ಕೊನೆಗೂ ಫೈನಲ್ ಆಯ್ತು ಕ್ಷೇತ್ರ ಹಂಚಿಕೆ : 25 ಬಿಜೆಪಿ, 3 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಕುಮಾರಸ್ವಾಮಿ ಘೋಷಣೆ
ಬೆಂಗಳೂರು, ಮಾರ್ಚ್ 18: ಲೋಕಸಭಾ ಚುನಾವಣೆಯಲ್ಲಿ ಕಾವು ದಿನದಿಂದ ದಿನಕ್ಕೆ ಜೋರಾಗಿದ್ದು, ಆಡಳಿತರೂಢ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ಹೆಣೆಯಲೂ ಮೈತ್ರಿಯಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಕುರಿತು ಕ್ಷೇತ್ರ ಹಂಚಿಕೆ ಕುರಿತು ಹಲವು ಸುತ್ತಿನ ಮಾತುಕತೆಯನ್ನ ಜೆಡಿಎಸ್ ನಡೆಸಿದ್ದು, ಕೊನೆಗೂ ಜೆಡಿಎಸ್ ಮೂರು ಕ್ಷೇತ್ರಗಳನ್ನ ಪಡೆದುಕೊಂಡಿದೆ.
ಹೌದು, ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎಂದು ಘೋಷಣೆ ಮಾಡಿದರು. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಬಿಜೆಪಿಗೆ 25 ಕ್ಷೇತ್ರ ಮೂರು ಕ್ಷೇತ್ರಗಳಲ್ಲಿ ನಾವು ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಅಧಿಕೃತವಾಗಿ ಘೋಷಣೆ ಆಗೋವರೆಗೂ ಮಾತನಾಡುವುದಿಲ್ಲ. ಆದರೆ, ಅಭ್ಯರ್ಥಿಗಳ ಘೋಷಣೆ ಹಾಗೂ ಕ್ಷೇತ್ರಗಳ ಹಂಚಿಕೆ ವಿಳಂಬ ಆಗುತ್ತಿದೆ ಎಂದು ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದರು. ನಾವು ಬಿಜೆಪಿಯಿಂದ 6-7 ಸೀಟು ಕೇಳಿಲ್ಲ. ನಾವು ಕೇಳಿರೋದು 3-4 ಸೀಟು ಮಾತ್ರ. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. 3-4 ಸೀಟು ಕೊಡ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದೇನೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಹಾನಸ, ಮಂಡ್ಯದಲ್ಲಿ ಸ್ವತಂತ್ರವಾಗಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ತ್ರಿಕೋನ ಸ್ಪರ್ಧೆ ಆದರೆ ಸುಲಭವಾಗಿ ನಾವು ಗೆಲ್ಲುತ್ತೇವೆ. ಆದರೆ 18 ಕ್ಷೇತ್ರಗಳಲ್ಲಿ ಬಿಜೆಪಿಗೆ ನಮ್ಮ ಪಕ್ಷದಿಂದ ಅನುಕೂಲ ಆಗಲಿದೆ. ಈ ವಿಷಯವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಮ್ಮ ಶಕ್ತಿ ಧಾರೆ ಎರೆದರೆ ಬಿಜೆಪಿಗೆ ಒಳ್ಳೆಯ ಫಲಿತಾಂಶ ಬರುತ್ತದೆ. ಏಕೆಂದರೆ ಕರ್ನಾಟಕದ ರಾಜಕೀಯ ಬೇರೆ, ದೇಶದ ಇತರೆ ರಾಜ್ಯಗಳ ರಾಜಕೀಯವೇ ಬೇರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ನನ್ನ ಮೇಲೆ ಒತ್ತಡ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

18 ಕ್ಷೇತ್ರಗಳಲ್ಲಿ ಬಿಜೆಪಿಗೆ ಅನುಕೂಲ ಆಗುತ್ತದೆ
ನಮ್ಮ ಪಕ್ಷದ ಮುಖಂಡರು ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಗೆ ದೊಡ್ಡ ಲಾಭವಿಲ್ಲ ಅಂತ ಹೇಳಿದ್ದಾರೆ. 18 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷದ ಮತಗಳಲ್ಲಿ 3%-4% ಬಿಜೆಪಿಗೆ ಸ್ವಿಂಗ್ ಆದರೆ 18 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಮ್ಮ ಪಕ್ಷದ ದುಡಿಮೆ ಬಿಜೆಪಿಗೆ ಅನುಕೂಲ ಆಗುತ್ತದೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ಹೇಳಿದ್ದಾರೆ. ಬಿಜೆಪಿ ಸರಿಯಾಗಿ ನಮ್ಮನ್ನು ಬಳಿಕೆ ಮಾಡಿಕೊಳ್ಳಲಿ. ಇಲ್ಲದೆ ಹೋದರೆ ಮುಂದೆ ಪೆಟ್ಟು ಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿ ಜವಾಬ್ದಾರಿ ಆಗಲಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು.
ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು ನನ್ನ ವಿನಂತಿ. ನಮ್ಮ ಗುರಿ ನಾವು ಮುಟ್ಟ ಬೇಕು. ನಮ್ಮ ಗುರಿ ಅಧಿಕಾರ ಅಲ್ಲ, ರಾಜ್ಯದ ಅಭಿವೃದ್ಧಿ ಮಾತ್ರ. 75 ವರ್ಷಗಳಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ.
ಮೈತ್ರಿ ಕಾರಣ ನಮ್ಮ ರಾಜ್ಯದ ಅಭಿವೃದ್ಧಿಗೆ ಪರಿಹಾರ ತರಬೇಕು. ನಿತ್ಯ ಕೇಂದ್ರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ 45 ವರ್ಷ ರಾಜ್ಯ, ದೇಶವನ್ನು ಆಳಿದೆ. ಕಾಂಗ್ರೆಸ್ ನ ಕೊಡುಗೆ ರಾಜ್ಯಕ್ಕೆ ಏನು? ನಿಮ್ಮಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಇದನ್ನು ಸರಿ ಮಾಡೋಕೆ ನಮ್ಮ ಮೈತ್ರಿ ಆಗಿದೆ. ಲೋಕಸಭೆಯಲ್ಲಿ ದನಿ ಗಟ್ಟಿಯಾಗಿರಬೇಕು. ಲೋಕಸಭೆಯಲ್ಲಿ ನಮ್ಮ ದನಿ ಇರಬೇಕು ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications