ಜೆಡಿಎಸ್ನಲ್ಲಿ ಸಚಿವ ಸ್ಥಾನ ತಪ್ಪಿಸಿಕೊಂಡ ಪ್ರಮುಖ ನಾಯಕರು!
ಬೆಂಗಳೂರು, ಜೂನ್ 06 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆಯಾಗಿದೆ. ಕಾಂಗ್ರೆಸ್ನಿಂದ 15, ಜೆಡಿಎಸ್ನಿಂದ 10 ಶಾಸಕರು ಕುಮಾರಸ್ವಾಮಿ ಸಂಪುಟ ಸೇರಿದ್ದಾರೆ. ಆದರೆ, ಹಲವು ಜೆಡಿಎಸ್ ಶಾಸಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ 22, ಜೆಡಿಎಸ್ 12 ಸಚಿವ ಸ್ಥಾನಗಳನ್ನು ಹಂಚಿಕೊಂಡಿವೆ. ಇಂದು ಸಂಪುಟ ವಿಸ್ತರಣೆ ವೇಳೆ ಇಂದು ಜೆಡಿಎಸ್ನ 10 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಸಚಿವರ ಪಟ್ಟಿ
ಇನ್ನೊಂದು ಹಂತದಲ್ಲಿ ಸಂಪುಟ ವಿಸ್ತರಣೆ ಮಾಡುವಾಗ ಕಾಂಗ್ರೆಸ್ 6, ಜೆಡಿಎಸ್ 1 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಜೆಡಿಎಸ್ ಪಕ್ಷ ಎಂಎಲ್ಸಿಗಳಿಗೆ ಸಚಿವ ಸ್ಥಾನ ನೀಡಿಲ್ಲ. ಇದರಿಂದಾಗಿ ಬಸವರಾಜ ಹೊರಟ್ಟಿಯಂತಹ ಹಿರಿಯ ನಾಯಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ.
ಎಚ್ ವಿಶ್ವನಾಥ್ ಗೆ ಸಚಿವ ಸ್ಥಾನ ತಪ್ಪಲು ಕಾರಣವಾದ ಅಂಶಗಳು?
ಜೆಡಿಎಸ್ನಲ್ಲಿ ಹಲವು ನಾಯಕರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಆದರೆ, ಮುಖ್ಯಮಂತ್ರಿಯೇ ಅವರ ಪಕ್ಷದವರು. ಆದ್ದರಿಂದ, ಕ್ಷೇತ್ರಕ್ಕೆ ಬೇಕಾದ ಅನುದಾನವನ್ನು ತರಲು ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಜೆಡಿಎಸ್ನಲ್ಲಿ ಯಾರಿಗೆ ಸಚಿವ ಸ್ಥಾನ ಕೈ ತಪ್ಪಿದೆ? ಚಿತ್ರಗಳಲ್ಲಿ ನೋಡಿ
ಎಚ್.ವಿಶ್ವನಾಥ್ಗೆ ಸಚಿವ ಸ್ಥಾನವಿಲ್ಲ
ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದ ಹಿರಿಯ ನಾಯಕ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. 2018ರ ಚುನಾವಣೆಯಲ್ಲಿ ಅವರು ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಹಿಂದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ, ಸಂಸದರಾಗಿ ಎಚ್.ವಿಶ್ವನಾಥ್ ಕೆಲಸ ಮಾಡಿದ್ದರು. ಅವರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇತ್ತು.
ಬಸವರಾಜ ಹೊರಟ್ಟಿ ಸಂಪುಟ ಸೇರಲಿಲ್ಲ
ಜೆಡಿಎಸ್ ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ವಿಧಾನಪರಿಷತ್ ಸದಸ್ಯರಾದ ಕಾರಣ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಸಣ್ಣ ಉಳಿತಾಯ ಸಚಿವರಾಗಿ ಅವರು ಕೆಲಸ ಮಾಡಿದ್ದಾರೆ. ಆದರೆ, ಈ ಬಾರಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ.
ಟಿ.ಎ.ಶರವಣ ಸಚಿವರಾಗಿಲ್ಲ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪರಮಾಪ್ತರಾದ ಟಿ.ಎ.ಶರವಣ ಅವರು ಕುಮಾರಸ್ವಾಮಿ ಸಂಪುಟ ಸೇರಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರಿಗೂ ಟಿ.ಎ.ಶರವಣ ಅವರ ಆಪ್ತರು. ವಿಧಾನಪರಿಷತ್ ಸದಸ್ಯರಾದ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ಟಿ.ಎ.ಶರವಣ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.
ಕೆ.ಗೋಪಾಲಯ್ಯ ಸಂಪುಟ ಸೇರಿಲ್ಲ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಿಲ್ಲ. ಕ್ಷೇತ್ರದಲ್ಲಿ 2 ಬಾರಿ ಅವರು ಗೆಲುವು ಸಾಧಿಸಿದ್ದಾರೆ. ಅದಕ್ಕಿಂತ ಮುಖ್ಯವಾಗಿ ಬೆಂಗಳೂರು ನಗರದಲ್ಲಿ ಜೆಡಿಎಸ್ ಗೆದ್ದಿರುವುದು ಒಂದೇ ಒಂದು ಸ್ಥಾನ. ಅದು ಗೋಪಾಲಯ್ಯ ಅವರು. ಆದ್ದರಿಂದ, ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು.
ಬಿ.ಎಂ.ಫಾರೂಕ್ ಸಂಪುಟ ಸೇರಿಲ್ಲ
ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಿಲ್ಲ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ನಿಯೋಜಿತರಾದ ಬಳಿಕ ಕುಮಾರಸ್ವಾಮಿ ಅವರ ಜೊತೆಗೆ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಎರಡು ಬಾರಿ ರಾಜ್ಯಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಬಿ.ಎಂ.ಫಾರೂಕ್ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ.
ಎ.ಟಿ.ರಾಮಸ್ವಾಮಿಗೆ ಸಚಿವ ಸ್ಥಾನವಿಲ್ಲ
ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಅವರು ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ, ಅವರು ಸಚಿವ ಸ್ಥಾನ ತಪ್ಪಿಸಿಕೊಂಡಿದ್ದಾರೆ. ಜೆಡಿಎಸ್ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಎ.ಟಿ.ರಾಮಸ್ವಾಮಿ ಅವರ ಹೆಸರು ಇತ್ತು.