ಬೆಂಗಳೂರು ಶಿಕ್ಷಕರ ಕ್ಷೇತ್ರ; ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ
ಬೆಂಗಳೂರು, ಜುಲೈ 25; ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಉಪ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿ ಘೋಷಣೆ ಮಾಡಿದೆ. ಈ ಮೂಲಕ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಲಿದೆ ಎಂಬ ಸುದ್ದಿಗೆ ತೆರೆ ಬಿದ್ದಿದೆ. ಆದರೆ ಉಪ ಚುನಾವಣೆ ವೇಳಾಪಟ್ಟಿಯನ್ನು ಇನ್ನೂ ಚುನಾವಣಾ ಆಯೋಗ ಘೋಷಣೆ ಮಾಡಿಲ್ಲ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಅಧಿಕೃತ ಅಭ್ಯರ್ಥಿಯಗಿ ಎ. ಪಿ. ರಂಗನಾಥ್ ಹೆಸರು ಘೋಷಣೆ ಮಾಡಲಾಗಿದೆ. ವಕೀಲ ರಂಗನಾಥ್ ಜೆಡಿಎಸ್ನ ಕಾನೂನು ವಿಭಾಗದ ರಾಜ್ಯಾಧ್ಯಕ್ಷರು. ಈ ಹಿಂದೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಪತ್ರಿಕಾ ಪ್ರಕಟಣೆಯಲ್ಲಿ ಜೆಡಿಎಸ್ ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ರಂಗನಾಥ್, ವಕೀಲರು ಹಾಗೂ ರಾಜ್ಯಾಧ್ಯಕ್ಷರು. ಕಾನೂನು ವಿಭಾಗ, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಇವರನ್ನು ಜನತಾದಳ (ಜಾತ್ಯತೀತ) ಪಕ್ಷದ ಅಧಿಕೃತ ಅಭ್ಯರ್ಥಿಯೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ. ದೇವೇಗೌಡರವರು ಹಾಗೂ ಕರ್ನಾಟಕ ಜನತಾದಳ (ಜಾತ್ಯತೀತ) ಶಾಸಕಾಂಗ ಪಕ್ಷದ ನಾಯಕರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಘೋಷಿಸಲಾಗಿದೆ ಎಂದು ಹೇಳಿದೆ.
ಉಪ ಚುನಾವಣೆ ಏಕೆ?; ನವೆಂಬರ್ 2020ರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಪುಟ್ಟಣ್ಣ ಗೆಲುವು ಸಾಧಿಸಿದ್ದರು. ಆದರೆ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಪೂರ್ಣಗೊಳಿಸಲು ಮೂರು ವರ್ಷಗಳಿಗಿಂತ ಹೆಚ್ಚು ಸಮಯ ಉಳಿದಿರುವಾಗಲೇ ರಾಜೀನಾಮೆ ನೀಡಿದ್ದರು.
ಈ ಬಾರಿಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಪುಟ್ಟಣ್ಣ ವಿಧಾನ ಪರಿಷತ್ ಸದಸ್ಯತ್ವ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಪುಟ್ಟಣ್ಣಗೆ ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. 50564 ಮತಗಳನ್ನು ಪಡೆದ ಅವರು ಬಿಜೆಪಿಯ ಸುರೇಶ್ ಕುಮಾರ್ ವಿರುದ್ಧ (58624) ಸೋಲು ಕಂಡಿದ್ದರು.
2020ರಲ್ಲಿ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿಯೂ ಎ. ಪಿ. ರಂಗನಾಥ್ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ 2228 ಮತಗಳ ಅಂತರದಲ್ಲಿ ರಂಗನಾಥ್ ಸೋಲಿಸಿದ್ದರು. ಆದರೆ ಪರಿಷತ್ ಸದಸ್ಯತ್ವ ಅವಧಿ ಪೂರ್ಣಗೊಳ್ಳುವ ಮೊದಲೇ ಅವರು ರಾಜೀನಾಮೆ ನೀಡಿದ್ದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪುಟ್ಟಣ್ಣ 7335 ಮತಗಳು, ಎ. ಪಿ. ರಂಗನಾಥ 5107 ಮತಗಳನ್ನು ಪಡೆದಿದ್ದರು. ಈ ಹಿಂದೆ ಜೆಡಿಎಸ್ನಲ್ಲಿದ್ದ ಪುಟ್ಟಣ್ಣ ಬಳಿಕ ಬಿಜೆಪಿ ಸೇರಿ, ಪರಿಷತ್ ಸದಸ್ಯರಾಗಿದ್ದರು. ಬಳಿಕ, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.
ಪುಟ್ಟಣ್ಣ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿ ಸತತ 4 ಬಾರಿ ಆಯ್ಕೆಯಾಗಿದ್ದಾರೆ. ಮೂರು ಬಾರಿ ಅವರು ಜೆಡಿಎಸ್ನಿಂದ ಚುನಾವಣೆಯಲ್ಲಿ ಗೆದ್ದಿದ್ದರು. ಒಂದು ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯುವ ಉಪ ಚುನಾವಣೆಗೆ ಇನ್ನೂ ವೇಳಾಪಟ್ಟಿ ಘೋಷಣೆ ಮಾಡಿಲ್ಲ. ಎರಡು ತಿಂಗಳಿನಲ್ಲಿ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ.












Click it and Unblock the Notifications