ಜಿಂದಾಲ್ ವಿವಾದ : 4 ಸಚಿವರ ಸಂಪುಟ ಉಪ ಸಮಿತಿ ರಚನೆ
ಬೆಂಗಳೂರು, ಜೂನ್ 26 : ಜಿಂದಾಲ್ಗೆ ಭೂಮಿ ನೀಡುವ ವಿಚಾರದ ಕುರಿತು ಪರಿಶೀಲನೆ ನಡೆಸಲು ಕರ್ನಾಟಕ ಸರ್ಕಾರ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿದೆ. 3,667 ಎಕರೆ ಭೂಮಿ ನೀಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಬುಧವಾರ ನಾಲ್ವರು ಸಚಿವರ ಸಂಪುಟ ಉಪ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಸಮಿತಿಯ ಅಧ್ಯಕ್ಷರು.
ಸರ್ಕಾರ ರಚನೆ ಮಾಡಿರುವ ಸಮಿತಿಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಬಂಡೆಪ್ಪ ಕಾಶೆಂಪುರ, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಇದ್ದಾರೆ. ಎಂ.ಬಿ.ಪಾಟೀಲ್ ಅಧ್ಯಕ್ಷತೆಯ ಸಮಿತಿ ಜಿಂದಾಲ್ಗೆ ಭೂಮಿ ನೀಡುವ ವಿಚಾರದ ಕುರಿತು ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ.
ಜಿಂದಾಲ್ಗೆ ಭೂಮಿ ನೀಡುವ ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆದಿತ್ತು. ಕಿಕ್ ಬ್ಯಾಕ್ ಪಡೆದು ಭೂಮಿ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡಿತ್ತು. ಕಾಂಗ್ರೆಸ್ ಪಕ್ಷದ ಕೆಲವು ನಾಯಕರು ಸಹ ಭೂಮಿ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು....

ಉಪ ಸಮಿತಿ ಅಧ್ಯಕ್ಷರು ಹೇಳುವುದೇನು?
ಸಂಪುಟ ಉಪ ಸಮಿತಿಗೆ ಅಧ್ಯಕ್ಷರಾಗಿ ನೇಮಕವಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ.ಪಾಟೀಲ್ ಅವರು, 'ನಾನು ಸಭೆಯಲ್ಲಿದ್ದಾಗ ವಾಟ್ಸಪ್ ಮೂಲಕ ಮಾಹಿತಿ ಸಿಕ್ಕಿತು. ಇದು ಸೂಕ್ಷ್ಮವಾದ ವಿಚಾರ. ಈ ಬಗ್ಗೆ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಹೇಳಿದರು.

ಬಿಜೆಪಿ ತೀವ್ರ ವಿರೋಧ
ಬಿಜೆಪಿ ಜಿಂದಾಲ್ಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಭೂಮಿ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸರ್ಕಾರ ಕಿಕ್ ಬ್ಯಾಕ್ ಪಡೆದು ಭೂಮಿಯನ್ನು ಮಾರಾಟ ಮಾಡುತ್ತಿದೆ ಎಂದು ಆರೋಪಿಸುತ್ತಿದೆ. ಸರ್ಕಾರದ ತೀರ್ಮಾನದ ವಿರುದ್ಧ ಅಹೋರಾತ್ರಿ ಧರಣಿಯನ್ನು ನಡೆಸಿತು.

ಸಂಪುಟ ಉಪ ಸಮಿತಿ ರಚನೆ
ಜಿಂದಾಲ್ಗೆ ಭೂಮಿ ನೀಡುವ ವಿಚಾರ ವಿವಾದಕ್ಕೆ ಕಾರಣವಾದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದರು. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮತ್ತೊಮ್ಮೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು.

ಏನಿದು ಜಿಂದಾಲ್ ವಿವಾದ?
ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ ಹಾಗೂ ಸಂಡೂರು ತಾಲೂಕಿನ ಮುಸೇ ನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿ 1666 ಎಕರೆ ಸೇರಿ ಒಟ್ಟು 3667 ಎಕರೆ ಭೂಮಿಯನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಯಪತ್ರ ಮಾಡಿ ಜಿಂದಾಲ್ಗೆ ನೀಡಲು ತೀರ್ಮಾನ ಕೈಗೊಂಡಿದೆ.












Click it and Unblock the Notifications