Nikhil Kumaraswamy: "ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಲು ಸಿದ್ಧರಿದ್ದಾರೆ"
Nikhil Kumaraswamy: ರಾಜ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಎಲ್ಲಿ ಬೇಕಾದರೂ ನಿಂತು ಸ್ಪರ್ಧಿಸಲು ಸಿದ್ಧರಿದ್ದಾರೆ ಎಂದು ಜೆಡಿಎಸ್ ಹೇಳಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಸಂಬಂಧ ಟ್ವೀಟ್ ಮಾಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ ಎಂದು ಅಪಹಾಸ್ಯ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದು ನಿಮಗೆ ನೆನಪಿದೆಯೇ ಹಿಂಬಾಗಿಲ ಮೂಲಕ ಮಗನನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಿದ್ದೀರಿ ಎಂದು ಟೀಕಿಸಿದೆ.
ಅಲ್ಲದೇ ಲೋಕಸಭಾ ಚುನಾವಣೆ ವೇಳೆ ಮೈಸೂರು-ಕೊಡಗು ಕ್ಷೇತ್ರದಲ್ಲಿ ಸೋಲುತ್ತೀರಿ ಎನ್ನುವ ಆತಂಕದಿಂದ ಮಗನನ್ನು ನಿಲ್ಲಿಸಲು ಹೆದರಿದ ಮುಖ್ಯಮಂತ್ರಿ ನೀವು ಎಂದಿದೆ. ಮುಂದುವರಿದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋತು ಸುಣ್ಣವಾಗುತ್ತೇನೆಂದು ಬಾದಾಮಿ ಕ್ಷೇತ್ರಕ್ಕೆ ಓಡಿಹೋದ ಪಲಾಯನವಾದಿ ಯಾರು ಎಂದು ಜೆಡಿಎಸ್ ಪ್ರಶ್ನೆ ಮಾಡಿದೆ.

ಮಗ ಸ್ಪರ್ಧಿಸಿದ್ದ ಸುರಕ್ಷಿತ ಕ್ಷೇತ್ರ ವರುಣಾದಿಂದ ಕಣಕ್ಕಿಳಿದು, ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಹೆದರಿದಿರಿ. ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಅವರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಲು ಸಿದ್ಧರಿದ್ದಾರೆ. ಆದರೆ, ನೀವು ಮತ್ತು ನಿಮ್ಮ ಮಗನಿಗೆ ಆ ಧೈರ್ಯ ಇದೆಯೇ ಎಂದು ಪ್ರಶ್ನೆ ಮಾಡಿದ್ದು, ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ ಎಂದು ಸವಾಲು ಎಸೆದಿದೆ.
ನಿಖಿಲ್ ಕುಮಾರಸ್ವಾಮಿ ಅವರು ಪಕ್ಷಕ್ಕಾಗಿ ಮತ್ತು ಕಾರ್ಯಕರ್ತರಿಗಾಗಿ ಸ್ಪರ್ಧಿಸುತ್ತಾರೆ. ಆದರೆ ನಿಮ್ಮಂತೆ ಅಧಿಕಾರ ದಾಹಕ್ಕಾಗಿ ಅಲ್ಲ ಎಂದು ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದೆ.
ಕಾಂಗ್ರೆಸ್ ಸರ್ಕಾರದಲ್ಲಿ ನಾಡಿಗಾಗಿ ದುಡಿದ ಮಹನೀಯರಿಗೆ ರಕ್ಷಣೆಯೇ ಇಲ್ಲ: ಜೆಡಿಎಸ್
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ನಾಡಿಗಾಗಿ ದುಡಿದ ಮಹನೀಯರಿಗೆ ರಕ್ಷಣೆಯೇ ಇಲ್ಲ ಎಂದು ಜೆಡಿಎಸ್ ಆರೋಪಿಸಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದೆ. ಜೆಡಿಎಸ್ ಟ್ವಿಟ್ಟರ್ನಲ್ಲಿ ತೀಕ್ಷಣವಾಗಿಯೇ ಪ್ರತಿಕ್ರಿಯೆ ಕೊಟ್ಟಿದೆ ಇದಕ್ಕೆ ಕಾರಣವಾಗಿರುವುದು ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಲಿಂಗೈಕ್ಯ ಪೂರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುತ್ಥಳಿಗೆ ಹಾನಿಯಾಗಿರುವುದು.
ಶಿವಕುಮಾರ ಸ್ವಾಮೀಜಿಯ ಪುತ್ಥಳಿಯನ್ನು ಕಿಡಿಗೇಡಿ ವಿರೂಪಗೊಳಿಸಿರುವುದು ಖಂಡನೀಯವಾಗಿದೆ. ಈ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಪರಮಪೂಜ್ಯರ ಪುತ್ಥಳಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಮುಂದುವರಿದು ಕೋಟ್ಯಂತರ ಭಕ್ತರ ಆರಾಧ್ಯ ದೈವರಾದ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೊಸ ಪ್ರತಿಮೆಯನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಅದೇ ಜಾಗದಲ್ಲಿ ಪುನಃ ಪ್ರತಿಷ್ಠಾಪಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.
ಅಲ್ಲದೇ ಇಟಲಿ ಮಾತೆಯ ಆದೇಶವನ್ನು ಶಿರಸಾವಹಿಸಿ ಪಾಲಿಸುವ ಸಿಎಂ ಹಾಗೂ ಡಿಸಿಎಂ ಕರ್ನಾಟಕದ ಮಹನೀಯರ ಬಗ್ಗೆ ಗೌರವವಿರಲಿ. ಮಹಾನ್ ಸಾಧಕರ ಪುತ್ಥಳಿ ಹಾಗೂ ಪ್ರತಿಮೆಗಳಿಗೆ ಸೂಕ್ತ ರಕ್ಷಣೆ ಕಲ್ಪಿಸಿ ಎಂದೂ ಹೇಳಿದೆ.












Click it and Unblock the Notifications