ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ: ಡಿ ಕೆ ಶಿವಕುಮಾರ್ ಹೀಗೆ ಹೇಳಿದ್ಯಾಕೆ?
ಬೆಂಗಳೂರು, ಏಪ್ರಿಲ್ 11: ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,ನೀವಾಗಲಿ, ಕುಮಾರಸ್ವಾಮಿ ಅವರಾಗಲಿ ರಾಜಕಾರಣಕ್ಕೆ ಸ್ವಾಮೀಜಿಗಳನ್ನು ಯಾಕೆ ಎಳೆಯುತ್ತಿದ್ದೀರಿ ಎಂದು ಕೇಳಿದಾಗ, "ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆಯುತ್ತಿಲ್ಲ. ಸ್ವಾಮೀಜಿಗಳಿಗೆ ಕೊಡಬೇಕಾದ ಗೌರವ ನಾವು ಕೊಡಬೇಕು ಎಂದು ಹೇಳುತ್ತಿದ್ದೇನೆ" ಎಂದು ತಿಳಿಸಿದರು.

ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲಾ ವರ್ಗದ ಜನ ಕಾಂಗ್ರೆಸ್ ಗೆ ಬೆಂಬಲ ನೀಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ ಎಂದರು.
ಒಕ್ಕಲಿಗ ಸರ್ಕಾರ ಬೀಳಿಸಿದ ವಿಚಾರವಾಗಿ ಸ್ವಾಮೀಜಿ ಉತ್ತರ ಕೊಡಬೇಕು ಎಂಬ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಸ್ವಾಮೀಜಿಗಳು ಉತ್ತರ ನೀಡಬೇಕು ಎಂದು ನಾನು ಕೇಳಿಲ್ಲ. ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ ಈಗ ಒಕ್ಕಲಿಗ ಸಿಎಂಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಎಂದು ಪ್ರಶ್ನಿಸಿದರು.
ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಚೆಲುವರಾಯಸ್ವಾಮಿ ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದಷ್ಟೇ ನಾನು ಕೇಳಿದೆ ಎಂದು ತಿಳಿಸಿದರು.
ಸರ್ಕಾರವನ್ನು ಒಂದು ಜಾತಿಗೆ ಸೀಮಿತವಾಗಿಸುತ್ತಿರುವುದೇಕೆ ಎಂದು ಕೇಳಿದಾಗ, "ನೀವು ನಾವು ಬೇಡ ಎಂದರೂ ಜಾತಿ ನಮ್ಮನ್ನು ಬಿಡುವುದಿಲ್ಲ. ನಾವು ಅರ್ಜಿ ಹಾಕಿ ಹುಟ್ಟದಿದ್ದರೂ ನಾವು ಸಾಯುವಾಗ ಧರ್ಮ, ಜಾತಿ ಬಂದೇ ಬರುತ್ತದೆ. ಧರ್ಮ ಬೇಡ ಎಂದರೂ ನಾಮಕರಣ ಹಾಗೂ ವಿವಿಧ ಕಾರ್ಯಗಳಲ್ಲಿ ಧರ್ಮ ಅಡಗಿದೆ" ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ನಂಬಿಕಸ್ಥ ನಾಯಕರಿಲ್ಲ ಹೀಗಾಗಿ ರಾಹುಲ್ ಗಾಂಧಿ ಹೆಸರಲ್ಲಿ ಮತ ಕೇಳುತ್ತಿಲ್ಲ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಮೋದಿ ಅವರು ತಮ್ಮ ಹೆಸರೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದ ಅವರು ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತ ಕೊಡಿ ಎಂದು ಕೇಳಿದರೇ ಹೊರತು ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ. ನಿಮಗೇನಾದರೂ ಅವರ ಪರವಾದ ಅಲೆ ಕಾಣುತ್ತಿದೆಯೇ? ಎಂದು ಕೇಳಿದರು.












Click it and Unblock the Notifications