ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆಗೆ ಟಕ್ಕರ್ ಕೊಡಲು ಜೆಡಿಎಸ್‌ನಿಂದ 'ಜನತಾ ಜಲಧಾರೆ'

|
Google Oneindia Kannada News

ಬೆಂಗಳೂರು, ಜ.7: ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟ ಹೋರಾಟವನ್ನು ನಿರಂತರವಾಗಿ ಟೀಕಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅದಕ್ಕೆ ಪರ್ಯಾಯವಾಗಿ 'ಜನತಾ ಜಲಧಾರೆ' ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ' ಜನತಾ ಜಲಧಾರೆ ' ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾರಥವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅನಾವರಣಗೊಳಿಸಿದರು.

JDS start Janata Jaladhare from jan 26

ರಾಜ್ಯಕ್ಕೆ ನಿರಂತರ ಅನ್ಯಾಯ:

'ನೀರಿನ ಬಗ್ಗೆ ಇಡೀ ದೇಶದಲ್ಲೇ ಅತ್ಯಂತ ಕಿರುಕುಳಕ್ಕೆ ಒಳಗಾದ, ಅಷ್ಟೇ ಅನ್ಯಾಯಕ್ಕೆ ಒಳಗಾದ ರಾಜ್ಯ ಕರ್ನಾಟಕ. ಒಕ್ಕೂಟ ವ್ಯವಸ್ಥೆಯಲ್ಲೇ ಇದ್ದರೂ ಭಾಷೆ, ನೆಲ, ಜಲ, ಅಭಿವೃದ್ಧಿ, ಅನುದಾನ; ಇತ್ಯಾದಿಗಳಲ್ಲಿ ಇನ್ನಿಲ್ಲದ ಅವಗಣನೆಗೆ ಒಳಗಾದ ರಾಜ್ಯವೂ ಕರ್ನಾಟಕವೇ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.

ದಕ್ಷಿಣದ ಇತರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗಳಿಗೆ ಜನರು ಉತ್ತೇಜನ ನೀಡಲಿಲ್ಲ. ಸದಾ ಕಾಲ ರಾಷ್ಟ್ರೀಯ ಪಕ್ಷಗಳೆಂಬ ಮಾಯಾಜಿಂಕೆಗಳನ್ನು ಬೆನ್ಹತ್ತಿದ ಪರಿಣಾಮ ಇಂದಿಗೂ ನಾವು ನೀರಿಗಾಗಿ ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳ ಜತೆ ಗುದ್ದಾಡುತ್ತಿದ್ದೇವೆ. ಈಗ ಮೇಕೆದಾಟು ಯೋಜನೆ ಆ ಒದ್ದಾಟದ ಹೊಸ ಹೆಸರು ಎಂದು ಅವರು ಟಾಂಗ್ ನೀಡಿದರು.

JDS start Janata Jaladhare from jan 26

ಜ.23ಕ್ಕೆ ಗಂಗಾ ರಥಗಳಿಗೆ ಹಸಿರು ನಿಶಾನೆ:

ಜನವರಿ 23ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ನಾನು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು ಚಾಲನೆ ನೀಡುವರು.

ಜ.26ರಿಂದ ಜಲಧಾರೆ ಆರಂಭ:

ಜನವರಿ 26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು.

JDS start Janata Jaladhare from jan 26

ಜಲ ಸಂಗ್ರಹ ಮಾಡುವ ದಿನ ರಾಜ್ಯದ ವಿವಿಧ ಭಾಗಗಳಲ್ಲಿ ಕುಮಾರಸ್ವಾಮಿ, ದೇವೇಗೌಡರು, ಎಚ್.ಕೆ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಸಾ.ರಾ.ಮಹೇಶ್, ನಾಡಗೌಡರು, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಪಕ್ಷದ ಎಲ್ಲ ನಾಯಕರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಒಟ್ಟು 51 ಕಡೆ ಜಲ ಸಂಗ್ರಹ:

ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎಲ್ಲೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ.

ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ:

ರಾಜ್ಯದ ಉದ್ದಗಲಕ್ಕೂ ಸಾಗಿ ಬರುವ ಈ ಹದಿನೈದೂ ವಾಹನಗಳು 15-20 ದಿನಗಳ ಒಳಗಾಗಿ ಬೆಂಗಳೂರು ತಲುಪುತ್ತವೆ. ಅಂದು ಇಡೀ ಬೆಂಗಳೂರನ್ನು ಪ್ರದಕ್ಷಿಣೆ ಹಾಕುವ ಇಷ್ಟೂ ವಾಹಗಳು ಅದೇ ದಿನ ಸಂಜೆ ಅರಮನೆ ಮೈದಾನದಲ್ಲಿ ಸೇರಲಿವೆ. ಆ ನಂತರ ಎರಡು ದಿನಗಳಲ್ಲಿ ಒಂದು ಬೃಹತ್ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಲಾದ ಜಲವನ್ನು ದೊಡ್ಡ ಕಲಶಕ್ಕೆ ತುಂಬಿಸಿ ಗಂಗಾ ಪೂಜೆ, ಗಂಗಾ ಆರತಿ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ಆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು, ನಾಡಿನ ಧರ್ಮಗುರುಗಳು, ಗುರು ಹಿರಿಯರು ಸೇರಿ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

JDS start Janata Jaladhare from jan 26

ವರ್ಷವಿಡೀ ಗಂಗಾ ಪೂಜೆ:

ಆ ಕಾರ್ಯಕ್ರಮ ಮುಗಿದ ನಂತರ ಪೂಜಿಸಲ್ಪಟ್ಟಿದ್ದ ಪವಿತ್ರ ಜಲವುಳ್ಳ ಕಲಶವನ್ನು ಬೆಂಗಳೂರಿನ ವಿವಿಧೆಡೆಗಳಿಂದ ಮೆರವಣಿಗೆ ಮೂಲಕ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ವಿದ್ಯುಕ್ತವಾಗಿ ಬರ ಮಾಡಿಕೊಂಡು ಆ ಕಲಶ ಪ್ರತಿಷ್ಠಾಪನೆ ಮಾಡಲಾಗುವುದು. ಅಂದಿನಿಂದ ಮುಂದಿನ 391 ದಿನಗಳ ಕಾಲ ಗಂಗಾ ಪೂಜೆ, ಗಂಗಾ ಆರತಿ ನಿರಂತರವಾಗಿ ನಡೆಯಲಿದೆ. ಆ ನಿತ್ಯ ಪೂಜೆಯಲ್ಲಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸುತ್ತೇವೆ:

Recommended Video

ಪಾಸಿಟಿವಿಟಿ ರೇಟ್ ಹೆಚ್ಚಳ - ಲಾಕ್ ಡೌನ್ ಆತಂಕ ಶುರು! | Oneindia Kannada

ನಮಗೆ ಧಾವಂತವಿಲ್ಲ. ವೈರಸ್ ನಿಯಂತ್ರಣಕ್ಕೆ ಸರಕಾರ ಜಾರಿ ಮಾಡುವ ಎಲ್ಲಾ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದರು ಕುಮಾರಸ್ವಾಮಿ ಅವರು.

English summary
JDS party will launch a special program, 'Janata Jaladhare', from January 26, all over the state, with the grand resolve of providing water to all parts of the state, adequate utilization of available water and implementing all the irrigation projects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X