Get Updates
Get notified of breaking news, exclusive insights, and must-see stories!

ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ: ಮಹತ್ವದ ಮಾಹಿತಿ ಕೊಟ್ಟ ಈಶ್ವರ್‌ ಖಂಡ್ರೆ

ಬೆಂಗಳೂರು, ಸೆಪ್ಟೆಂಬರ್‌ 20: ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿ ಹಲವು ನಿರ್ಬಂಧಗಳನ್ನು ಜಾರಿಗೆ ತರುವ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರಲಾಗುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಈ ಹಿಂದೆ ಹೇಳಿಕೆ ನೀಡಿದ್ದು, ಇದೀಗ ಕಸ್ತೂರಿ ರಂಗನ್‌ ವರದಿ ಜಾರಿಗೆ ಸರ್ಕಾರ ಸಮ್ಮತಿ ನೀಡಿದೆ.

ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ.

K Kasturi Rangan Report On Western Ghats Agreed To Implement In Karnataka Says Eshwar Khandre

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆಯ ಬಳಿಕ ಸಚಿವ ಈಶ್ವರ್‌ ಖಂಡ್ರೆ ಅವರು ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.

ಗುರುವಾರ ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಈಶ್ವರ್‌ ಖಂಡ್ರೆ ಅವರು ತಿಳಿಸಿದರು.

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಹಾಲಿ ಇರುವ 16114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದೆ ಹೀಗಾಗಿ ನಾಳೆಯ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.

ವಿಶೇಷ ಪ್ಯಾಕೇಜ್ ಗೆ ಒತ್ತಾಯ

ಈಗಾಗಲೇ ಇರುವ 16114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬ ಒತ್ತಾಯ ಮಾಡಬಹುದು ಎಂದು ತಾವು ಸಲಹೆ ನೀಡಿರುವುದಾಗಿ ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದರು.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದೂ ಆಗಿದೆ. ಆದ ಕಾರಣ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದರು.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ

ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು.

ರಾಜೇಗೌಡರ ಮನವಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾಸಕ ರಾಜೇಗೌಡರು 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರ ಜೀವನೋಪಾಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಲು ಮನವಿ ಮಾಡಿರುತ್ತಾರೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇನ್ನೂ ಗುರುವಾರ ನಡೆದ ಸಭೆಯಲ್ಲಿ ಸಚಿವರುಗಳಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರುಗಳಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+