ಚುನಾವಣಾ ಪೂರ್ವ ಮೈತ್ರಿ: ಬಿಎಸ್ಪಿ-ಜೆಡಿಎಸ್ ಸೀಟು ಹಂಚಿಕೆ ಅಂತಿಮ
ಬೆಂಗಳೂರು, ಫೆಬ್ರವರಿ 08 : ಜಾತ್ಯಾತೀತ ಜನತಾ ದಳ (ಜೆಡಿಎಸ್) ಹಾಗೂ ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ನಡುವೆ ಚುನಾವಣಾ ಪೂರ್ವ ಮೈತ್ರಿ ಅಧಿಕೃತಗೊಂಡಿದೆ. ಜತೆಗೆ ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ - 2018ರ ಸೀಟು ಹಂಚಿಕೆಯೂ ಅಂತಿಮಗೊಂಡಿದೆ.
ಈ ಸೀಟು ಹಂಚಿಕೆ ಮತ್ತು ಚುನಾವಣಾ ಪೂರ್ವ ಮೈತ್ರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸಮ್ಮತಿಸಿದ್ದಾರೆ.
ಆನೆ ಗುರುತು ಹಾಗೂ ತೆನೆ ಹೊತ್ತ ಮಹಿಳೆ ಜತೆ ಜತೆಯಾಗಿ ವಿಧಾನಸಭಾ ಚುನಾವಣೆ ಎದುರಿಸಲಿದ್ದು ಜೆಡಿಎಸ್ 204 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಬಿಎಸ್ಪಿ 20 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಈ ಕುರಿತು ದೆಹಲಿಯಲ್ಲಿ ಮಾಹಿತಿ ನೀಡಿರುವ ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನೀಶ್ ಅಲಿ, "ಇದೇ ಫೆಬ್ರವರಿ 17ರಂದು ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಯಲಿದೆ. ರ್ಯಾಲಿಯಲ್ಲಿ ದೇವೇಗೌಡರು ಮತ್ತು ಮಾಯಾವತಿ ಭಾಗವಹಿಸಲಿದ್ದಾರೆ. ಈ ರ್ಯಾಲಿ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ," ಎಂದು ಮಾಹಿತಿ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಕೂಡಾ ಹಾಜರಿದ್ದರು.
ಕರ್ನಾಟಕದ ಚುನಾವಣೆ ಮಟ್ಟಿಗೆ ಬಿಎಸ್ಪಿ ಜತೆಗಿನ ಮೈತ್ರಿ ಜೆಡಿಎಸ್ ಪಾಲಿಗೆ ಪ್ರಮುಖ ಬದಲಾವಣೆ ತರಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications