ರಾಜ್ಯಸಭೆ ಚುನಾವಣೆಗೆ ಕನ್ನಡಿಗರಿಗೆ ಟಿಕೆಟ್ : ಎಚ್ಡಿಕೆ
ಬೆಂಗಳೂರು, ಮೇ 27 : 'ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ಕನ್ನಡಿಗರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗುತ್ತದೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ನಗರದ ಹೊರವಲಯದ ರೆಸಾರ್ಟ್ನಲ್ಲಿ ಗುರುವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. 40 ಶಾಸಕರ ಪೈಕಿ 35 ಶಾಸಕರು ಸಭೆಗೆ ಹಾಜರಾಗಿದ್ದರು. ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. [ಕಾಂಗ್ರಸ್ಸಿಗೆ ಬೆಂಬಲ ಘೋಷಿಸಿದ ಜಮೀರ್ ಅಂಡ್ ಟೀಮ್]

ಸಭೆಯ ಬಳಿಕ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ. ಮೇ 29ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ' ಎಂದು ಹೇಳಿದರು. [ಕರ್ನಾಟಕದಿಂದ ರಾಜ್ಯಸಭೆಗೆ ಮತ್ತೆ ಎಂ ವೆಂಕಯ್ಯನಾಯ್ಡು]
ಕನ್ನಡಿಗ ಅಭ್ಯರ್ಥಿ ಆಯ್ಕೆ : 'ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ತಮಗೆ ರಾಜ್ಯಸಭೆ ಟಿಕೆಟ್ ನೀಡುವಂರೆ ಮನವಿ ಮಾಡಿದ್ದಾರೆ. ಅಲಿ ಅವರು ಬಿಹಾರ ರಾಜ್ಯಕ್ಕೆ ಸೇರಿದವರು. ಕರ್ನಾಟದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ' ಎಂದು ಹೇಳಿದರು. [#VenkayyaSakayya ಎಂದ ರೊಚ್ಚಿಗೆದ್ದ ಕನ್ನಡಿಗರು]
ಐವರು ಗೈರು : ಶಾಸಕಾಂಗ ಪಕ್ಷದ ಸಭೆಗೆ ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ) ಗೈರು ಹಾಜರಾಗಿದ್ದರು.
'ಶಾಸಕರು ತುರ್ತು ಕೆಲಸದ ಮೇಲೆ ತೆರಳಿದ್ದಾರೆ. ಎಲ್ಲರೂ ಬಂದ ಬಳಿಕ ಅವರ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್.ಡಿ.ದೇವೇಗೌಡರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ' ಎಂದು ಕುಮಾರಸ್ವಾಮಿ ತಿಳಿಸಿದರು.
ಅಂದಹಾಗೆ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 31 ಕೊನೆ ದಿನ. ಬಿಜೆಪಿ ಈಗಾಗಲೇ ವೆಂಕಯ್ಯ ನಾಯ್ಡು ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಕಾಂಗ್ರೆಸ್ ನಾಯಕರು ಪಟ್ಟಿ ಹಿಡಿದುಕೊಂಡು ದೆಹಲಿ ವಿಮಾನ ಹತ್ತಿದ್ದಾರೆ. ಕಾಂಗ್ರೆಸ್ ಪಟ್ಟಿ ಬಿಡುಗಡೆ ಆದ ಬಳಿಕ ಜೆಡಿಎಸ್ ತನ್ನ ಪಟ್ಟಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ.












Click it and Unblock the Notifications