ಡಾಕ್ಟ್ರು ಸೇರಿ ಜೆಡಿಎಸ್ ನಾಲ್ಕು ಸೋಲುತ್ತೆ; ಒಂದೂ ಸ್ಥಾನವನ್ನೂ ಗೆಲ್ಲುವುದಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್ 10: ದೇವೇಗೌಡರು ನಾಲ್ಕು ಸೀಟ್ ಬಗ್ಗೆ ಹೇಳುತ್ತಾ ಇದ್ದಾರೆ. ಒಂದು ಸ್ಥಾನವೂ ಗೆಲ್ಲುವುದಿಲ್ಲ. ಬಿಜೆಪಿಯ ಸೀಟನ್ನು ಜೆಡಿಎಸ್ ಸೀಟ್ ಎಂದು ಹೇಳುತ್ತಿದ್ದಾರೆ. ಮಂಜುನಾಥ್ ಅವರು ಈ ತೀರ್ಮಾನ ನನ್ನದಲ್ಲ ಅವರಿಬ್ಬರದೇ ಎಂದಿದ್ದಾರೆ. ಜೆಡಿಎಸ್ ನಾಲ್ಕು ಸ್ಥಾನ ಸೋಲುತ್ತೆ, ಒಂದೂ ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಮಂಡ್ಯದಲ್ಲಿ ಸುಮಲತಾ ಆದಿಯಾಗಿ ಎಲ್ಲರೂ ಒಂದಾಗಿರುವ ಕಾರಣ ಕುಮಾರಸ್ವಾಮಿ ಗೆಲ್ಲುತ್ತಾರೆ, ಕೇಂದ್ರ ಸಚಿವರಾಗುತ್ತಾರೆ ಎಂಬ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಸಚಿವರೂ ಆಗಲಿ, ಇನ್ನು ಏನಾದರೂ ದೊಡ್ಡದು ಸಿಕ್ಕರೂ ಸಿಗಲಿ, ಒಳ್ಳೆಯದಾಗಲಿ. ನಾವು ಕುಮಾರಸ್ವಾಮಿ ಅವರಿಗೆ ಕೇವಲ ಶುಭಾಶಯ ಕೋರುವವರು ಮಾತ್ರ ಎಂದರು.

ಕುಮಾರಸ್ವಾಮಿ ಅವರ ತೋಟದಮನೆ ಭೋಜನ ಕೂಟದ ಕುರಿತು ಮಾತನಾಡಿ, ಕುಮಾರಸ್ವಾಮಿ ಅವರು ಈಗಲಾದರೂ ಮುಂದೆ ಬಂದು ಜನರಿಗೆ ಊಟ ಹಾಕುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಏನೂ ಮಾಡಲಿಲ್ಲ. ಈಗಲಾದರೂ ಮಾಡುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಬಗ್ಗೆ ಚುನಾವಣಾ ಆಯೋಗ ತಲೆಕೆಡಿಸಿಕೊಳ್ಳಬೇಕು. ಚುನಾವಣಾ ಆಯೋಗ ನಿಜವಾಗಲೂ ಕಾರ್ಯಪ್ರವೃತ್ತವಾಗಿದ್ದರೆ ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ತಯಾರಿ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ತಲೆಕೆಡಿಸಿಕೊಂಡಿದೆಯೇ ಎಂದು ಕೇಳಿದಾಗ, ನಮ್ಮ ಪಕ್ಷದ ಮೊದಲ ಗೆಲುವು ನಮ್ಮ ಪಕ್ಷದ ಒಗ್ಗಟ್ಟು, ಅವರ ಮೊದಲ ಸೋಲು ಅವರ ಪಕ್ಷದಲ್ಲಿನ ಭಿನ್ನಮತ. ಇನ್ನು ಅವರ ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದ್ದು ಸೋಲುವ ಕಾರಣಕ್ಕೆ 15 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ. ಇದು ಕಮಲ ಬಾಡುತ್ತಿರುವುದಕ್ಕೆ ಸಾಕ್ಷಿ ಎಂದರು.
ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರು ಬಿಜೆಪಿಗಿಂತ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಕುರಿತು ಮಾತನಾಡಿ, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾರ್ಯಕರ್ತರ ಮಧ್ಯೆ ಭಿನ್ನಾಭಿಪ್ರಾಯವಿದೆ. ಕುಮಾರಸ್ವಾಮಿ ತಮ್ಮ ಸರ್ಕಾರ ಬೀಳಿಸಿದವರ ಜತೆ ಕೈಜೋಡಿಸಿ ಕಾರ್ಯಕರ್ತರಿಗೆ ಅಪಮಾನ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಎಐಸಿಸಿ ಅಧ್ಯಕ್ಷರ ರಾಜ್ಯ ಪ್ರವಾಸದ ಬಗ್ಗೆ ನಿರ್ಧಾರ ಚರ್ಚೆ ಮಾಡಿ ರಾಜ್ಯದಲ್ಲಿನ ಚುನಾವಣಾ ತಯಾರಿ ಬಗ್ಗೆ ವರದಿ ಸಲ್ಲಿಕೆ ಮಾಡಿದ್ದೇನೆ. ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ. ನಾನು ಕೂಡ ಅಂದು ಕಲಬುರ್ಗಿಗೆ ತೆರಳುತ್ತಿದ್ದೇನೆ. ಕೋಲಾರ ಸೇರಿದಂತೆ ಕೆಲವು ಭಾಗಗಳಿಗೆ ಭೇಟಿ ನೀಡಲು ದಿನಾಂಕಗಳನ್ನು ನೀಡಿದ್ದಾರೆ. ನಾವು ಅದರ ಆಧಾರದ ಮೇಲೆ ಅಂತಿಮ ತೀರ್ಮಾನ ಮಾಡುತ್ತೇವೆ.
ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷ ದಿಂಗಾಲೇಶ್ವರ ಸ್ವಾಮೀಜಿಗಳನ್ನು ಪರೋಕ್ಷವಾಗಿ ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ಬೆಂಬಲಿಸುವುದಾದರೇ ನೇರವಾಗಿಯೇ ಬೆಂಬಲ ನೀಡುತ್ತೇವೆ. ಪರೋಕ್ಷವಾಗಿ ಯಾಕೆ ಬೆಂಬಲಿಸೋಣ. ನಾವು ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿ ಬಿ ಫಾರಂ ನೀಡಿದ್ದೇವೆ. ಸ್ವಾಮೀಜಿಗಳು ಮುಂಚಿತವಾಗಿ ಈ ನಿರ್ಧಾರ ಮಾಡಿದ್ದರೆ ವಿಚಾರ ಬೇರೆ ಆಗುತ್ತಿತ್ತು. ನಮ್ಮ ಅಭ್ಯರ್ಥಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ನಮಗೆ ಶ್ರೀಗಳ ಬಗ್ಗೆ ಗೌರವವಿದೆ. ಅವರು ಸದಾ ಜಾತ್ಯಾತೀತ ತತ್ವದ ಮೇಲೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಮ್ಮ ಅಭ್ಯರ್ಥಿ ಕೂಡ ಸೌಮ್ಯ ಸ್ವಭಾವದವರಾಗಿದ್ದಾರೆ".
ಮೈತ್ರಿ ಸರ್ಕಾರ ಪತನ ವಿಚಾರದಲ್ಲಿ ನಿಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಗ್ಗೆ ಮಾತನಾಡಿ, ವಿಚಾರವಾಗಿ ನನ್ನ ವಿರುದ್ದ ಆರೋಪ ಮಾಡಿದರೆ ಅದನ್ನು ಜನ ಒಪ್ಪುವುದಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ, ಉಪಮುಖ್ಯಮಂತ್ರಿ. ನಮ್ಮ ಸಮಾಜ ಹಾಗೂ ರಾಜ್ಯದ ಜನರಿಗೆ ಅಧಿಕಾರದಲ್ಲಿದ್ದಾಗ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ. ನಮ್ಮ ಜನಕ್ಕೆ, ಸಮಾಜಕ್ಕೆ ಸಹಾಯ ಮಾಡಬೇಕು. ಮಠಕ್ಕೆ ಸೇರಿದಂತೆ ಇನ್ನು ಏನೇನು ಸಹಾಯ ಮಾಡಬಹುದು ಎಂದು ಯೋಚನೆ ಮಾಡುತ್ತೇವೆ.
ಕುಮಾರಸ್ವಾಮಿ ಅವರು ದೂರದ ಬೆಟ್ಟ ಬಗ್ಗೆ ಅಂದರೆ ಇನ್ನು ನಾಲ್ಕು ವರ್ಷ ಎರಡು ತಿಂಗಳು ಆದ ನಂತರದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಏನು ಮಾಡಿತು. ಬರ ಪರಿಹಾರದ ಬಗ್ಗೆ ಇವರು ದನಿ ಎತ್ತಿದ್ದಾರಾ? ಶೋಭಕ್ಕ ಏನು ಮಾಡಿದರು? ಯಾರಾದರೂ ಒಬ್ಬರು ಬರ ಪರಿಹಾರ, ಮೇಕೆದಾಟು, ಮಹದಾಯಿ ವಿಚಾರವಾಗಿ ಮಾತನಾಡಿದ್ದಾರಾ?" ಎಂದು ಪ್ರಶ್ನಿಸಿದರು.












Click it and Unblock the Notifications