ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ತೀವ್ರ ವಿರೋಧ: ಪ್ರತ್ಯೇಕ ಸಭೆ ನಡೆಸಿದ ಬಿಜೆಪಿ ನಾಯಕರು
ಹಾಸನ, ಮಾರ್ಚ್ 18: ಲೋಕಸಭಾ ಚುನಾವಣೆಯ ಕಾವು ಬೇಸಿಗೆ ಬೀಸಿಲಿನ ತಾಪಕ್ಕಿಂತ ಹೆಚ್ಚಾಗಿದೆ. ಕಾಂಗ್ರೆಸ್ ಠಕ್ಕರ್ ಕೊಡಲು ಕಮಲ-ದಳ ನಾಯಕರು ಮೈತ್ರಿಯಾಗಿದ್ದು, ಆರಂಭದಲ್ಲೇ ಬಿಜೆಪಿ-ಜೆಡಿಎಸ್ ದೋಸ್ತಿಯಲ್ಲಿ ಬಿರುಕು ಉಂಟಾಗಿದೆ.
ಹೌದು, 2019 ರ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಗೆಲುವು ಕಂಡಿದ್ದ ಜೆಡಿಎಸ್, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಯಾಗಿದ್ದು, ಮೂರು ಕ್ಷೇತ್ರವನ್ನ ಕೇಳಿದೆ. ಆದರೆ, ಈ ಮೂರು ಕ್ಷೇತ್ರದಲ್ಲೂ ಜೆಡಿಎಸ್ ವಿರುದ್ಧವಾಗಿ ಸ್ಥಳೀಯ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಾಸನ ಜೆಡಿಎಸ್ ನಾಯಕರ ಭದ್ರಕೋಟೆ. ಈ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಪ್ರಾಬಲ್ಯವನ್ನ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸರಣಿ ಸಭೆಗಳನ್ನ ನಡೆಸುತ್ತಿದ್ದಾರೆ. ಆದರೆ, ಜೆಡಿಎಸ್ ನಾಯಕರಿಗೆ ಹಾಸನದ ಬಿಜೆಪಿ ನಾಯಕರೇ ದೊಡ್ಡ ತಲೆನೋವಾಗಿದೆ. ಈ ಹಿಂದೆ ಮೈತ್ರಿಗೂ ಮೊದಲು ಬಹಿರಂಗವಾಗಿಯೇ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರು ಮೈತ್ರಿಗೆ ವಿರೋಧವನ್ನ ವ್ಯಕ್ತಪಡಿಸಿದರು.
ಈಗಾಗಲೇ ಹಾಸನದಿಂದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಘೋಷಿಸಿದ್ದಾರೆ. ಆದರೆ, ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸಲು ಬಿಜೆಪಿ ನಾಯಕರು ಒಪ್ಪುತ್ತಿಲ್ಲ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಶಾಸಕ ಎಟಿ ರಾಮಸ್ವಾಮಿ, ಶಾಸಕ ಸಿಮೆಂಟ್ ಮಂಜು, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಪ್ರಜ್ವಲ್ ಅವರ ಅನರ್ಹತೆ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ಚುನಾವಣೆಯ ಹೊತ್ತಿನಲ್ಲಿಯೇ ತೀರ್ಪು ಬಂದರೆ, ಮೈತ್ರಿಕೂಟಕ್ಕೆ ಮುಖಭಂಗವಾಗಲಿದೆ. ಸುರಕ್ಷತೆಗಾಗಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಸೂಚಿಸಬೇಕು ಎಂದು ಬಿಜೆಪಿ ಮುಖಂಡರು, ದಾಖಲೆಗಳ ಸಹಿತ ಕೇಂದ್ರ ನಾಯಕರಿಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ಸ್ಪರ್ಧೆಗೆ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದು, ಅಮಿತ್ ಶಾ ಮೈಸೂರಿಗೆ ಬಂದಾಗಲೂ ಅದನ್ನೇ ಹೇಳಿದ್ದರು. ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಿರುವ ಬಿಜೆಪಿ ಮುಖಂಡ ದೇವರಾಜೇಗೌಡರ ಮೂಲಕ ದಾಖಲೆಗಳನ್ನು ಅಮಿತ್ ಶಾ ಮುಂದಿಟ್ಟಿದ್ದು, ಮೈತ್ರಿ ಅಭ್ಯರ್ಥಿ ಬದಲಿಸುವಂತೆ ಪಟ್ಟು ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.
ಹಾಸನದಿಂದ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಆದರೆ ಗೆಲ್ಲುವ ಸಾದ್ಯತೆ ಕಡಿಮೆ. ಜೆಡಿಎಸ್ ಆಂತರಿಕವಾಗಿಯೇ ಪ್ರಜ್ವಲ್ ಗೆ ವಿರೋಧ ಇದೆ ಎಂದು ವರದಿಯಾಗಿದೆ. ಮಾಹಿತಿ ಸಂಗ್ರಹಿಸಲು ಬಂದ ರಾಜ್ಯ ತಂಡದ ಮುಂದೆಯೂ ಪ್ರಜ್ವಲ್ ಅಭ್ಯರ್ಥಿ ಆಗಲು ವಿರೋಧ ವ್ಯಕ್ತವಾಗಿದೆ. ಸ್ಥಳೀಯ ಮುಖಂಡರ ಅಭಿಪ್ರಾಯ ಆಧರಿಸಿ ಅಭ್ಯರ್ಥಿ ಬದಲು ಮಾಡಲು ಬಿಜೆಪಿ ಹೈ ಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈಗಾಗಲೆ ಪ್ರಜ್ವಲ್ ಹಾಸನದ ಲೋಕಸಭಾ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಅಭ್ಯರ್ಥಿ ಘೋಷಣೆ ಮಾಡಿ ತಿಂಗಳೆ ಕಳೆದರೂ ಪರಸ್ಪರ ಜಂಟಿಯಾಗಿ ಒಂದೆ ಒಂದು ಸಭೆ ನಡೆಸಿಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ.












Click it and Unblock the Notifications