'ಜಮೀರ್ ಹೇಳಿದರೆ ಮಾತ್ರ ಹೆಬ್ಬಾಳದಲ್ಲಿ ಸ್ಪರ್ಧೆ'
ಬೆಂಗಳೂರು, ಜನವರಿ 23 : ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹೆಬ್ಬಾಳ ಮತ್ತು ಬೀದರ್ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ದೇವೇಗೌಡ ಅವರು, 'ದೇವದುರ್ಗ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕರಿಯಮ್ಮ ಅವರು ಕಣಕ್ಕಿಳಿಯಲಿದ್ದಾರೆ' ಎಂದು ಹೇಳಿದರು. 'ಹೆಬ್ಬಾಳ ಮತ್ತು ಬೀದರ್ ಕ್ಷೇತ್ರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ' ಎಂದು ಸ್ಪಷ್ಟಪಡಿಸಿದರು. [ಉಪ ಚುನಾವಣೆ ವೇಳಾಪಟ್ಟಿ]

'ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಹೇಳಿದರೆ ಮಾತ್ರ ಪಕ್ಷ ಹೆಬ್ಬಾಳದಲ್ಲಿ ಸ್ಪರ್ಧಿಸಲಿದೆ. ಬಂಡೆಪ್ಪ ಕಾಶಂಪುರ ಅವರು ಒಪ್ಪಿಗೆ ನೀಡಿದರೆ ಮಾತ್ರ ಬೀದರ್ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಲಾಗುತ್ತದೆ' ಎಂದು ದೇವೇಗೌಡ ತಿಳಿಸಿದರು. [ಮೂವರು ಅಭ್ಯರ್ಥಿಗಳ ಆಯ್ಕೆಗೆ ಸಿಂಗ್ ಬರಬೇಕಿತ್ತೇ?]
ಯಾರೂ ಸಂಪರ್ಕ ಮಾಡಿಲ್ಲ : ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಮಾಜಿ ರೈಲ್ವೆ ಸಚಿವ ಜಾಫರ್ ಷರೀಫ್ ಅವರ ಮೊಮ್ಮಗ ರೆಹಮಾನ್ ಷರೀಫ್ ಒಲವು ತೋರಿದ್ದಾರೆ ಎಂಬ ಬಗ್ಗೆ ತಮಗೆ ತಿಳಿದಿಲ್ಲ ಎಂದು ದೇವೇಗೌಡ ಅವರು ಹೇಳಿದರು. 'ರೆಹಮಾನ್ ಷರೀಫ್ ಅವರಿಗೆ ಟಿಕೆಟ್ ನೀಡುವಂತೆ ಯಾರೂ ನಮ್ಮನ್ನು ಸಂಪರ್ಕ ಮಾಡಿಲ್ಲ' ಎಂದು ಅವರು ತಿಳಿಸಿದರು.
'ಟಿಕೆಟ್ಗಾಗಿ ದೆಹಲಿಗೆ ಹೋಗಿ ಬರುತ್ತೇನೆ ಎಂದು ಸಿ.ಕೆ.ಜಾಫರ್ ಷರೀಫ್ ಹೇಳಿದ್ದಾರೆ. ಬಹುಶಃ ಕಾಂಗ್ರೆಸ್ ಟಿಕೆಟ್ ಸಿಗಬಹುದು' ಎಂದು ದೇವೇಗೌಡರು ಹೇಳಿದರು. 'ಕ್ಷೇತ್ರದಲ್ಲಿ ರೆಹಮಾನ್ ಷರೀಫ್ ಅವರಿಗೆ ಟಿಕೆಟ್ ನೀಡುವ ಕುರಿತು ಪಕ್ಷ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ' ಎಂದರು.
ಹೆಬ್ಬಾಳ, ದೇವದುರ್ಗ, ಬೀದರ್ ಕ್ಷೇತ್ರದಲ್ಲಿ ಫೆ.13ರಂದು ಉಪ ಚುನಾವಣೆ ನಡೆಯಲಿದ್ದು, ಫೆ.16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಶಾಸಕರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಇದುವರೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ.












Click it and Unblock the Notifications