ದಾವಣಗೆರೆ ಜೆಡಿಎಸ್ ಅಭ್ಯರ್ಥಿ ಇನ್ನೂ ನಿಗೂಢ
ದಾವಣಗೆರೆ, ಮಾ. 18 : ದಾವಣಗೆರೆ ಜಿಲ್ಲೆಯಲ್ಲಿ ದುರ್ಗಿ ಜಾತ್ರೆ ಬಿಸಿ ತಣ್ಣಗಾಗಿದ್ದು ಚುನಾವಣಾ ಕಾವು ನಿಧಾನವಾಗಿ ಏರುತ್ತಿದೆ. ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಮತ್ತು ಕಾಂಗ್ರೆಸ್ ನ ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಆದರೆ, ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿಲ್ಲ.
ದಾವಣಗೆರೆ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಜಿಎಂ ಸಿದ್ದೇಶ್ವರ್ ಚನ್ನಗಿರಿ ತಾಲೂಕಿನಲ್ಲಿ ಬುಧವಾರದಿಂದ ಪ್ರಚಾರ ಆರಂಭಿಸಲಿದ್ದಾರೆ ಎಂದು ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ. ತಾಲೂಕಿನಲ್ಲಿ ಗುರುವಾರ ಬಿಜೆಪಿ ಚುನವಣಾ ಕಚೇರಿಯನ್ನು ಆರಂಭಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಈಗಾಗಲೇ ಅಧಿಕೃತವಾಗಿ ಚುನಾವಣೆ ಪ್ರಚಾರ ಆರಂಭಿಸಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುವುದಕ್ಕೂ ಮೊದಲು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶ ನಡೆಸುವ ಮೂಲಕ ಜಿಲ್ಲೆಯ ಕಾರ್ಯಕರ್ತರನ್ನು ಚುನಾವಣೆಗೆ ಸಿದ್ಧಗೊಳಿಸಿದೆ. [ದಾವಣಗೆರೆಯಲ್ಲಿ ಮೋದಿ ಹೇಳಿದ್ದೇನು?]
ತ್ರಿಕೋನ ಸ್ಪರ್ಧೆ ಸಾಧ್ಯತೆ : ದಾವಣಗೆರೆ ಜಿಲ್ಲೆಯಲ್ಲಿ ಈಗಾಗಲೇ ಬಿಜೆಪಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಸಚಿವ ಶಾಮನೂರ ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದೆ. ಆದರೆ, ಜೆಡಿಎಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.
ಸಿದ್ದೇಶ್ವರ್ ಮತ್ತು ಮಲ್ಲಿಕಾರ್ಜುನ್ ಜಿಲ್ಲೆಯಲ್ಲಿ ಬಿರುಸಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಟಿಕೆಟ್ ಗಾಗಿ ಸೈಯದ್ ಸೈುಲ್ಲಾ ಮತ್ತು ಹರಿಹರ ಶಾಸಕ ಎಸ್.ಎಚ್. ಶಿವಶಂಕರ್ ಹೆಸರು ಚಾಲ್ತಿಯಲ್ಲಿದೆ. ಕಾಂಗ್ರೆಸ್ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಹಿಮಾ ಪಟೇಲ್ ಜೆಡಿಎಸ್ ನಿಂದ ಸ್ಪರ್ಧಿಸಬಹುದು ಎಂಬ ಮಾತುಗಳು ಇವೆ.
ಜೆಡಿಎಸ್ ಪಕ್ಷದಿಂದ ಯಾರು ಕಣಕ್ಕೆ ಇಳಿಯಲಿದ್ದಾರೆ? ಎಂಬುದರ ಮೇಲೆ ಪ್ರಬಲ ಎದುರಾಳಿಗಳಾದ ಕಾಂಗ್ರೆಸ್, ಬಿಜೆಪಿಗೆ ಎಷ್ಟು ಲಾಭ, ಎಷ್ಟು ನಷ್ಟ ಎಂಬ ಲೆಕ್ಕಾಚಾರಗಳು ಆರಂಭವಾಗಲಿದೆ. ಮಂಗಳವಾರ ಸಂಜೆ ಅಥವ ಬುಧವಾರ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ದಾವಣಗೆರೆಯ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರ ದೊರೆಯುವ ಸಾಧ್ಯತೆ ಇದೆ.