ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಇಲ್ಲ: ಓವೈಸಿ
ಬೆಂಗಳೂರು, ಅಕ್ಟೋಬರ್ 26: ಕರ್ನಾಟಕ ವಿಧಾನಸಭೆ ಚುನಾವಣೆಗೆ ಏಳೆಂಟು ತಿಂಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಹಲವು ಕಸರತ್ತಿನಲ್ಲಿ ತೊಡಗಿವೆ. ಯಾತ್ರೆಗಳು, ಸಾರ್ವಜನಿಕ ಸಭೆಗಳನ್ನು ಹಮ್ಮಿಕೊಂಡಿರುವ ರಾಜಕೀಯ ನಾಯಕರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಶತಾಯಗತಾಯ ಯತ್ನ ನಡೆಸಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಹಣಾಹಣಿ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಸಂಘರ್ಷ ಏರ್ಪಟ್ಟರೂ, ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶದಲ್ಲಿ ಜೆಡಿಎಸ್ ಅನ್ನು ಅಲ್ಲಗಳೆಯುವಂತಿಲ್ಲ. ಈ ಸಂದರ್ಭದಲ್ಲಿ ಜೆಡಿಎಸ್ ನಡೆ ಏನು ಎಂಬುದರ ಬಗ್ಗೆ ಕುತೂಹಲವಿದೆ. ಮುಸ್ಲಿಮರ ಮತ ಬ್ಯಾಂಕ್ ಸೆಳೆಯಲು ಜೆಡಿಎಸ್ ಕಸರತ್ತು ನಡೆಸುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಪುಕಾರುಗಳು ಹಬ್ಬಿವೆ. ಈ ಪುಕಾರುಗಳು ನಿಜವೇ ಎಂಬ ಪ್ರಶ್ನೆಗೆ ಸ್ವತಃ ಅಸಾದುದ್ದೀನ್ ಓವೈಸಿ ಉತ್ತರ ನೀಡಿದ್ದಾರೆ.
ಗುಜರಾತ್ ಚುನಾವಣೆ: ಶೇ.30ರಷ್ಟು ಹೊಸಬರಿಗೆ ಟಿಕೆಟ್ ನೀಡಲಿದೆಯಾ ಬಿಜೆಪಿ?
ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ: ಓವೈಸಿ ಹೇಳಿದ್ದೇನು?
ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಸಂಭಾವ್ಯ ಮೈತ್ರಿಯನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಳ್ಳಿಹಾಕಿದ್ದಾರೆ.
ಓವೈಸಿ ಅವರು ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ಮಂಗಳವಾರ ತೊಡಗಿಕೊಂಡಿದ್ದರು. ಆ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.
'ಕಳೆದ ಬಾರಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ಮನವಿ ಮಾಡಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಐಎಂಐಎಂ ಸ್ಪರ್ಧಿಸದೇ, ಜೆಡಿಎಸ್ ಪರ ಪ್ರಚಾರ ಕೈಗೊಂಡಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅದು ಮರುಕಳಿಸುವುದಿಲ್ಲ' ಎಂದು ಹೇಳಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಐಎಂಐಎಂ ಸ್ವತಂತ್ರವಾಗಿಯೇ ಸ್ಪರ್ಧಿಸಲಿದೆ ಎಂದು ಓವೈಸಿ ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 28 ರಂದು ನಡೆಯಲಿರುವ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಐಎಂಐಎಂ ನಾಲ್ಕು ವಾರ್ಡ್ಗಳಲ್ಲಿ ಸ್ಪರ್ಧಿಸುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಓವೈಸಿ, ನಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಷ್ಟೇ ನಾನು ಇಲ್ಲಿಗೆ ಬಂದಿದ್ದೇನೆ ಎಂದಿದ್ದಾರೆ.
ಕರ್ನಾಟಕದಲ್ಲಿ ಎಐಎಂಐಎಂ ಪಕ್ಷದಿಂದ ಅಷ್ಟೇನು ಪರಿಣಾಮವಾಗುವುದಿಲ್ಲ. ಆದರೆ, ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಕೆಲ ಮತಗಳು ಎಐಎಂಐಎಂ ಪರ ಚಲಾವಣೆ ಆಗಬಹುದು. ಇದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೇಲೆ ಅಲ್ಪ ಮಟ್ಟದ ಪರಿಣಾಮವನ್ನೂ ಬೀರಬಹುದು.
#WATCH | I wish to see a woman with hijab as the Prime Minister of India: AIMIM chief Asaduddin Owaisi (25.10)
— ANI (@ANI) October 26, 2022
(Video source: AIMIM) pic.twitter.com/bMpk5EUaTL
ಅಲ್ಪಸಂಖ್ಯಾತ ಮತಗಳ ಮೇಲೆ ಜೆಡಿಎಸ್ ಕಣ್ಣು
ಜೆಡಿಎಸ್ ಪಕ್ಷವು ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಈ ಪ್ರದೇಶದಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಿದೆ. ಆದರೆ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದಲ್ಲಿ ಜೆಡಿಎಸ್ಗೆ ಗಟ್ಟಿ ನೆಲೆ ಇಲ್ಲ. ಪ್ರಬಲ ಸಮುದಾಯಗಳ ಬೆಂಬಲವಿಲ್ಲ. ಆ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಮರ ಮತಗಳ ಮೇಲೆ ಕಣ್ಣಿಟ್ಟಿದೆ. ಹೈದರಾಬಾದ್ ಕರ್ನಾಟಕದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ. ಈ ಮತಗಳನ್ನು ಸೆಳೆಯಲು ಜೆಡಿಎಸ್ ನಾಯಕರು ಕಸರತ್ತು ನಡೆಸಿದ್ದಾರೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಮೂಲಕ ಮತ ಸೆಳೆಯುವ ತಂತ್ರವನ್ನು ಹೆಣೆಯಲಿದ್ದಾರೆ. ಇದು ಕಾಂಗ್ರೆಸ್ ಮೇಲೆ ಪರಿಣಾಮ ಬೀಳಬಹುದು. ಪಂಚರತ್ನ ಯಾತ್ರೆ ಹಮ್ಮಿಕೊಂಡಿರುವ ಜೆಡಿಎಸ್ ಕನ್ನಡ ಅಸ್ಮಿತೆ ವಿಚಾರವನ್ನು ಬಳಸಿಕೊಳ್ಳಲಿದೆ. ಈ ತಂತ್ರದ ಭಾಗವಾಗಿ ನವೆಂಬರ್ 1ರಂದು ಪ್ರತಿ ಮನೆ ಮೇಲೆ ಕರ್ನಾಟಕ ಬಾವುಟವನ್ನು ಹಾರಿಸುವ ಅಭಿಯಾನವನ್ನು ಜೆಡಿಎಸ್ ಹಮ್ಮಿಕೊಂಡಿದೆ. ಇದು ಜೆಡಿಎಸ್ಗೆ ಯಾವ ಮಟ್ಟದಲ್ಲಿ ಸಹಾಯ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.