Kalyan Rajya Pragathi Paksha : ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ ಜನಾರ್ದನ ರೆಡ್ಡಿ
ಬೆಂಗಳೂರು, ಡಿಸೆಂಬರ್ 25; ಮಾಜಿ ಸಚಿವ, ಗಣಿ ಧಣಿ ಜನಾರ್ದನ ರೆಡ್ಡಿ ಹೊಸ ರಾಜಕೀಯ ಹೆಜ್ಜೆ ಇಟ್ಟಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದರು. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಆತ್ಮೀಯ ಸ್ನೇಹಿತ ಎಂದು ಬಣ್ಣಿಸಿದರು.
ಭಾನುವಾರ ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ, 'ಕರ್ನಾಟಕ ರಾಜ್ಯ ಪ್ರಗತಿ ಪಕ್ಷ' ಎಂಬ ರಾಜಕೀಯ ಪಕ್ಷ ಘೋಷಣೆ ಮಾಡಿದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಹೊಸ ರಾಜಕೀಯ ಪಕ್ಷ ಘೋಷಣೆಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, "ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ" ಎಂದರು.
ತಮ್ಮ ರಾಜಕೀಯದ ಹಿಂದಿನ ದಿನಗಳನ್ನು ನೆನಪಿಸಿಕೊಂಡ ಜನಾರ್ದನ ರೆಡ್ಡಿ, "ರಾಜ್ಯ ರಾಜಕಾರಣದಲ್ಲಿ ನನ್ನವರೇ ಅಂತ ನಾನು ಎಲ್ಲರನ್ನು ಮೆರೆಸಿ ನಾನೇ ಮೋಸ ಹೋದೆ. ಕಷ್ಟದಲ್ಲಿ ಯಾರೂ ನನ್ನ ಜೊತೆ ಬಂದಿಲ್ಲ. ಇದನ್ನು ನನ್ನ ಸ್ನೇಹಿತರು ಈಗಲೂ ಹೇಳುತ್ತಾರೆ" ಎಂದರು.
"ನಾನು ಕಷ್ಟದಲ್ಲಿ ಇದ್ದಾಗ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಬಿಟ್ಟು ಇನ್ನು ಯಾವ ನಾಯಕರು ನನ್ನ ಮನೆಗೆ ಬಂದಿಲ್ಲ. ಅವರು ಇಬ್ಬರು ಮಾತ್ರ ನನಗೆ ಧೈರ್ಯ ಹೇಳಿದರು. ಅವರನ್ನು ನಾನು ನೆನಪು ಮಾಡಿಕೊಳ್ಳುತ್ತೇನೆ" ಎಂದು ಜನಾರ್ದನ ರೆಡ್ಡಿ ಹೇಳಿದರು.
"2018ರಲ್ಲಿಯೇ ನಾನು ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕಿತ್ತು, ಆದರೆ ಮಾಡಲಿಲ್ಲ. ಬಿಜೆಪಿಗೆ 104 ಸ್ಥಾನ ಬಂದಾಗ ಅಮಿತ್ ಶಾ ಸಂಪರ್ಕ ಮಾಡಲು ಪ್ರಯತ್ನ ಮಾಡಿದೆ. ಆದರೆ ಅದು ಸಾಧ್ಯವಾಗಲಿಲ್ಲ. ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದವು" ಎಂದು ಜನಾರ್ದನ ರೆಡ್ಡಿ ತಿಳಿಸಿದರು.
ಒಂದು ವಾರದಿಂದ ರಾಜ್ಯದ ವಿವಿಧ ಮಠ, ದೇವಾಲಯಗಳಿಗೆ ಭೇಟಿ ನೀಡುತ್ತಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಭಾನುವಾರ ಹೊಸ ರಾಜಕೀಯ ಪಕ್ಷದ ಘೋಷಣೆ ಮಾಡಿದ್ದಾರೆ. ಈಗಾಗಲೇ ಅವರು ಕೊಪ್ಪಳದ ಗಂಗಾವತಿಯಲ್ಲಿ ಮನೆ ಮಾಡಿದ್ದು, 2023ರ ಚುನಾವಣೆಗೆ ಅಲ್ಲಿಂದಲೇ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.












Click it and Unblock the Notifications