ಸಿದ್ದರಾಮಯ್ಯನವರೇ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಕೊಟ್ಟ ಎಚ್ಚರಿಕೆಯೇನು?
ಬೆಂಗಳೂರು, ಜನವರಿ 07: ದೇಶವನ್ನು ಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೆಪುಟದಲ್ಲಿ ಏದುಸಿರು ಬಿಡುತ್ತಿದೆ. ಹೀಗೆಂದು JDS ಪಕ್ಷ ಸಹ ಕಾಂಗ್ರೆಸ್ ವಿರುದ್ಧ ಭವಿಷ್ಯ ನುಡಿಯುವ ಮೂಲಕ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.
ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ ಎಂದು ದೇವೇಗೌಡು ಹೇಳಿದ್ದರು. ಅದರ ಬೆನ್ನಲ್ಲೆ ಸರಣಿ ಟ್ವೀಟ್ ಮಾಡಿರುವ ಜನತಾ ದಳ (ಜಾತ್ಯಾತೀತ) ಪಕ್ಷವು, ದೇವೇಗೌಡರು ಶಾಪ ಹಾಕುವ ಕೆಲಸ ಎಂದೂ ಮಾಡಿಲ್ಲ. ಮಾಡುವುದೂ ಇಲ್ಲ. ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ.

ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮ ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ 'ಕೈ' ನಿಮ್ಮ 'ಕೈ' ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೆ ಸಾಧ್ಯವಿತ್ತೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿದೆ.
ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ, ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲುತ್ತಾರೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎಂಬುದು ನಮ್ಮ ಸಲಹೆ.
ಸಿದ್ದರಾಮಯ್ಯರದ್ದು ಏಕಾಭಿಪ್ರಾಯ: ಬ್ರೂಟಸ್ ನೀವು
ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದ್ದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕೆಡುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಆರೋಪಿಸಿದೆ.
ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? @JanataDal_S ಅಂತ್ಯ ನಿಮ್ಮ ಕನಸು ಅಷ್ಟೇ.6/11
— Janata Dal Secular (@JanataDal_S) January 7, 2024
ಎಚ್ಡಿ ದೇವೇಗೌಡರು ಸಾಮಾಜಿ ಕನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಇಲ್ಲದವರಾಗಿದ್ದರೆ ನೀವು ಈವರೆಗೆ ಏನೇನೋ ಆಗಿದ್ದೀರಿ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರಿಗೆ ನೀವು ಬೆನ್ನಿಗಿರಿದ 'ಅಪರ ಬ್ರೂಟಸ್' ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ಕಿಡಿ ಕಾರಿದೆ.
ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ?
ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಲು ನೀವು ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲವೆ?. ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಅಂತ್ಯ ನಿಮ್ಮ ಕನಸು ಅಷ್ಟೇ ಎಂದು ಎಚ್ಚರಿಸಿದೆ.
ಸಿದ್ದರಾಮಯ್ಯ ರಾಜ್ಯದ ಸೊಕ್ಕಿನ ಮನುಷ್ಯ: ಜೆಡಿಎಸ್
ಸೊಕ್ಕು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ 'ಸೊಕ್ಕಿನ ಮನುಷ್ಯ' ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ದರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ.

ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿ ಸ್ವೀಕರಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಎಲ್ಲವೂ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ಧಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ ಎಂದು ತಿಳಿಸಿದೆ.
ಜೆಡಿಎಸ್, ಬಿಜೆಪಿ ಬಿ ಟೀಂ ಎನ್ನುವ ನಿಮಗೆ ಚುನಾವಣೆ ಬಂದಾಗಲೆಲ್ಲಾ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ ಹಾಗೂ ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುತ್ತೆ. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಆಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶದ ರಾಜಕಾರಣಕ್ಕೆ ಮಾದರಿ ಎಂದು ಕಾಲೆಳೆದಿದೆ.
ದೇವೇಗೌಡರು ನೈಸ್ ರಸ್ತೆಯನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು ಕೇಳಿದ್ದರು. ಅವರು ಅದನ್ನೇ ಪತ್ರ ಬರೆದಿದ್ದರು. ನೀವು ಆ ವಿಚಾರಕ್ಕೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ.
ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟವಿಲ್ಲವೆಂದು ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಬರೆದಿದ್ದರೆ ಯಾರು ಏನು ಮಾಡಿದ್ದಾರೆ? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣವೇನು ಎಂದು ಜೆಡಿಎಸ್ ಸಿದ್ದರಾಮಯ್ಯನವರಿಗೆ ಸಾಲು ಸಾಲು ಪ್ರಶ್ನೆ ಮುಂದಿಟ್ಟಿದೆ.












Click it and Unblock the Notifications