ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ
ಬೆಂಗಳೂರು, ಮೇ 09: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದ್ದು, ಈಗಾಗಲೇ ರಾಜ್ಯ ಸರ್ಕಾರ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಪಾರ ಪ್ರಮಾಣದಲ್ಲಿ ಪೆನ್ ಡ್ರೈವ್ ಗಳನ್ನು ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಈ ಕುರಿತ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಒತ್ತಾಯಿಸಿದರು.
ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಅವರು, ಅಶ್ಲೀಲ ವಿಡಿಯೋಗಳನ್ನು ಸೋರಿಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅಪಚಾರ ಎಸಗಿರುವ ಕಿರಾತಕರನ್ನು ತಕ್ಷಣವೇ ಅರೆಸ್ಟ್ ಮಾಡಬೇಕು ಎಂದು ಅಗ್ರಹಿಸಿದರು.

ಸಚಿವ ಸಂಪುಟದ ಪ್ರಭಾವಿ ಸಚಿವರೇ ಈ ವಿಡಿಯೋಗಳ ವಿತರಣೆಯ ರೂವಾರಿ. ಹೀಗಾಗಿ ಸಂತ್ರಸ್ಥ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಯಬಿಟ್ಟಿರುವ ವಿಡಿಯೋಗಳಿಂದ ಸಂತ್ರಸ್ಥೆಯರು ಅಪಾರ ನೋವು, ಅವಮಾನ ಮತ್ತು ಯಾತನೆ ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ಥೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೋದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.
ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ಥ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್ ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ಅಶ್ಲೀಲಗಳನ್ನು ಒಳಗೊಂಡ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್ ಡ್ರೈವ್ ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರೂಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡರು, ವಕೀಲರಾದ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್ ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದರು.
ಮಾಹಿತಿ ತಂತ್ರಜ್ಞಾನ ಕಾಯಿದೆ-2020ರ ಸೆಕ್ಷನ್ 66-ಇ, 67 ಮತ್ತು 67-ಎ ಮತ್ತು ಕಾಯ್ದೆ 228 (ಎ) ಐಪಿಸಿ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್ ಸಂದೇಶಗಳನ್ನಾಗಲಿ ಅಥವಾ ಚಿತ್ರಿಕರಣವನ್ನಾಗಲಿ ತಯಾರಿಸುವುದು, ಸಂಗ್ರಹಿಸಿ ಇಡುವುದು ಹಾಗೂ ಬಿತ್ತರಿಸುವುದು, ಚಿತ್ರಿಸುವುದು ಸಂತ್ರಸ್ಥೆಯರ ಹೆಸರನ್ನು ಕೋರ್ಟ್ ಅನುಮತಿಯಿಲ್ಲದೇ, ಸಂತ್ರಸ್ಥೆಯರ ಅನುಮತಿಯಿಲ್ಲದೇ ಬಹಿರಂಗ ಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಯಲ್ಲಿ ವಿಡಿಯೋಗಳನ್ನು ಲೀಕ್ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಹೇಳಿದರು. ಪೆನ್ ಡ್ರೈವ್ ಗಳನ್ನು ಹಾಸನದಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿರುವುದಿಲ್ಲ ಎಂದು ಆರೋಪಿಸಿದರು.












Click it and Unblock the Notifications