ಜೆಡಿಎಸ್ ಶಾಸಕರ ಮೇಲೆ ಕಾಂಗ್ರೆಸ್ ಕಣ್ಣು: ಪಕ್ಷ ಉಳಿಸಲು ಅಲರ್ಟ್ ಆದ ಕುಮಾರಸ್ವಾಮಿ- ಇದು ಆಯನೂರು ಎಫೆಕ್ಟ್
ಬೆಂಗಳೂರು, ಆಗಸ್ಟ್ 25: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಈ ಬೆಳವಣಿಗೆಯ ನಡುವೆಯೇ ಜೆಡಿಎಸ್ ನಾಯಕ ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಲರ್ಟ್ ಆಗಿದ್ದಾರೆ.
ತಮ್ಮ ಪಕ್ಷದ ಮುಖಂಡರು ಕಾಂಗ್ರೆಸ್ ಸೇರುವುದನ್ನು ತಪ್ಪಿಸಲು ಕುಮಾರಸ್ವಾಮಿ ಅವರು ಶಾಸಕರ ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ. ಎರಡು ದಿನಗಳ ಹಿಂದೆ ಬಿಜೆಪಿ ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಾಯಕ ಆಯನೂರು ಮಂಜುನಾಥ್ ಸೇರಿದಂತೆ ವಿರೋಧ ಪಕ್ಷಗಳ ಕೆಲ ನಾಯಕರು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಪಕ್ಷದ 18 ಶಾಸಕರು ಮತ್ತು ಎಂಟು ಎಂಎಲ್ಸಿಗಳನ್ನು ಸಂಪರ್ಕಿಸಿ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್ನ ಕೆಲ ಶಾಸಕರು ಕಾಂಗ್ರೆಸ್ ನಾಯಕರ ತಂತ್ರಗಳ ಕುರಿತು ಹೇಳಿಕೆ ನೀಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಇದೇ ವೇಳೆ, ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿದೆ ಎಂದು ಮುಳಬಾಗಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದ್ದಾರೆ.
ಕಾಂಗ್ರೆಸ್ ತಂತ್ರಗಳ ಕುರಿತು ಚರ್ಚಿಸಲು ಹಾಗೂ ಲೋಕಸಭೆ ಚುನಾವಣೆಗೆ ತಯಾರಿಯನ್ನು ಪ್ರಾರಂಭಿಸಲು ಶೀಘ್ರದಲ್ಲೇ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲವು ದಿನಗಳಲ್ಲಿ ಹಲವಾರು ವಿರೋಧ ಪಕ್ಷದ ನಾಯಕರನ್ನು ಕಾಂಗ್ರೆಸ್ ಸ್ವಾಗತಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಶಿವಮೊಗ್ಗದ ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಿಕಾರಿಪುರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಿರಿಯ ಪುತ್ರ ಬಿವೈ ವಿಜಯೇಂದ್ರಗೆ ತೀವ್ರ ಪೈಪೋಟಿ ನೀಡಿದ ನಾಗರಾಜ್ ಗೌಡ ಕೂಡ ಕಾಂಗ್ರೆಸ್ ಸೇರಿದ್ದಾರೆ.
ಈ ವರ್ಷ ಡಿಸೆಂಬರ್ನಲ್ಲಿ ನಡೆಯಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೂ ಕಾಂಗ್ರೆಸ್ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರಿನ ವಿವಿಧ ಕ್ಷೇತ್ರಗಳಿಂದ ಹಲವಾರು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ.
2024ರ ಮೇ ವೇಳೆಗೆ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಮತಗಳಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಲಾಗಿದೆ. ಪಕ್ಷಕ್ಕೆ ಸೇರ್ಪಡೆಗೊಳ್ಳಲು ಇಚ್ಛಿಸುವ ಸ್ಥಳೀಯ ನಾಯಕರಿಗೆ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ.
ಆದರೆ ಗುರುವಾರ, ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿರುವುದನ್ನು ಶಿವಕುಮಾರ್ ನಿರಾಕರಿಸಿದರು. ಹಲವಾರು ವಿರೋಧ ಪಕ್ಷದ ನಾಯಕರು ಸ್ವಯಂ ಪ್ರೇರಣೆಯಿಂದ ಕಾಂಗ್ರೆಸ್ಗೆ ಸೇರುತ್ತಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇನ್ನಷ್ಟು ವಿರೋಧ ಪಕ್ಷದ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.












Click it and Unblock the Notifications