ಜೆಡಿಎಸ್ನಲ್ಲಿ ನಾಯಕತ್ವ ಬದಲಾವಣೆ; ಕುಮಾರಸ್ವಾಮಿ ರಾಜೀನಾಮೆ?
ಬೆಂಗಳೂರು, ಡಿಸೆಂಬರ್ 01 : ಕರ್ನಾಟಕ ಜೆಡಿಎಸ್ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಸುದ್ದಿಗಳು ಹಬ್ಬಿವೆ. 4 ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ, ಎರಡು ಕ್ಷೇತ್ರದ ಉಪ ಚುನಾವಣೆ ಬಳಿಕ ಈ ವಿಚಾರದ ಬಗ್ಗೆ ಪಕ್ಷದೊಳಗೆ ಚರ್ಚೆಗಳು ಆರಂಭವಾಗಿದೆ.
ಸಕಲೇಶಪುರ ಕ್ಷೇತ್ರದ ಶಾಸಕ ಎಚ್. ಕೆ. ಕುಮಾರಸ್ವಾಮಿ ಸದ್ಯ ಜೆಡಿಎಸ್ನ ರಾಜ್ಯಾಧ್ಯಕ್ಷರು. ಕುಮಾರಸ್ವಾಮಿ ಅವರು ಪಕ್ಷದ ವರಿಷ್ಠರ ಬಳಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತುಗಳನ್ನು ಆಡಿದ್ದಾರೆ.
ಆರ್. ಆರ್. ನಗರ, ಶಿರಾ ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯಿಂದಾಗಿ ಎಚ್. ಕೆ. ಕುಮಾರಸ್ವಾಮಿ ಅವರು ಬೇಸರಗೊಂಡಿದ್ದಾರೆ. ವರಿಷ್ಠರ ಬಳಿ ರಾಜೀನಾಮೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ಎಚ್. ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದರು. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ 2019ರ ಜುಲೈನಲ್ಲಿ ಎಚ್. ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡಿ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ಧವಾಗಬೇಕಿದೆ. ರಾಜ್ಯಾಧ್ಯಕ್ಷ ಸ್ಥಾನವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ ತೃಪ್ತಿ ಇಲ್ಲ ಎಂದು ಕುಮಾರಸ್ವಾಮಿ ಅವರು ವರಿಷ್ಠರ ಬಳಿ ಹೇಳಿದ್ದಾರೆ.
ಪಕ್ಷ ಸಂಘಟನೆಗಾಗಿ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟು ಕೊಡುತ್ತೇನೆ. ಪಕ್ಷಕ್ಕಾಗಿ ಪೂರ್ಣವಧಿ ಸಮಯ ಮೀಸಲು ಇಡುವವರಿಗೆ ಸ್ಥಾನ ನೀಡಿ ಎನ್ನುವ ಮಾತುಗಳನ್ನು ಆಡಿದ್ದಾರೆ ಎಂಬ ಮಾಹಿತಿ ಇದೆ. ಸಕಲೇಶಪುರ ಕ್ಷೇತ್ರದ ಶಾಸಕರಾಗಿಯೂ ಕುಮಾರಸ್ವಾಮಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆ ಗೆಲ್ಲಲು ಪಕ್ಷದ ಪದಾಧಿಕಾರಿಗಳಲ್ಲಿ ಹಲವಾರು ಬದಲಾವಣೆಗಳು ಆಗಬೇಕು. ಸಕ್ರಿಯರು, ಪಕ್ಷ ನಿಷ್ಠರಾದವರಿಗೆ ಆದ್ಯತೆ ನೀಡಬೇಕು ಎಂದು ಎಚ್. ಕೆ. ಕುಮಾರಸ್ವಾಮಿ ವರಿಷ್ಠರ ಬಳಿ ಪ್ರಸ್ತಾಪವಿಟ್ಟಿದ್ದಾರೆ.
2018ರ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಜೊತೆ ಸೇರಿ ಜೆಡಿಎಸ್ ಸರ್ಕಾರ ರಚನೆ ಮಾಡಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಒಂದು ವರ್ಷದ ಬಳಿಕ ಸರ್ಕಾರ ಪತನಗೊಂಡಿತು. ಮೈತ್ರಿ ಸರ್ಕಾರ ಪತನಗೊಂಡ ಬಳಿಕ ನಡೆದ ಉಪ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ.
ಕಳೆದ ಚುನಾವಣೆಯಲ್ಲಿ ಗೆದ್ದಿದ್ದ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗೆ ಬಿಟ್ಟುಕೊಟ್ಟಿದೆ. ಬಸವಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ಉಪ ಚುನಾವಣೆ ಇನ್ನೇನು ಎದುರಾಗಲಿದೆ.

ಉಪ ಚುನಾವಣೆಯನ್ನು ಬದಿಗಿಟ್ಟಿರುವ ಜೆಡಿಎಸ್ ಪಕ್ಷ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಯಲ್ಲಿ ತೊಡಗಿದೆ. ಶನಿವಾರ ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿ ಕಾರ್ಯತಂತ್ರವನ್ನು ರೂಪಿಸಿದೆ. ಪಕ್ಷ ಸಂಘಟನೆ ಬಗ್ಗೆ, ಯುವಕರಿಗೆ ಆದ್ಯತೆ ನೀಡುವ ಬಗ್ಗೆಯೂ ಸಭೆಯಲ್ಲಿ ವಿವರವಾದ ಚರ್ಚೆ ನಡೆಸಲಾಗಿದೆ.
ಎಚ್. ಡಿ. ಕುಮಾರಸ್ವಾಮಿ ಮೊದಲು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ರಾಜೀನಾಮೆ ನೀಡಿದ್ದರು. ಆಗ ಹುಣಸೂರು ಕ್ಷೇತ್ರದ ಶಾಸಕರಾಗಿದ್ದ ಎಚ್. ವಿಶ್ವನಾಥ್ ನೇಮಕ ಮಾಡಲಾಗಿತ್ತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ವಿಶ್ವನಾಥ್ ಶಾಸಕ ಸ್ಥಾನ, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು.
ಒಂದು ವೇಳೆ ಎಚ್. ಕೆ. ಕುಮಾರಸ್ವಾಮಿ ರಾಜೀನಾಮೆ ನೀಡಿದರೆ ಎಚ್. ಡಿ. ಕುಮಾರಸ್ವಾಮಿ ಪುನಃ ರಾಜ್ಯಾಧ್ಯಕ್ಷರಾಗಬೇಕು ಎಂಬ ಕೂಗು ಪಕ್ಷದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಆದರೆ, ಆರೋಗ್ಯದ ಕಾರಣ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಲು ಒಪ್ಪಲಿದ್ದಾರೆಯೇ? ಕಾದು ನೋಡಬೇಕಿದೆ.












Click it and Unblock the Notifications