾಡಿದರು. ಈ ಘೋಷಣೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬಳ್ಳಾರಿ ನಗರ ಕ್ಷೇತ್ರದ ಹಾಲಿ ಶಾಸಕರು ಬಿಜೆಪಿಯ ಸೋಮಶೇಖರ ರೆಡ್ಡಿ. ಮಾಜಿ ಸಚಿವ ಜನಾರ್ದನ ರೆಡ್ಡಿ ಸಹೋದರ. ಈಗ ಜನಾರ್ದನ ರೆಡ್ಡಿ ಸಹೋದರನ ವಿರುದ್ಧ ಪತ್ನಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದರು.
ಜನಾರ್ದನ ರೆಡ್ಡಿ ಹೇಳಿದ್ದೇನು?
* ಯಾರನ್ನೋ ಸೋಲಿಸಲು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ಎಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೋ. ಅಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ.
* ರಾಜಕೀಯದಲ್ಲಿ ನಾನೆಂದೂ ಸಂಬಂಧಗಳನ್ನು ದುರುಪಯೋಗ ಮಾಡಿಕೊಂಡಿಲ್ಲ. ಸಹೋದರ ಇರಲಿ, ಯಾರೇ ಇರಲಿ ನಮ್ಮ ಪಕ್ಷದ ಅಭ್ಯರ್ಥಿ ಹಾಕುತ್ತೇನೆ.
* ನನಗೆ ವ್ಯಕ್ತಿ ಮುಖ್ಯವಲ್ಲ. ನನ್ನ ತೀರ್ಮಾನ ಅಚಲ. ನಾನು ಈಗಾಗಲೇ ಹೇಳಿದ್ದೇನೆ. ಯಾವ ಪಕ್ಷದ ನಾಯಕರ ಬಗ್ಗೆಯೂ ನಾನು ಮಾತನಾಡುವುದಿಲ್ಲ.
* 12 ವರ್ಷ ವನವಾಸ, ಹಿಂಸೆ ಅನುಭವಿಸಿ ಉದಯವಾಗಿರುವ ಪಕ್ಷವಿದು. ಯಾಕೆ ಬೇರೆಯವರ ಬಗ್ಗೆ ಮಾತನಾಡಬೇಕು.
* ಎಲ್ಲೆಲ್ಲಿ ಪಕ್ಷದ ಅಭ್ಯರ್ಥಿ ಹಾಕಬೇಕು ಎಂದು ಸದ್ಯದಲ್ಲೇ ತೀರ್ಮಾನ ಮಾಡಲಾಗುತ್ತದೆ. ಒಂದು ವಾರದಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧವಾಗುತ್ತದೆ.
ಡಿಸೆಂಬರ್ 25ರಂದು ಹೊಸ ಪಕ್ಷದ ಘೋಷಣೆ ಮಾಡಿದ ಜನಾರ್ದನ ರೆಡ್ಡಿ ತಾವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದರು. ತಮ್ಮ ಪತ್ನಿ ಲಕ್ಷ್ಮೀ ಅರುಣಾ ಸಹ ಸಕ್ರಿಯ ರಾಜಕೀಯಕ್ಕೆ ಬರುತ್ತಾರೆ ಎಂದು ತಿಳಿಸಿದ್ದರು.












Click it and Unblock the Notifications