ಜೆಡಿಎಸ್ಗೆ ರಾಜ್ಯಾಧ್ಯಕ್ಷರು, ನಾಲ್ವರು ಕಾರ್ಯಾಧ್ಯಕ್ಷರ ನೇಮಕ
Recommended Video

ಬೆಂಗಳೂರು, ಜುಲೈ 31 : ಜೆಡಿಎಸ್ ಪಕ್ಷಕ್ಕೆ ಅಧ್ಯಕ್ಷರ ನೇಮಕದ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಆಗಸ್ಟ್ 12ರ ಬಳಿಕ ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.
'ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ನಾನೇ ಮನವಿ ಮಾಡಿದ್ದೇನೆ. ಪಕ್ಷದ ವರಿಷ್ಠರು ಈ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ. ಹೊಸದಾಗಿ ಆಯ್ಕೆಯಾಗುವ ಅಧ್ಯಕ್ಷರು ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮುನ್ನೆಡೆಸಬೇಕು' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಎಚ್.ಡಿ.ದೇವೇಗೌಡರು ತೀರ್ಮಾನಿಸಿದ್ದಾರೆ. ಆಗಸ್ಟ್ 12ರ ಬಳಿಕ ಈ ಕುರಿತು ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಎಚ್.ವಿಶ್ವನಾಥ್ ಅಧ್ಯಕ್ಷ? : ಮಾಜಿ ಸಚಿವ, ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗುವ ಸಾಧ್ಯತೆ ಇದೆ. ವಿಶ್ವನಾಥ್ ಅವರು 2018ರ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಇರುವಾಗ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದರು. ಹುಣಸೂರು ಕ್ಷೇತ್ರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಕುರುಬ ಸಮುದಾಯಕ್ಕೆ ಸೇರಿದ ವಿಶ್ವನಾಥ್ ಅವರು ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟ ಸೇರಲು ಬಯಸಿದ್ದರು. ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಚಿವ ಸ್ಥಾನ ಸಿಗಲಿಲ್ಲ ಎಂಬ ಅಸಮಾಧಾನವನ್ನು ಬಗೆಹರಿಸಲು ದೇವೇಗೌಡರು ಮುಂದಾಗಿದ್ದಾರೆ.
2018ರ ಚುನಾವಣೆಯಲ್ಲಿ ಸೋತ ಮಧು ಬಂಗಾರಪ್ಪ, ಪಿ.ಜಿ.ಆರ್.ಸಿಂಧ್ಯಾ, ವೈ.ಎಸ್.ವಿ.ದತ್ತಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಆಗಸ್ಟ್ 12ರ ಬಳಿಕ ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಹೆಸರು ಪ್ರಕಟಿಸುವ ಸಾಧ್ಯತೆ ಇದೆ.












Click it and Unblock the Notifications