ಲೋಕಸಭಾ ಚುನಾವಣೆ : 7 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ
ಬೆಂಗಳೂರು, ಮಾರ್ಚ್ 26 : ಲೋಕಸಭಾ ಚುನಾವಣೆಗೆ ಕರ್ನಾಟಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆಯನ್ನು ಎದುರಿಸುತ್ತಿದೆ.
ಮಂಗಳವಾರ ಜೆಡಿಎಸ್ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ, ಜೆಡಿಎಸ್ 7 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ 21, 8 ಕ್ಷೇತ್ರಗಳನ್ನು ಹಂಚಿಕೆ ಮಾಡಿಕೊಂಡಿದ್ದವು. ಆದರೆ, ಬೆಂಗಳೂರು ಉತ್ತರದಲ್ಲಿ ಅಭ್ಯರ್ಥಿಗಳು ಇಲ್ಲ ಎಂಬ ಕಾರಣಕ್ಕೆ ಅದನ್ನು ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ನೀಡಿತು. ಆದ್ದರಿಂದ 7 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮೊಮ್ಮಕ್ಕಳಾದ ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಉಳಿದ ನಾಲ್ಕು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ....

ತುಮಕೂರು ಕ್ಷೇತ್ರ
ತುಮಕೂರು ಕ್ಷೇತ್ರದಿಂದ ಎಚ್.ಡಿ.ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿದ್ದಾರೆ. ಸೋಮವಾರ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಹಾಸನ ಕ್ಷೇತ್ರದ ಸಂಸದರಾದ ದೇವೇಗೌಡರು ಈ ಬಾರಿ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು, ತುಮಕೂರಿನಿಂದ ಕಣಕ್ಕಿಳಿದಿದ್ದಾರೆ.

ಹಾಸನ ಕ್ಷೇತ್ರ
ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪುತ್ರ. ಎಚ್.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಹಾಸನದಿಂದ ಮೊದಲ ಬಾರಿಗೆ ಅವರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಮಂಡ್ಯ ಕ್ಷೇತ್ರ
ಮಂಡ್ಯ ಕ್ಷೇತ್ರದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ. ಮಂಡ್ಯ ಕ್ಷೇತ್ರದ ಹಾಲಿ ಸಂಸದರು ಎಲ್.ಆರ್.ಶಿವರಾಮೇಗೌಡ. ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿ, ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಣಕ್ಕಿಳಿದ್ದಾರೆ. ಈಗಾಗಲೇ ಅವರು ನಾಮಪತ್ರವನ್ನು ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಉಡುಪಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು.

ಶಿವಮೊಗ್ಗ ಕ್ಷೇತ್ರ
ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ. 2018ರ ನವೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿಯೂ ಅವರು ಸ್ಪರ್ಧಿಸಿ 52 ಸಾವಿರ ಮತಗಳ ಅಂತರದಿಂದ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಸೋಲು ಅನುಭವಿಸಿದ್ದರು.

ಉತ್ತರ ಕನ್ನಡ ಕ್ಷೇತ್ರ
ಉತ್ತರ ಕನ್ನಡ ಕ್ಷೇತ್ರದಿಂದ ಆನಂದ್ ಆಸ್ನೋಟಿಕರ್ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಆನಂದ್ ಆಸ್ನೋಟಿಕರ್ ಅವರನ್ನು ಲೋಕಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ವಿಜಯಪುರ ಕ್ಷೇತ್ರ
ವಿಜಯಪುರ ಕ್ಷೇತ್ರಕ್ಕೆ ಡಾ.ಸುನೀತಾ ದೇವಾನಂದ ಚೌವ್ಹಾಣ್ ಅವರು ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ನಾಗಠಾಣಾ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌವ್ಹಾಣ್ ಅವರ ಪತ್ನಿ ಸುನೀತಾ ದೇವಾನಂದ ಚೌವ್ಹಾಣ್ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ನೀಡಲಾಗಿದೆ.












Click it and Unblock the Notifications