ಚಿಂಚೋಳಿ, ಕುಂದಗೋಳ ಉಪಚುನಾವಣೆ: ದೇವೇಗೌಡ ಅಚ್ಚರಿ ನಡೆ
Recommended Video
ಬೆಂಗಳೂರು, ಏಪ್ರಿಲ್ 24 : ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.
ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಅವರು ಹೇಳಿದ್ದು, ಎರಡೂ ಕ್ಷೇತ್ರದಲ್ಲಿ ತಮ್ಮ ಪಕ್ಷವು ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲವೆಂದು ತಿಳಿಸಿದ್ದಾರೆ.
ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಮೇ 23ರಂದೇ ಈ ಎರಡು ಕ್ಷೇತ್ರಗಳ ಫಲಿತಾಂಶವೂ ಪ್ರಕಟವಾಗಲಿದೆ.
ಚಿಂಚೋಳಿ, ಕುಂದಗೋಳ ಉಪ ಚುನಾವಣೆಯತ್ತ ಎಲ್ಲರ ಚಿತ್ತ
ಚಿಂಚೋಳಿ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಹಾರಿ ಅಲ್ಲಿಂದ ಲೋಸಕಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಹಾಗಾಗಿ ಚಿಂಚೋಳಿಯಲ್ಲಿ ಉಪಚುನಾವಣೆ ನಡೆಸಲಾಗುತ್ತಿದೆ. ಇನ್ನು ಕುಂದಗೋಳದ ಶಾಸಕರಾಗಿ ಮಂತ್ರಿಗಳೂ ಆಗಿದ್ದ ಎಸ್. ಶಿವಳ್ಳಿ ಅವರು ಮಾರ್ಚ್ 22ರಂದು ಹೃದಯಾಘಾತದಿಂದ ಅಕಾಲಿಕ ಮರಣಕ್ಕೆ ತುತ್ತಾದ ಕಾರಣ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಲಾಗುತ್ತಿದೆ.
ಜೆಡಿಎಸ್ ಪಕ್ಷ ಕಾಂಗ್ರೆಸ್ಗೆ ಬೆಂಬಲ
ಜೆಡಿಎಸ್ ಪಕ್ಷವು ಸ್ಪರ್ಧೆಯಿಂದ ಹಿಂದೆ ಸರಿದು ಮೈತ್ರಿ ಪಕ್ಷವಾದ ಕಾಂಗ್ರೆಸ್ಗೆ ಬೆಂಬಲ ಸೂಚಿಸಿರುವ ಕಾರಣ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಡಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಂತಹಾ ಪ್ರಾಬಲ್ಯವೇನೂ ಹೊಂದಿಲ್ಲವಾದ್ದರಿಂದ ದೇವೇಗೌಡ ಅವರ ನಿರ್ಣಯ ಸಂದರ್ಭಕ್ಕೆ ತಕ್ಕುದಾಗಿಯೇ ಇದೆ.
ಕುಂದಗೋಳ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ
ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕೆ?
ಈ ಎರಡೂ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿತ್ತು, ಉಪಚುನಾವಣೆಯಲ್ಲಿ ಅದೇ ಮುಂದುವರೆಯುತ್ತದೆಯೋ ಅಥವಾ ಬಿಜೆಪಿ ಅಭ್ಯರ್ಥಿಗಳು ಆರಿಸಿ ಬರುತ್ತಾರೆಯೋ ಕಾದು ನೋಡಬೇಕಿದೆ. ಚಿಂಚೋಳಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಕಣಕ್ಕಿಳಿಯುವ ಸಾಧ್ಯತೆಯೂ ಇದೆ. ಆದರೆ, ತಾವು ಸ್ಪರ್ಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಿವೃತ್ತಿಯ ಮಾತೇ ಇಲ್ಲ, ರಾಹುಲ್ ಜೊತೆ ನಿಲ್ಲುತ್ತೇನೆ ಎಂದ ದೇವೇಗೌಡ್ರು
ಟಿಕೆಟ್ಗಾಗಿ ಎರಡೂ ಪಕ್ಷಗಳಲ್ಲಿ ಲಾಭಿ
ಈಗಾಗಲೇ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ಗಾಗಿ ಎರಡೂ ಪಕ್ಷಗಳಲ್ಲಿ ಲಾಬಿ ಪ್ರಾರಂಭವಾಗಿದೆ. ಕುಂದಗೋಳದಲ್ಲಿ ಶಿವಳ್ಳಿ ಅವರ ಕುಟುಂಬ ಸದಸ್ಯರಿಗೇ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಎರಡೂ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒಂದು ಹಂತದ ಮಾತುಕತೆ ನಡೆಸಿದ್ದಾರೆ.
ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಉಮೇದಿನಲ್ಲಿ ಬಿಜೆಪಿ
ಬಿಜೆಪಿಯು ಈ ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲು ಪೂರ್ಣ ಬಲದಿಂದ ಯತ್ನ ಮಾಡಲಿದೆ. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯು ಜಯಿಸಿದ್ದೇ ಆದರೆ ಅದರ ಸಂಖ್ಯಾಬಲ 107ಕ್ಕೆ (ಕೆಪಿಜೆಪಿಯ ಶಂಕರ್ ಬಿಜೆಪಿಗೆ ಬೆಂಬಲಿಸಿದ್ದಾರೆ) ಏರಲಿದೆ. ಇದು ಬಿಜೆಪಿಯನ್ನು ಅಧಿಕಾರದ ಗದ್ದುಗೆ ಇನ್ನಷ್ಟು ಸನಿಹವಾಗುವಂತೆ ಮಾಡಲಿದೆ.