ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ?, ಮೌನ ಮುರಿದ ಗೌಡರು!
Recommended Video
ಬೆಂಗಳೂರು, ಆಗಸ್ಟ್ 06 : 'ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳವುದಿಲ್ಲ. ಎರಡೂ ಪಕ್ಷಗಳು ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸಲಿವೆ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಎಚ್.ಡಿ.ದೇವೇಗೌಡರು, 'ಕಾಂಗ್ರೆಸ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲಾಗುತ್ತದೆ. ಸ್ನೇಹಯುತವಾದ ಸ್ಪರ್ಧೆಯೇ ನಮ್ಮ ನಡುವೆ ಇರುತ್ತದೆ' ಎಂದು ಸ್ಪಷ್ಟಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕ
ಕಳೆದ ವಾರ ಕಾಂಗ್ರೆಸ್ ಸಹ ಜೆಡಿಎಸ್ ಜೊತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಚುನಾವಣೆ ಮುಗಿದ ಬಳಿಕ ಅಗತ್ಯವಿದ್ದರೆ ಮೈತ್ರಿ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಸ್ಪಷ್ಟಪಡಿಸಿತ್ತು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಮೈತ್ರಿ, ಕಾಂಗ್ರೆಸ್ ಹೇಳಿದ್ದೇನು?
ರಾಜ್ಯ ಚುನಾವಣಾ ಆಯೋಗ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕವನ್ನು ಈಗಾಗಲೇ ಘೋಷಣೆ ಮಾಡಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಪಕ್ಷಗಳು ಈ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತವೆ ಎಂದು ನಿರೀಕ್ಷಿಸಲಾಗಿತ್ತು. ಆಗಸ್ಟ್ 29ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಸೆಪ್ಟರಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.
ಸ್ಥಳೀಯ ಸಂಸ್ಥೆಗಳ ವಿಷಯ ಬೇರೆ
'ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬೇರೆ ವಿಷಯಗಳ ಸ್ಪರ್ಧೆ ನಡೆಯಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಪೈಪೋಟಿ ಇದೆ. ನಾವು ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಸಹಾಯಕವಾಗಲಿದೆ' ಎಂದು ದೇವೇಗೌಡರು ಹೇಳಿದರು.
'ಕಾಂಗ್ರೆಸ್ ಪಕ್ಷಕ್ಕೆ ಹೋಲಿಕೆ ಮಾಡಿದರೆ ಜೆಡಿಎಸ್ ಸ್ಥಳೀಯ ಮಟ್ಟದಲ್ಲಿ ಹೆಚ್ಚು ಪ್ರಬಲವಾಗಿದೆ. ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಪಕ್ಷದ ಸಂಘಟನೆಗೆ ಧಕ್ಕೆಯಾಗಲಿದೆ' ಎಂದು ತಿಳಿಸಿದರು.
ದಿನೇಶ್ ಗುಂಡೂರಾವ್ ಭೇಟಿ
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಅವರು ದೇವೇಗೌಡರನ್ನು ಭೇಟಿಯಾಗಿದ್ದರು. ಆಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದೆ.
ದಿನೇಶ್ ಗುಂಡೂರಾವ್ ಅವರ ಜೊತೆಗೆ ಸಭೆ ನಡೆಸಿದ ಬಳಿಕ ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಘೋಷಣೆ ಮಾಡಿದ್ದಾರೆ.
ಮೈತ್ರಿ ಇಲ್ಲ ಎಂದು ಹೇಳಿತ್ತು ಕಾಂಗ್ರೆಸ್
ಕಾಂಗ್ರೆಸ್ ಸಹ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
'ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಅಗತ್ಯವಿದ್ದರೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಿ. ಮೈತ್ರಿ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ಸ್ಥಳೀಯ ನಾಯಕರಿಗೆ ಸೇರಿದ್ದು' ಎಂಬ ಸಂದೇಶವನ್ನು ಕೆಪಿಸಿಸಿ ಸ್ಥಳೀಯ ನಾಯಕರಿಗೆ ಈಗಾಗಲೇ ಕಳುಹಿಸಿ ಕೊಟ್ಟಿದೆ.
ಆಗಸ್ಟ್ 29ರಂದು ಮತದಾನ
ರಾಜ್ಯ ಚುನಾವಣಾ ಆಯೋಗ ಮೊದಲ ಹಂತದಲ್ಲಿ 29 ನಗರ ಸಭೆ (927 ವಾರ್ಡ್), 53 ಪುರಸಭೆ (1247 ವಾರ್ಡ್), 23 ಪಟ್ಟಣ ಪಂಚಾಯಿತಿ (400 ವಾರ್ಡ್)ಗಳು ಸೇರಿ 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದೆ.
ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಆಗಸ್ಟ್ 29ರಂದು ಮತದಾನ ನಡೆಯಲಿದೆ. ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ. 25 ಹಿರಿಯ ಐಎಎಸ್ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.