ಜಿಂದಾಲ್ ವಿವಾದ : ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಯಡಿಯೂರಪ್ಪ
Recommended Video
ಬೆಂಗಳೂರು, ಜೂನ್ 18 : ಜಿಂದಾಲ್ಗೆ 3,667 ಎಕರೆ ಭೂಮಿ ನೀಡುವ ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ಜಿಂದಾಲ್ನಿಂದ 20 ಕೋಟಿ ರೂ. ಕಿಕ್ ಬ್ಯಾಕ್ ಅನ್ನು ಚೆಕ್ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದರು.
ಈ ಆರೋಪಕ್ಕೆ ಯಡಿಯೂರಪ್ಪ ಅವರು ಟ್ವೀಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 'ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಹೊಣೆಗೇಡಿತನದಿಂದ ಮಾತನಾಡುವುದು ಸರಿಯಲ್ಲ. ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ' ಎಂದು ಹೇಳಿದ್ದಾರೆ.
ಜಿಂದಾಲ್ಗೆ 3,667 ಎಕರೆ ಭೂಮಿ ನೀಡಬಾರದು ಎಂದು ಬಿಜೆಪಿ ಎರಡು ದಿನಗಳ ಅಹೋರಾತ್ರಿ ಧರಣಿ ನಡೆಸಿತ್ತು. ಭಾನುವಾರ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಕುಮಾರಸ್ವಾಮಿ ಹೇಳಿದ್ದೇನು?
ತಮ್ಮ ಸ್ವ ಕ್ಷೇತ್ರ ಚನ್ನಪಟ್ಟಣದಲ್ಲಿ ಮಾತನಾಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, 'ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ಕಂಪನಿಯೊಂದಿಗೆ ಲೀಸ್ ಡೀಡ್ ಮಾಡಿಕೊಂಡಿದ್ದು ಯಡಿಯೂರಪ್ಪ, ಅವರೇ ಈಗ ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ' ಎಂದು ಹೇಳಿಕೆ ನೀಡಿದ್ದರು.

20 ಕೋಟಿ ಕಿಕ್ ಬ್ಯಾಕ್
'ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್ನಿಂದ 20 ಕೋಟಿ ರೂ. ಚೆಕ್ ಕಿಕ್ ಬ್ಯಾಕ್ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳುವ ಮೂಲಕ ಹಳೆಯ ಪ್ರಕರಣವನ್ನು ಕೆದಕಿದ್ದರು.

ರಾಜಕೀಯ ಮಾಡುವ ಅಗತ್ಯವಿಲ್ಲ
ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಯಡಿಯೂರಪ್ಪ ಅವರು ದಿಟ್ಟ ತಿರುಗೇಟು ನೀಡಿದ್ದಾರೆ. 'ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯ ನನಗಿಲ್ಲ. ಜಿಂದಾಲ್ಗೆ ಭೂಮಿ ಪರಭಾರೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರು ತೀರ್ಮಾನ ಮಾಡುವುದು ಇಲ್ಲ' ಎಂದು ಯಡಿಯೂರಪ್ಪ ಹೇಳಿದ್ದಾರೆ.

ಎಲ್ಲಾ ಆರೋಪಗಳಿಂದ ಮುಕ್ತನಾಗಿದ್ದೇನೆ
'ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವಂತೆ ಹಗುರವಾಗಿ ಮಾತಾಡಬೇಡಿ' ಎಂದು ಟ್ವೀಟರ್ ಮೂಲಕ ಯಡಿಯೂರಪ್ಪ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.












Click it and Unblock the Notifications