ಬಿಜೆಪಿ ಸೇರಿದ ಇಬ್ಬರು ಜೆಡಿಎಸ್ ಶಾಸಕರು!
ಬೆಂಗಳೂರು, ಜನವರಿ 18 : ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ. ರಾಯಚೂರು ಜಿಲ್ಲೆಯ ಇಬ್ಬರು ಹಾಲಿ ಶಾಸಕರು ಇಂದು ಪಕ್ಷ ತೊರೆದಿದ್ದು, ಬಿಜೆಪಿ ಸೇರಿದ್ದಾರೆ.
ಮಲ್ಲೇಶ್ವರಂನಲ್ಲಿನ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಇಬ್ಬರು ಶಾಸಕರು ಬಿಜೆಪಿ ಸೇರಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್, ಅನಂತ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಬ್ಬರು ಜೆಡಿಎಸ್ ಶಾಸಕರ ರಾಜೀನಾಮೆ!
ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಮತ್ತು ರಾಯಚೂರು ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ಅವರು ಜೆಡಿಎಸ್ ಪಕ್ಷ ತೊರೆದು, ಬಿಜೆಪಿ ಸೇರಿದರು. ಹಾಲಿ ಶಾಸಕರೇ ಪಕ್ಷ ತೊರೆದಿದ್ದರಿಂದ ಜೆಡಿಎಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.
2013ರ ಚುನಾವಣೆಯಲ್ಲಿ ಮಾನಪ್ಪ ವಜ್ಜಲ್ 31,737 ಮತಗಳನ್ನು ಪಡೆದು ಲಿಂಗಸಗೂರು ಕ್ಷೇತ್ರದಲ್ಲಿ ಜಯಗಳಿಸಿದ್ದರು. ಡಾ.ಶಿವರಾಜ್ ಪಾಟೀಲ್ ಎಸ್ ಅವರು 45,263 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.
ಮತ್ತೆ ಆಪರೇಷನ್ ಕಮಲ : ಜೆಡಿಎಸ್, ಕಾಂಗ್ರೆಸ್ ನಾಯಕರು ಬಿಜೆಪಿಗೆ?
ರಾಜೀನಾಮೆ : ಬಿಜೆಪಿ ಸೇರುವ ಮೊದಲು ಇಬ್ಬರೂ ಶಾಸಕರು ವಿಧಾನಸೌಧಕ್ಕೆ ಭೇಟಿ ನೀಡಿ, ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.