ನಿಖಿಲ್ ಕುಮಾರಸ್ವಾಮಿ ಭೇಟಿಯಾದ ಶರಣಗೌಡ ಕಂದಕೂರು
ಬೆಂಗಳೂರು, ಸೆಪ್ಟೆಂಬರ್ 28; ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದರು. ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕರನ್ನು ನಿಖಿಲ್ ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಕುರಿತು ಪೋಸ್ಟ್ ಹಾಕಿದ್ದಾರೆ. 'ಜೆಡಿಎಸ್ ಪಕ್ಷದ ಯುವ ನಾಯಕರು, ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಶಾಸಕರು ಹಾಗೂ ನನ್ನ ಆತ್ಮಿಯ ಸ್ನೇಹಿತರೂ ಆಗಿರುವ ಶ್ರೀ ಶರಣುಗೌಡ ಕಂದಕೂರು ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದೆ' ಎಂದು ಹೇಳಿದ್ದಾರೆ.

'ಬಹುಮುಖ್ಯವಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆ, ಎನ್ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆ ಮತ್ತು ಪಕ್ಷ ಸಂಘಟನೆಯ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸದೃಢಗೊಳಿಸುವುದು, ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಈ ಸಂದರ್ಭದಲ್ಲಿ ಆಲೋಚನೆ ನಡೆಸಲಾಯಿತು. ಅತ್ಯಂತ ಪ್ರೀತಿ, ವಿಶ್ವಾಸದಿಂದ ಚರ್ಚೆ ನಡೆಯಿತು' ಎಂದು ನಿಖಿಲ್ ಭೇಟಿಯ ಫೋಟೋವನ್ನು ಸಹ ಹಾಕಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ; 2024ರ ಲೋಕಸಭೆ ಚುನಾವಣೆ ಎದುರಿರುವಾಗ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಮಹತ್ವದ ಹೆಜ್ಜೆ ಇಟ್ಟಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಪಕ್ಷ ಸೇರಿಕೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಸೀಟಿ ಹಂಚಿಕೆ ಮಾಡಿಕೊಳ್ಳಲಿವೆ.
ಕಳೆದ ಶುಕ್ರವಾರ ನವದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿದ್ದರು. ನಿಖಿಲ್ ಕುಮಾರಸ್ವಾಮಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಚ್. ಡಿ. ಕುಮಾರಸ್ವಾಮಿ ಭೇಟಿಯ ಬಳಿಕ ಜೆ. ಪಿ. ನಡ್ಡಾ ಜೆಡಿಎಸ್ ಪಕ್ಷವನ್ನು ಎನ್ಡಿಎ ಮೈತ್ರಿಕೂಟಕ್ಕೆ ಸ್ವಾಗತಿಸಿ ಟ್ವೀಟ್ ಮಾಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಕೇವಲ ಒಂದು ಸ್ಥಾನ ಗೆದ್ದಿರುವ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಜೆಡಿಎಸ್-ಬಿಜೆಪಿ ಮೈತ್ರಿಗೆ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿದೆ. ಶಾಸಕ ಶರಣಗೌಡ ಕಂದಕೂರ ಸಹ ಮೈತ್ರಿ ವಿರೋಧಿಸಿದ್ದರು. ಪಕ್ಷದ ಕೆಲವು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ. ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಸಹ ಕಾಂಗ್ರೆಸ್ಗೆ ವಾಪಸ್ ಆಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ಮೈತ್ರಿಯ ಕುರಿತು ಶಾಸಕ ಶರಣಗೌಡ ಕಂದಕೂರ ಮಾತನಾಡಿ, "ಇದು ನನ್ನೊಬ್ಬನ ಮಾತಲ್ಲ, ಪಕ್ಷದ ಬಹುತೇಕ ಹಾಲಿ ಮತ್ತು ಮಾಜಿ ಶಾಸಕರ ಅಭಿಪ್ರಾಯವಾಗಿದೆ. ಆದರೆ ಅವರು ಯಾರೂ ಬಹಿರಂಗವಾಗಿ ಕೇಳಿಕೊಳ್ಳುತ್ತಿಲ್ಲ" ಎಂದು ಹೇಳಿದ್ದರು.
"2018ರಲ್ಲಿ ರಚನೆಯಾಗಿದ್ದ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಹಣದಿಂದ ಕೆಡವಿದ್ದು ಬಿಜೆಪಿ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದ ನಮ್ಮ ನಾಯಕರು ಅದೇ ಬಿಜೆಪಿ ಜೊತೆ ಕೈ ಜೋಡಿಸುವುದು ನನಗೆ ಇಷ್ಟವಿಲ್ಲ" ಎಂದು ಶಾಸಕರು ವಿವರಿಸಿದ್ದರು.
"ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಮುಖಂಡರು ನೇರವಾಗಿ ಬಿಜೆಪಿ ಜೊತೆಗಿನ ಪೈಪೋಟಿ ಎದುರಿಸಿ ಸೋತರೆ ಕೆಲವು ಶಾಸಕರು ಮಾತ್ರ ಗೆಲುವು ಕಂಡಿದ್ದಾರೆ. ಆದರೆ ಈಗ ಇಂತಹ ರಾಜಕೀಯ ವಿರೋಧಿಗಳ ಜೊತೆಯಲ್ಲಿಯೇ ಕೂಡಿ ಚುನಾವಣೆ ಎದುರಿಸಲು ಸಾಧ್ಯವೇ?" ಎಂದು ಶಾಸಕರು ಪ್ರಶ್ನೆ ಮಾಡಿದ್ದರು.
ಮೈತ್ರಿ ವಿರೋಧಿಸಿ ಹೇಳಿಕೆ ನೀಡಿದ್ದ ಶಾಸಕ ಶರಣಗೌಡ ಕಂದಕೂರ ಈಗ ಮೈತ್ರಿ ಬಳಿಕ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಭೇಟಿ ಮಾಡಿದ್ದರು.












Click it and Unblock the Notifications