ಆಗಸ್ಟ್ 20ರಿಂದ ಪಾದಯಾತ್ರೆ ಆರಂಭ : ವೈ.ಎಸ್.ವಿ.ದತ್ತಾ
ಬೆಂಗಳೂರು, ಜೂನ್ 25 : 'ಜೆಡಿಎಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಆಗಸ್ಟ್ 20ರಂದು ನಂಜನಗೂಡಿನಿಂದ ಮೊದಲ ಹಂತದ ಪಾದಯಾತ್ರೆ ಆರಂಭವಾಗಲಿದೆ' ಎಂದು ಪಕ್ಷದ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಹೇಳಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವೈ.ಎಸ್.ವಿ.ದತ್ತಾ ಅವರು, 'ದೇವರಾಜ ಅರಸು ಅವರ ಜನ್ಮದಿನವಾದ ಆಗಸ್ಟ್ 20ರಂದು ಮೊದಲ ಹಂತದ ಪಾದಯಾತ್ರೆ ಆರಂಭವಾಗಲಿದೆ' ಎಂದರು.
'ಮೊದಲ ಹಂತದಲ್ಲಿ ಕಾವೇರಿಯಿಂದ ತುಂಗಭದ್ರಾವರೆಗೆ ಹಾಗೂ ಎರಡನೇ ಹಂತದಲ್ಲಿ ತುಂಗಭದ್ರಾದಿಂದ ಮಲಪ್ರಭಾದವರೆಗೆ ಪಾದಯಾತ್ರೆ ನಡೆಯಲಿದೆ' ಎಂದು ಮಾಹಿತಿ ನೀಡಿದರು.

'ವಿಚಾರ, ವಿಕಾಸ ಮತ್ತು ವಿಶ್ವಾಸ ಎಂಬ ಮೂರು ಪರಿಕಲ್ಪನೆಯೊಂದಿಗೆ ಪಾದಯಾತ್ರೆ ನಡೆಯಲಿದೆ. ಪ್ರಾದೇಶಿಕ ಹಿತಾಸಕ್ತಿ ಕಾಪಾಡುವುದಕ್ಕೆ ಬಲಿಷ್ಠ ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ' ಎಂದು ವೈ.ಎಸ್.ವಿ.ದತ್ತಾ ಹೇಳಿದರು.
'ಪಾದಯಾತ್ರೆ ಬಗ್ಗೆ ಸಮಾಲೋಚನೆ ನಡೆಸಲು ಜೂನ್ 29ರಂದು ಬೆಳಗ್ಗೆ 11 ಗಂಟೆಗೆ ನಗರದ ಮ್ಯಾರಿಯೆಟ್ ಹೋಟೆಲ್ನಲ್ಲಿ ಸಭೆಯನ್ನು ಆಯೋಜಿಸಲಾಗಿದೆ' ಎಂದು ತಿಳಿಸಿದರು.
ಜೂನ್ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ವೈ.ಎಸ್.ವಿ.ದತ್ತಾ ಅವರು ಪಕ್ಷದ ವತಿಯಿಂದ ಪಾದಯಾತ್ರೆ ಆರಂಭಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದರು. ಈಗ ದಿನಾಂಕ ನಿಗದಿ ಮಾಡಲಾಗಿದೆ.












Click it and Unblock the Notifications