ಎಸ್.ಎಂ.ಕೃಷ್ಣ ಭೇಟಿ ಮಾಡಿದ ಜೆಡಿಎಸ್ ಬಂಡಾಯ ಶಾಸಕರು!
Recommended Video
ಬೆಂಗಳೂರು, ಫೆಬ್ರವರಿ 02 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಬಿಜೆಪಿ ಸೇರಲಿದ್ದಾರೆಯೇ?. ಬಂಡಾಯ ಶಾಸಕರು ಎಸ್.ಎಂ.ಕೃಷ್ಣ ಭೇಟಿ ಮಾಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಜೆಡಿಎಸ್ನ ಬಂಡಾಯ ಶಾಸಕರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ. 'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಪಕ್ಷ ಸೇರಲಿದ್ದಾರೆ' ಎಂದು ಅವರು ಹಲವು ಬಾರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚಿತ್ರಗಳು : ಜೆಡಿಎಸ್ ರೆಬಲ್ ಶಾಸಕರ ಮನೆಗೆ ಡಿ.ಕೆ.ಶಿವಕುಮಾರ್ ಭೇಟಿ
ಆದರೆ, ಬಂಡಾಯ ಶಾಸಕರು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಾಸಕರು ಎಂದು ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದಿಲ್ಲ, ಚಿತ್ರಗಳು ಮಾತ್ರ ವೈರಲ್ ಆಗಿದೆ. ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆಯೇ? ಎಂಬ ಪ್ರಶ್ನೆಯನ್ನು ಚಿತ್ರ ಹುಟ್ಟು ಹಾಕಿದೆ.
ಅಖಂಡ ಶ್ರೀನಿವಾಸಮೂರ್ತಿ ಪಕ್ಷ ಸೇರಲು ಕಾಂಗ್ರೆಸಿಗರ ವಿರೋಧ!
ಬಂಡಾಯ ಶಾಸಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದಾಗ ಪಕ್ಷ ಸೇರುವ ಸಾಧ್ಯತೆ ಇದೆ. ಆದರೆ, ಪಕ್ಷ ಸೇರುವ ದಿನಾಂಕ ಅಧಿಕೃತವಾಗಿ ಇನ್ನೂ ನಿಗದಿಯಾಗಿಲ್ಲ. ಶಾಸಕರು ಕಾಂಗ್ರೆಸ್ ಸೇರುವುದಕ್ಕೆ ವಿರೋಧಗಳು ಇವೆ...
ಯಾವ-ಯಾವ ಶಾಸಕರು
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಜೆಡಿಎಸ್ನ ಬಡಾಯ ಶಾಸಕರು.
ಎಸ್.ಎಂ.ಕೃಷ್ಣ ಭೇಟಿ ಮಾಡಿದ ನಾಯಕರು
ಜೆಡಿಎಸ್ನ ಬಂಡಾಯ ಶಾಸಕರು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ. ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ, ಬಾಲಕೃಷ್ಣ ಭೇಟಿ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ.
ಕುತೂಹಲ ಕೆರಳಿಸಿದ ಪುಟ್ಟಣ್ಣ ಭೇಟಿ
ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಪುಟ್ಟಣ್ಣ ಅವರು ಸಹ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಪುಟ್ಟಣ್ಣ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ, ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿದೆ.
ಡಿ.ಕೆ.ಶಿವಕುಮಾರ್ ಭೇಟಿ
ಜೆಡಿಎಸ್ನ ಬಂಡಾಯ ಶಾಸಕರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಸಂಪರ್ಕದಲ್ಲಿದ್ದಾರೆ. ಜನವರಿ 9ರಂದು ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಉಪಹಾರ ಸವಿದಿದ್ದರು. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.
ವಿರೋಧವೂ ಇದೆ
ಬಂಡಾಯ ಶಾಸಕರು ಕಾಂಗ್ರೆಸ್ ಸೇರುವುದಕ್ಕೆ ಹಲವು ಕಡೆ ವಿರೋಧವಿದೆ. ಪುಲಿಕೇಶಿ ನಗರ ಕ್ಷೇತ್ರದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರುವುದಕ್ಕೆ ಮಾಜಿ ಶಾಸಕ ಪ್ರಸನ್ನ ಕುಮಾರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.