ಜೆಡಿಎಸ್ ಬಂಡಾಯ ಶಾಸಕರು ಮಾ.25ರಂದು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಮಾರ್ಚ್ 12 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಮಾರ್ಚ್ 25ರಂದು ಕಾಂಗ್ರೆಸ್ ಸೇರಲಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಕಾರಣಕ್ಕೆ ಶಾಸಕರನ್ನು ಪಕ್ಷ ಅಮಾನತು ಮಾಡಿತ್ತು.
ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮಾರ್ಚ್ 25ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ 7 ಶಾಸಕರು ಕಾಂಗ್ರೆಸ್ ಸೇರಲಿದ್ದೇವೆ' ಎಂದು ತಿಳಿಸಿದರು.
ಚೆಲುವರಾಯಸ್ವಾಮಿ ಮನೆಯಲ್ಲಿ ಸಿದ್ದರಾಮಯ್ಯ ಭೋಜನ, ಮಾತುಕತೆ!
'ಕಾಂಗ್ರೆಸ್ ಪಕ್ಷ ಸೇರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದೇವೆ. ನಾವು ಪ್ರತಿನಿಧಿಸುವ ಕ್ಷೇತ್ರಗಳಿಗೆ ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ' ಎಂದು ಚೆಲುವರಾಯಸ್ವಾಮಿ ಹೇಳಿದರು.
ಜೆಡಿಎಸ್ ಬೆಂಬಲ ಕೇಳುವಂತಿಲ್ಲ: 'ಜೆಡಿಎಸ್ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಬೆಂಬಲ ಕೇಳುವಂತಿಲ್ಲ. ಪಕ್ಷ ಚುನಾವಣೆಗೆ ವಿಪ್ ಜಾರಿ ಮಾಡಿದರೂ ಅದು ನಮಗೆ ಅನ್ವಯವಾಗುವುದಿಲ್ಲ. ನಮ್ಮನ್ನು ಪಕ್ಷವೇ ಅಮಾನತು ಮಾಡಿದೆ' ಎಂದು ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಯಾವ-ಯಾವ ಶಾಸಕರು? : ರಮೇಶ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಚೆಲುವರಾಯಸ್ವಾಮಿ (ನಾಗಮಂಗಲ), ಇಕ್ಬಾಲ್ ಅನ್ಸಾರಿ (ಗಂಗಾವತಿ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ, ಬೆಂಗಳೂರು) ಶಾಸಕ ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ).