ಜೆಡಿಎಸ್-ಕಾಂಗ್ರೆಸ್ಗೆ ಎಷ್ಟು ಸೀಟು?, ಮಾ.16ರಂದು ಅಧಿಕೃತ ಘೋಷಣೆ
ಬೆಂಗಳೂರು, ಮಾರ್ಚ್ 13 : ಕಾಂಗ್ರೆಸ್-ಜೆಡಿಎಸ್ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡಿಲ್ಲ. ಎರಡು ಕ್ಷೇತ್ರಗಳ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಹಗ್ಗ-ಜಗ್ಗಾಟ ಮುಂದುವರೆದಿದೆ. ಆದ್ದರಿಂದ, ಅಭ್ಯರ್ಥಿಯನ್ನು ಅಂತಿಮಗೊಳಿಸಲು ಆಗಿಲ್ಲ.
ಮೈಸೂರು-ಕೊಡಗು ಮತ್ತು ತುಮಕೂರು ಕ್ಷೇತ್ರಗಳಿಗೆ ಎರಡೂ ಪಕ್ಷಗಳ ನಡುವೆ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರವನ್ನು ಬಿಟ್ಟುಕೊಡಲು ಇನ್ನೂ ಒಪ್ಪಿಗೆ ನೀಡಿಲ್ಲ.
ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ವಿರೋಧದ ನಡುವೆಯೂ ವಿಜಯಪುರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಬೇಕಾದರೆ ಬಿಟ್ಟುಕೊಡುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.
ಜೆಡಿಎಸ್-ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಬಗ್ಗೆ ಮಾ.16ರಂದು ಅಂತಿಮ ಘೋಷಣೆ ಮಾಡಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಅವರು ಕಾಂಗ್ರೆಸ್ ನಾಯಕರ ಜೊತೆ ಇಂದು ಸಂಜೆ ಮತ್ತೊಮ್ಮೆ ಮಾತುಕತೆ ನಡೆಸಲಿದ್ದಾರೆ....

ಜೆಡಿಎಸ್ಗೆ ಸಿಕ್ಕಿರುವ ಕ್ಷೇತ್ರಗಳು
ಕಾಂಗ್ರೆಸ್-ಜೆಡಿಎಸ್ ನಡುವೆ ನಡೆದಿರುವ ಮಾತುಕತೆಯಲ್ಲಿ 6 ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟಕೊಡಲಾಗಿದೆ. ಹಾಸನ, ಮಂಡ್ಯ, ಬೆಂಗಳೂರು ಉತ್ತರ, ಶಿವಮೊಗ್ಗ, ಉತ್ತರ ಕನ್ನಡ, ವಿಜಯಪುರ ಕ್ಷೇತ್ರಗಳು ಜೆಡಿಎಸ್ಗೆ ಸಿಕ್ಕಿವೆ.

ಬೆಂಗಳೂರು ಉತ್ತರ ಕ್ಷೇತ್ರ
ಬೆಂಗಳೂರು ಉತ್ತರ ಕ್ಷೇತ್ರವನ್ನು ಜೆಡಿಎಸ್ ಕೇಳಿರಲಿಲ್ಲ. ಆದರೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಕಾರಣಕ್ಕೆ ಐವರು ಕಾಂಗ್ರೆಸ್ ಶಾಸಕರಿದ್ದರೂ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ.

ಎರಡು ಕ್ಷೇತ್ರಕ್ಕಾಗಿ ಜಟಾಪಟಿ
ಉಭಯ ಪಕ್ಷಗಳ ನಡುವೆ ಮೈಸೂರು-ಕೊಡಗು ಮತ್ತು ತುಮಕೂರು ಕ್ಷೇತ್ರಗಳಿಗಾಗಿ ಜಟಾಪಟಿ ನಡೆಯುತ್ತಿದೆ. ಒಂದು ವೇಳೆ ದೇವೇಗೌಡರು ಮೈಸೂರಿನಿಂದ ಸ್ಪರ್ಧೆ ಮಾಡಿದರೆ ಮೈಸೂರು ಬಿಟ್ಟುಕೊಟ್ಟು ಬೆಂಗಳೂರು ಉತ್ತರ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಆದರೆ, ತುಮಕೂರನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.

ಒಂದು ಕ್ಷೇತ್ರ ಪಡೆಯಬೇಕು
ಬುಧವಾರ ಸಂಜೆ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಲು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಹೋಗುತ್ತಿದ್ದಾರೆ. ಭೇಟಿಯ ವೇಳೆ ಮೈಸೂರು-ಕೊಡಗು ಅಥವ ತುಮಕೂರ ಇವರೆಡರಲ್ಲಿ ಒಂದು ಕ್ಷೇತ್ರ ಪಡೆಯಬೇಕು ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಸೂಚನೆ ನೀಡಿದ್ದಾರೆ.












Click it and Unblock the Notifications