ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವಂತೆ ದೇವೇಗೌಡರಿಗೆ ಒತ್ತಾಯ
ಬೆಂಗಳೂರು, ಏಪ್ರಿಲ್ 07: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರಿ ಚುನಾವಣಾ ಟಿಕೆಟ್ ನೀಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಎಚ್.ಡಿ.ದೇವೇಗೌಡ ಅವರ ಮನೆ ಮುಂದೆ ಒಗ್ಗೂಡಿ ಒತ್ತಾಯ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ಟಿಕೆಟ್ ಪ್ರಜ್ವಲ್ ರೇವಣ್ಣ ಅವರಿಗೆ ನೀಡಬೇಕು ಎಂದು ಒತ್ತಾಯಿಸಿ ಕೆಲವು ಜೆಡಿಎಸ್ ಕಾರ್ಯಕರ್ತರು ಇಂದು ನಗರದ ದೇವೇಗೌಡ ಅವರ ನಿವಾಸದ ಮುಂದೆ ಪ್ರಜ್ವಲ್ ರೇವಣ್ಣ ಅವರ ಪರ ಘೋಷಣೆಗಳನ್ನು ಕೂಗಿ ಪ್ರಜ್ವಲ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
'ಆರ್ಆರ್ ನಗರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ' ಎಂದು ಈ ಮುಂಚೆಯೂ ಪ್ರಜ್ವಲ್ ರೇವಣ್ಣ ಅವರು ಹೇಳಿದ್ದರು. ಆದರೆ ಆ ನಂತರ ಜೆಡಿಎಸ್ ನಲ್ಲಿ ಆದ ಆಂತರಿಕ ಬೆಳವಣಿಗೆಗಳಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಅವರಿಗೆ ಮಾತ್ರವೇ ಕುಟುಂಬದಿಂದ ಟಿಕೆಟ್ ನೀಡಲಾಗುವುದು ಎನ್ನಲಾಗಿತ್ತು.

ದೇವೇಗೌಡ ಅವರ ಕುಟುಂಬದಲ್ಲಿ ಟಿಕೆಟ್ ರಾಜಕೀಯ ನಿಯಮಿತವಾಗಿ ತಿರುವು ಪಡೆಯುತ್ತಲೇ ಇದ್ದು, ಈ ಬಾರಿ ಕುಟುಂಬದಿಂದ ಇಬ್ಬರಿಗೆ ಮಾತ್ರ ಟಿಕೆಟ್ ಎಂದು ಗಟ್ಟಿಯಾಗಿ ನಿರ್ಣಯಿಸಿರುವ ಕಾರಣ ಕುಮಾರಸ್ವಾಮಿ ಮತ್ತು ರೇವಣ್ಣ ಅವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು.
ಇದೀಗ ಕುಮಾರಸ್ವಾಮಿ ಅವರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾರಣ ಮತ್ತೆ ಪ್ರಜ್ವಲ್ ರೇವಣ್ಣ ಅವರ ಟಿಕೆಟ್ ವಿಷಯ ಮುನ್ನೆಲೆಗೆ ಬಂದಿದ್ದು, ಆರ್.ಆರ್.ನಗರ ಉತ್ತಮ ಬೆಂಬಲಿಗರನ್ನು ಹೊಂದಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಲಾಗುತ್ತದೆಯೇ, ಅಥವಾ ಮುಂಬರುವ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.












Click it and Unblock the Notifications