2024 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತ್ತೆ ಸಿದ್ದರಾಗಿ: ಕಾರ್ಯಕರ್ತರಿಗೆ ಹುರಿದುಂಬಿಸಿದ ಎಚ್ಡಿ ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 09: ಮುಂದಿನ ವರ್ಷ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಬಿಡದಿಯಲ್ಲಿರುವ ತಮ್ಮ ಫಾರ್ಮ್ಹೌಸ್ನಲ್ಲಿ ರಾಮನಗರದ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಕುಮಾರಸ್ವಾಮಿ ಮಾತನಾಡಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆ 2028ರಲ್ಲಿ ನಡೆಯುವುದಿಲ್ಲ. ಅದು 2024ರಲ್ಲಿ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಚುನಾವಣೆಗೆ ಸಿದ್ಧತೆ ಆರಂಭಿಸುವಂತೆ ನಾನು ನಿಮ್ಮಲ್ಲಿ ಮನವಿ ಮಾಡಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸದೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕನಕಪುರದಲ್ಲಿ ಜೆಡಿಎಸ್ ಪರ ಪ್ರಚಾರ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಕೇಳಿಕೊಂಡಿದ್ದಾರೆ. ಏಕೆಂದರೆ, ಈಗ ಕನಕಪುರದಲ್ಲಿರುವ ಕಾಂಗ್ರೆಸ್ ಶಾಸಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆ ( ಡಿಕೆ ಶಿವಕುಮಾರ್ ) ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗದಿರಬಹುದು. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ನೀವು ಚಿಂತಿಸಬೇಡಿ. ಏನಾಗಲಿದೆ ಎಂದು ನನಗೆ ಗೊತ್ತು. ಅವರು ಈಗಾಗಲೇ ಒಮ್ಮೆ ಅಲ್ಲಿಗೆ (ತಿಹಾರ್ ಜೈಲು) ಹೋಗಿದ್ದಾರೆ. ಅವರು ಮತ್ತೆ ಅಲ್ಲಿಗೆ ಹೋಗುತ್ತಾರೆ. ಇದು ನನಗೆ ಅಚ್ಚರಿ ತರುವುದಿಲ್ಲ. ಗರಿಷ್ಠ ಪಕ್ಷ ನಮ್ಮನ್ನು ಹಾಸನಕ್ಕೆ ಕಳುಹಿಸಬಹುದು. ಆದರೆ ತಿಹಾರ್ ಜೈಲಿಗೆ ಕಳುಹಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ಬೀಳಲು ಅವರು ಕಾರಣ. ಜೋಡೆತ್ತು ಎಂದು ಅವರು ನನ್ನ ಕೈಹಿಡಿದು ಮೇಲಕ್ಕೆ ಎತ್ತಿದರು. ನಾನು ಮೋಸ ಹೋದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿ ತುಳುಕುತ್ತಿದೆ. ಈ ರೀತಿಯಾದ ಕೆಟ್ಟ ಸರ್ಕಾರವನ್ನು ನಾನು ಎಂದಿಗೂ ನೋಡಿರಲಿಲ್ಲ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಒಳಗೊಳಗೆ ಸಂಘರ್ಷ ಏರ್ಪಟ್ಟಿದೆ. ಇದು ಆಂತರಿಕ ಕಲಹದಿಂದ ಕುಸಿದು ಬೀಳಲಿದೆ. 2024 ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದರ ನಂತರ ಏನಾಗಲಿದೆ ಎಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ನನ್ನ ಜೊತೆ ಚೆನ್ನಾಗೇ ಇದ್ದರು. ಬೆಳಗಾವಿ ಸಹಕಾರಿ ಬ್ಯಾಂಕ್ನ ರಾಜಕೀಯಕ್ಕೆ ಡಿಕೆಶಿ ನನ್ನನ್ನು ಎಳೆತಂದರು. ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ನನ್ನ ವಿರುದ್ಧ ಅಸಮಾಧಾನಗೊಂಡರು. ಇದು ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.












Click it and Unblock the Notifications