'ರಾಹುಲ್ ಗಾಂಧಿ ಬಂದಾಗಲೂ ಬಂದ್ ಮಾಡಬೇಕಾಗುತ್ತದೆ'
ಬೆಂಗಳೂರು, ಜನವರಿ 22 : 'ನಮ್ಮ ರಾಷ್ಟ್ರೀಯ ನಾಯಕರು ಆಗಮಿಸುವ ದಿನವೇ ಬಂದ್ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದನ್ನು ಮಾಡಿಸುತ್ತಿದ್ದಾರೆ' ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು.
ಸೋಮವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಪ್ರೇರಿತ ಕಾರ್ಯಗಳಿಗೆ ಕನ್ನಡಪರ ಸಂಘಟನೆಗಳನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ದೂರಿದರು.
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಕೊಂಡಿರಲಿಲ್ಲ. ಕನ್ನಡದ ಹೋರಾಟದಲ್ಲೂ ರಾಜಕಾರಣ ಮಾಡತ್ತಿದ್ದಾರೆ. ಅದರ ಮೂಲಕ ವಿರೋಧ ಪಕ್ಷವನ್ನು ದಮನ ಮಾಡುವ ತಂತ್ರ ನಡೆದಿದೆ' ಎಂದು ಟೀಕಿಸಿದರು.

'ಅಧಿಕಾರದ ಮದದಿಂದ ಸಿದ್ದರಾಮಯ್ಯ ಅವರು ಈ ರೀತಿ ವರ್ತಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರೆದರೆ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದಾಗಲೂ ಬಂದ್ ಮಾಡಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದರು.
ಮದಹಾಯಿ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಜನವರಿ 25ರ ಗುರುವಾರ ಕರ್ನಾಟಕ ಬಂದ್ ಮತ್ತು ಫೆಬ್ರವರಿ 4ರ ಭಾನುವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ.
ಜನವರಿ 25ರಂದು ವಿಧಾನಸಭೆ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 4ರಂದು ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುವ ವೇಳೆ ಬಂದ್ ನಡೆಸುತ್ತಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಂದ್ ರಾಜಕೀಯ ಪ್ರೇರಿತ ಎಂದು ಆರೋಪ ಮಾಡುತ್ತಿದ್ದಾರೆ.












Click it and Unblock the Notifications