JDS list; ಪಕ್ಷ ಬಿಡುವ ನಾಯಕರ ಕ್ಷೇತ್ರಕ್ಕೆ ಅಭ್ಯರ್ಥಿಗಳು ಯಾರು?
ಬೆಂಗಳೂರು, ಡಿಸೆಂಬರ್ 19; 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧತೆ ಆರಂಭಿಸಿದೆ. ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಿಂತ ಮೊದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಸೋಮವಾರ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಈ ಪಟ್ಟಿಗೆ ಪಕ್ಷದ ಸಂಸದೀಯ ಮಂಡಳಿ ಹಾಗೂ ರಾಷ್ಟೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಅನುಮೋದನೆ ನೀಡಿದ್ದಾರೆ.

ಜೆಡಿಎಸ್ ಮೊದಲ ಪಟ್ಟಿಯಲ್ಲಿ ಹಾಲಿ, ಮಾಜಿ ಶಾಸಕರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಪಕ್ಷ ಬಿಟ್ಟಿರುವ, ಪಕ್ಷ ಬಿಡುವ ತಯಾರಿಯಲ್ಲಿರುವ ನಾಯಕರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಈಗಲೇ ಪಟ್ಟಿ ಬಿಡುಗಡೆ ಮಾಡುವ ಮೂಲಕ ಅಭ್ಯರ್ಥಿಗಳು ಚುನಾವಣಾ ಸಿದ್ಧತೆಗ ಕೈಗೊಳ್ಳಲು ಪಕ್ಷ ಸಾಕಷ್ಟು ಸಮಯ ನೀಡಿದೆ.
ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಗಳು?; ಜೆಡಿಎಸ್ ಪ್ರಕಟಿಸಿರುವ ಪಟ್ಟಿಯಲ್ಲಿ ಕೋಲಾರ, ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಹಾಲಿ ಜೆಡಿಎಸ್ ಶಾಸಕರಿದ್ದಾರೆ. ಆದರೆ ಅವರು ಪಕ್ಷ ಬಿಡಲಿದ್ದಾರೆ. ಆದ್ದರಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಕೋಲಾರ ಕ್ಷೇತ್ರದ ಹಾಲಿ ಶಾಸಕರು ಕೆ. ಶ್ರೀನಿವಾಸ ಗೌಡ. ರಾಜ್ಯಸಭೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಲ್ಲದೇ ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್ಗೆ ದೂರು ನೀಡಲಾಗಿದೆ. ಜೆಡಿಎಸ್ ಪಟ್ಟಿಯಲ್ಲಿ ಕೋಲಾರ ಕ್ಷೇತ್ರಕ್ಕೆ ಸಿ. ಎಂ. ಆರ್. ಶ್ರೀನಾಥ್ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.

ಗುಬ್ಬಿ ಕ್ಷೇತ್ರದ ಹಾಲಿ ಶಾಸಕರು ಎಸ್. ಆರ್. ಶ್ರೀನಿವಾಸ್. ಆದರೆ ಜೆಡಿಎಸ್ ಪಟ್ಟಿಯಲ್ಲಿ ನಾಗರಾಜ ಮುಂದಿನ ಚುನಾವಣೆ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಅಮಾನತುಗೊಂಡಿರುವ ಎಸ್. ಆರ್. ಶ್ರೀನಿವಾಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ.
ತೀರ್ಥಹಳ್ಳಿ ಕ್ಷೇತ್ರದ ಪಕ್ಷದ ನಾಯಕ ಆರ್. ಎಂ. ಮಂಜುನಾಥ ಗೌಡ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಜೆಡಿಎಸ್ ಪಟ್ಟಿಯಲ್ಲಿ ರಾಜಾರಾಮ್ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.
ಜೆಡಿಎಸ್ ತೊರೆಯುವೆ ಎಂದು ಹೇಳಿದ್ದ ಕೊನೆ ಕ್ಷಣದಲ್ಲಿ ತೀರ್ಮಾನ ಬದಲಿಸಿದ ಚಾಮುಂಡೇಶ್ವರಿ ಕ್ಷೇತ್ರ ಶಾಸಕ ಜಿ. ಟಿ. ದೇವೇಗೌಡರಿಗೆ ಅದೇ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಲದೇ ಅವರ ಪುತ್ರ ಹರೀಶ್ ಗೌಡರಿಗೆ ಹುಣಸೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಕಡೂರು ಕ್ಷೇತ್ರದ ಮಾಜಿ ಶಾಸಕ ವೈ. ಎಸ್. ವಿ. ದತ್ತಾ ಜೆಡಿಎಸ್ ಪಕ್ಷ ಬಿಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಆದರೆ ಪಟ್ಟಿಯಲ್ಲಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪಕ್ಷ ಘೋಷಣೆ ಮಾಡಿಲ್ಲ. ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಸಹ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ. ಪಕ್ಷ ಕ್ಷೇತ್ರಕ್ಕೆ ಸೋಮವಾರ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದ ಹಾಲಿ ಶಾಸಕ ಶಿವಲಿಂಗೇ ಗೌಡ ಸಹ ಪಕ್ಷ ಬಿಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಮೊದಲ ಪಟ್ಟಿಯಲ್ಲಿ ಪಕ್ಷ ಹಾಸನ ಜಿಲ್ಲೆಯ ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿಲ್ಲ.












Click it and Unblock the Notifications