JDS Pancharatna Rathayatra : ಜೆಡಿಎಸ್ನ ಪಂಚರತ್ನ ರಥ ಯಾತ್ರೆ ದಿನಾಂಕ ಘೋಷಣೆ
ಬೆಂಗಳೂರು, ನವೆಂಬರ್ 16; ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಗೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ. ನವೆಂಬರ್ 1ರಂದು ಯಾತ್ರೆಗೆ ಚಾಲನೆ ನೀಡಲಾಗಿತ್ತು. ಆದರೆ ಮಳೆಯ ಕಾರಣ ಯಾತ್ರೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದರು.
ಬುಧವಾರ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ದಿನಾಂಕ ಘೋಷಣೆ ಮಾಡಲಾಗಿದೆ. ನವೆಂಬರ್ 18ರಿಂದ ಕೋಲಾರ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ. 5 ದಿನಗಳ ಕಾಲ ಕೋಲಾರದಲ್ಲಿ ಯಾತ್ರೆ ಸಾಗಲಿದೆ.
ಪಂಚರತ್ನ ರಥಯಾತ್ರೆ ಅಂಗವಾಗಿ ಎಚ್. ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಸಹ ಮಾಡಲಿದ್ದಾರೆ. ಕೋಲಾರ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ.

ನವೆಂಬರ್ 1ರಂದು ಪಂಚರತ್ನ ರಥಯಾತ್ರೆಗೆ ಮುಳಬಾಗಿಲಿನ ಕುರುಡುಮಲೆ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಗಿತ್ತು. ಅಂದಿನಿಂದಲೇ ಯಾತ್ರೆ ಆರಂಭವಾಗಬೇಕಿತ್ತು. ಆದರೆ ಮಳೆಯ ಕಾರಣ ಯಾತ್ರೆ ಮುಂದೂಡಲಾಗಿತ್ತು.
ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿಯೇ 2023ರ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದರು. ಈಗ ರಥಯಾತ್ರೆ ಆರಂಭಗೊಳ್ಳುತ್ತಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದಾರೆಯೇ? ಕಾದು ನೋಡಬೇಕು.
ಏನಿದು ಜೆಡಿಎಸ್ ಪಂಚರತ್ನ ಯೋಜನೆ?; 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾಡುವ ಕಾರ್ಯಗಳನ್ನು ಪಂಚರತ್ನ ಯೋಜನೆ ಎಂದು ಪಟ್ಟಿ ಮಾಡಲಾಗಿದೆ. ಪಂಚರತ್ನ ರಥಯಾತ್ರೆ ಮೂಲಕ ಕುಮಾರಸ್ವಾಮಿ ಈ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದ್ದಾರೆ. ಪಂಚರತ್ನ ಯೋಜನೆಯ ವಿವರಗಳು ಹೀಗಿವೆ.
1. ಶಿಕ್ಷಣವೇ ಆಧುನಿಕ ಶಕ್ತಿ; ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ.
2. ಆರೋಗ್ಯ ಸಂಪತ್ತು; ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ 24*7 ಕಾರ್ಯ ನಿರ್ವಹಣೆ ಮಾಡುವ ಸುಸಜ್ಜಿತ ಹೈ-ಟೆಕ್ ಆಸ್ಪತ್ರೆ ನಿರ್ಮಾಣ.
3. ರೈತ ಚೈತನ್ಯ; ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ.
4. ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ; ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ.
5. ವಸತಿಯ ಆಸರೆ; ವಸತಿ ಇಲ್ಲದವರಿಗೆ ಸರ್ಕಾರದಿಂದಲೇ ವಸತಿ ಕಟ್ಟಿಕೊಡುವ ಯೋಜನೆ.












Click it and Unblock the Notifications