ಕಲಬುರಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳು
ಕಲಬುರಗಿ, ನ.28 : ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುದಾನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.
ಶುಕ್ರವಾರ ರಾಜ್ಯ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಯಿತು. ವಸತಿ ಸಚಿವ ಅಂಬರೀಶ್ ಹೊರತು ಪಡಿಸಿ ಉಳಿದ ಸಚಿವರು ಕಲಬುರಗಿ ಮಿನಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು.
ಸರ್ಕಾರ ಬಜೆಟ್ನಲ್ಲಿ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ 600 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿತ್ತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅದನ್ನು 1000 ಕೋಟಿ ರೂ.ಗಳಿಗೆ ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಸಿಎಂ ಹೇಳಿದರು. [ಸಚಿವ ಸಂಪುಟ ಸಭೆಗೆ ಅಂಬರೀಶ್ ಗೈರು]

ಸಚಿವ ಸಂಪುಟ ಸಭೆಯ ನಿರ್ಣಯಗಳು ಇಲ್ಲಿವೆ
* 2014-15ನೇ ಸಾಲಿನಿಂದ ಹೈದ್ರಾಬಾದ್-ಕರ್ನಾಟಕ ಭಾಗದ ಆಯ್ದ 250 ಗ್ರಾಮ ಪಂಚಾಯಿತಿಗಳಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ರೂ.50 ಕೋಟಿಯ ಅನುದಾನದಿಂದ ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡಿ ಜ್ಞಾನ ಕೇಂದ್ರಗಳನ್ನು ತೆರೆಯಲಾಗುವುದು.
* ಕಲಬುರಗಿ ಜಿಲ್ಲೆಯ ಸೇಡಂನಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಮಟ್ಟದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ. 696.50 ಲಕ್ಷಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ತಯಾರಿಸಿರುವ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
* ಬಳ್ಳಾರಿಯ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 7.04 ಕೋಟಿಗಳ ಪರಿಷ್ಕೃತ ಹೆಚ್ಚುವರಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.
* ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹಿಪ್ಪರಗಾ-ಕೋನಾ-ಸರಡಗಿ(ಬಿ) ಮಧ್ಯದಲ್ಲಿ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ. 52.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಒಪ್ಪಿಗೆ.
* ಹಟ್ಟಿ ಚಿನ್ನದ ಗಣಿ ಕಂಪನಿಗೆ ರಾಯಚೂರು ಜಿಲ್ಲೆ, ದೇವದುರ್ಗ ತಾಲ್ಲೂಕು, ಊಟಿ ಗ್ರಾಮದ ಸ.ನಂ. 38/3 ರಲ್ಲಿ 6.38 ಹೆಕ್ಟೇರ್ (15.31 ಎಕರೆ) ಜಮೀನನ್ನು ಗಣಿ ಅನ್ವೇಷಣೆಗಾಗಿ ಗುತ್ತಿಗೆ ಆಧಾರದ ಮೇಲೆ ಮಂಜೂರು.

* ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಉದ್ದೇಶಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣಕ್ಕಾಗಿ ಯಾದಗಿರಿ ತಾಲ್ಲೂಕಿನ ಮುದ್ನಾಳ ಗ್ರಾಮದ ಸ.ನಂ. 24ರಲ್ಲಿ 17.20 ಎಕರೆ ಹಾಗೂ ಸ.ನಂ. 28/1ರಲ್ಲಿ 13.18 ಎಕರೆ (ಒಟ್ಟು 30.38 ಎಕರೆ) ಜಮೀನು ನೀಡಲು ಒಪ್ಪಿಗೆ.
* ಕಲಬುರಗಿಯಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ರೂ. 7.05 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ಒಪ್ಪಿಗೆ.
* ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಲಿಂಗನಬಂಡಿ ಗ್ರಾಮದಲ್ಲಿ ರೂ. 9.23 ಕೋಟಿಗಳ ಅಂದಾಜು ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ನಿರ್ಮಿಸಲು ಒಪ್ಪಿಗೆ.
* ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಂಕೀರ್ಣವನ್ನು ರೂ. 9.17 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಕುದುರೆಮೋತಿ ಗ್ರಾಮದಲ್ಲಿ ನಿರ್ಮಿಸಲು ಒಪ್ಪಿಗೆ.

* ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಬೆಳ್ಳೋಟಗಿ ಗ್ರಾಮದಲ್ಲಿ 9.98 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ.
* ಕಲಬುರಗಿಯ ಸೇಡಂ ರಸ್ತೆಯಲ್ಲಿ ನಿರ್ಮಿಸಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ರೂ.650 ಲಕ್ಷಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಮತ್ತು ಕಲಬುರಗಿ ವಿಶ್ವವಿದ್ಯಾಲಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನಕ್ಕೆ 10 ಲಕ್ಷ ಬಿಡುಗಡೆ.
* ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಮಸ್ಕಿ ಗ್ರಾಮದಲ್ಲಿ ರೂ.8 ಕೋಟಿಗಳ ಅಂದಾಜು ವೆಚ್ಚದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ.
* ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿ ಕೊಪ್ಪಳ ತಾಲ್ಲೂಕು, ಕವಲೂರು ಗ್ರಾಮದಲ್ಲಿ ರೂ. 8 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ. [ಸಚಿವ ಸಂಪುಟ ಸಭೆಯ ನಿರ್ಣಯಗಳಿಗಳನ್ನು ಇಲ್ಲಿ ಓದಿ]












Click it and Unblock the Notifications